ಕೊಡಗು ಪ್ರವಾಹ: ವೈಮಾನಿಕ ಕಾರ್ಯಾಚರಣೆಗೆ ಸಿಎಂ ಸೂಚನೆ
ಮಡಿಕೇರಿ,ಆಗಸ್ಟ್ 16: ರಾಜ್ಯದ ಹಲವು ಜಿಲ್ಲೆಗಳಲ್ಲಿ ಉದ್ಭವಿಸಿರುವ ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಕ್ಕೆ ವೈಮಾನಿಕ ಕಾರ್ಯಾಚರಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆಯೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ.
ಗುರುವಾರ ಬೆಳಗ್ಗೆ ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದ ಕುಮಾರಸ್ವಾಮಿ ಕೊಡಗು ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿರುವ ಜನರನ್ನು ಬೇರೆಗೆಗೆ ಸ್ಥಳಾಂತರಿಸಲು ಹಾಗೂ ಬೆಂಗಳೂರು , ಮಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್ನಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕೇಂದ್ರ ವಿಮಾನಯಾನ ಇಲಾಖೆಯೊಂದಿಗೆ ಚರ್ಚೆ ನಡೆಸಿ ಹೆಲಿಕ್ಯಾಪ್ಟರ್ ಮೂಲಕ ವೈಮಾನಿಕ ಕಾರ್ಯಾಚರಣೆ ನಡೆಸುವಂತೆ ಸೂಚಿಸಿದರು.
ಹಟ್ಟಿಹೊಳೆ ಬಳಿಯ ಗ್ರಾಮದ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಲೋಕೋಪಯೋಗಿ ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದು, ಅಲ್ಲಿನ ಜನರನ್ನು ಸ್ಥಳಾಂತರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕೊಡಗಿನಲ್ಲಿ ಲೋಕೋಪಯೋಗಿ ಸಚಿವ ರೇವಣ್ಣ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಮೊಕ್ಕಾಮ್ ಹೂಡಿದ್ದು ಪ್ರವಾಹದಲ್ಲಿ ಸಿಲುಕಿದ ಜನರ ರಕ್ಷಣೆಗೆ ಕ್ರಮ ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಖುದ್ದು ಮಾತನಾಡಿದ್ದು ವಸ್ತುಸ್ಥಿತಿಯ ಕುರಿತು ಮಾಹಿತಿ ಪಡೆದಿದ್ದಾರೆ. ಸಾರ್ವಜನಿಕರಿಗೆ ನೆರವು ನೀಡಲು, ಅಗತ್ಯ ಬಿದ್ದಲ್ಲಿ ಗಂಜಿ ಕೇಂದ್ರ ತೆರೆಯಲು ಹಾಗೂ ಇತರ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳು ಕೂಡಲೇ ಜಿಲ್ಲೆಗಳಿಗೆ ತೆರಳುವಂತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಈ ಜಿಲ್ಲೆಗಳಲ್ಲಿ ಯೇ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.
ಮಡಿಕೇರಿ ಜಿಲ್ಲೆಯ ಬದಿಗೆರೆಯಲ್ಲಿ ಪ್ರಾಣ ರಕ್ಷಣೆಗಾಗಿ ಗುಡ್ಡ ಹತ್ತಿರುವ 300ಕ್ಕೂ ಹೆಚ್ಚು ಮಂದಿಯನ್ನು ಕೂಡಲೇ ಹೆಲಿಕಾಪ್ಟರ್ ಮೂಲಕ ರಕ್ಷಿಸಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ಬದಿಗೆರೆ ಸಮೀಪದ ಹತ್ತಿಹೊಳೆ ತುಂಬಿದ್ದರಿಂದ ಆತಂಕಗೊಂಡಿರುವ ನೂರಾರು ಮಂದಿ ಊರಿನ ಗುಡ್ಡವನ್ನು ಏರಿ ರಕ್ಷಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಆ ಗುಡ್ಡವೂ ಕುಸಿಯುವ ಲಕ್ಷಣ ಕಂಡುಬಂದಿದೆ. ಈ ಬಗ್ಗೆ ವರದಿ ತರಿಸಿಕೊಂಡಿರುವ ಮುಖ್ಯಮಂತ್ರಿಗಳು ಈ ಕೂಡಲೇ ಅಲ್ಲಿಗೆ ಧಾವಿಸಲು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.












Click it and Unblock the Notifications