ಕೊರೊನಾ ನಿಯಮ ಪಾಲಿಸದಿದ್ದರೆ ಜೈಲೂಟ ಗ್ಯಾರಂಟಿ
ಮಡಿಕೇರಿ, ಏಪ್ರಿಲ್ 22; ಇಡೀ ದೇಶಾದ್ಯಂತ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹಬ್ಬುತ್ತಿದೆ. ಪುಟ್ಟ ಪ್ರವಾಸಿ ಜಿಲ್ಲೆಯಲ್ಲೂ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಗುತ್ತಿದೆ. ದುರಂತವೆಂದರೆ ಜನರೂ ಕೂಡ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಕೊರೊನಾ ನಿಯಮ ಪಾಲಿಸದಿದ್ದರೆ ಜೈಲೂಟ ಗ್ಯಾರಂಟಿ ಎಂದು ಎಸ್ಪಿ ಕ್ಷಮಾ ಮಿಶ್ರಾ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ಜೈಲೇ ಗತಿ. ಮಾಸ್ಕ್ ಹಾಕದಿದ್ದರೆ ಸಾಮಾಜಿಕ ಅಂತರ ಕಾಪಾಡದಿದ್ದರೆ ಜೈಲು ವಾಸ ಅನುಭವಿಸಬೇಕಾಗುತ್ತದೆ" ಎಂದು ಎಚ್ಚರಿಸಿದ್ದಾರೆ.
ಈಗಾಗಲೇ ಕೋವಿಡ್ ನಿಯಮ ಉಲ್ಲಂಘಿಸಿದ 11 ಜನರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ಅಷ್ಟೇ ಅಲ್ಲದೆ ಈ 11 ಜನರ ಮೇಲೆ ಜಾಮೀನು ರಹಿತ ಕೇಸ್ ದಾಖಲು ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರ ಮೇಲೆ ಎಫ್ಐಆರ್ ದಾಖಲಾಗಿದೆ.

ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರು ಪಡಿಸಿಸಲಾಗಿದ್ದು, ಕೊಡಗಿನ ಕುಶಾಲನಗರದಲ್ಲಿ 9 ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ತಲಾ ಒಂದು ಕೇಸ್ ದಾಖಲು ಮಾಡಲಾಗಿದೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೆಚ್ಚು ಕೇಸ್ ದಾಖಲಿಸಲಾಗುವುದು ಎಂದು ಕಟು ಎಚ್ಚರಿಕೆ ನೀಡಿದ್ದಾರೆ.
ಮಾಸ್ಕ್, ಸಾಮಾಜಿಕ ಅಂತರ ಪಾಲಿಸದೇ ಎಲ್ಲೆಂದರಲ್ಲಿ ಜನ ಸೇರುವುದು, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುವುದು ಸೇರಿದಂತೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ.
ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿತ್ಯ ನೂರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ.
ಅಲ್ಲದೆ ಇಂದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 183 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇಷ್ಟಾದರೂ ಜನ ಎಚ್ಚೆತ್ತುಕೊಂಡಿಲ್ಲ, ಹೀಗಾಗಿ ಕಠಿಣ ಕ್ರಮ ಅಗತ್ಯವಾಗಿದೆ.












Click it and Unblock the Notifications