ಕೊಡಗು; ಆನೆ ಹಾವಳಿಗೆ ಶಾಶ್ವತ ಕ್ರಮ, ಸಚಿವರ ಭರವಸೆ
ಮಡಿಕೇರಿ, ಆಗಸ್ಟ್ 27: "ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಉನ್ನತ ಮಟ್ಟದ ತಜ್ಞರ ವರದಿ ತರಿಸಿಕೊಂಡು ಆನೆ ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
ಸಚಿವರು ಶನಿವಾರ ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಜಿಲ್ಲೆಯ ತಿತಿಮತಿ ಅರಣ್ಯ ವ್ಯಾಪ್ತಿಯ ಚೈನಿಹಡ್ಲು ಹಾಡಿಗೆ ಭೇಟಿ ನೀಡಿದ ಸಚಿವರು ಸ್ಥಳೀಯ ಆದಿವಾಸಿ ಜನರ ಅಹವಾಲು ಆಲಿಸಿದರು. ನಂತರ ಮಾತನಾಡಿದರು.
"ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ನಿಯಂತ್ರಣ ಮಾಡುವಲ್ಲಿ ಸರ್ಕಾರ ಅಗತ್ಯ ತುರ್ತು ಕ್ರಮ ವಹಿಸಲಿದೆ. ಆ ನಿಟ್ಟಿನಲ್ಲಿ ತಿತಿಮತಿ ವ್ಯಾಪ್ತಿಯಲ್ಲಿ ಹೆಚ್ಚುವರಿಯಾಗಿ 5 ಕಿ. ಮೀ. ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುವುದು" ಎಂದು ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.

ಸಚಿವರು ಮಾತನಾಡಿ, "ಕೊಡಗು ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಮೂವರು ಕಾಡಾನೆ ಹಾವಳಿಗೆ ತುತ್ತಾಗಿದ್ದಾರೆ. ಮಾನವ ಮತ್ತು ವನ್ಯ ಪ್ರಾಣಿಗಳ ಸಂಘರ್ಷವನ್ನು ತಡೆಯಲು ಶಾಶ್ವತ ಕಾರ್ಯಕ್ರಮ ರೂಪಿಸಲಾಗುವುದು, ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಿದೆ. ಮನುಷ್ಯನ ಜೀವ ಮತ್ತು ಜೀವನ ಅತಿಮುಖ್ಯವಾಗಿದ್ದು, ಕಾಡಾನೆ ಹಾವಳಿ ತಡೆಗೆ ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲಾಗುವುದು" ಎಂದರು.
"ಕೊಡಗು ಜಿಲ್ಲೆಯಲ್ಲಿ 1 ಸಾವಿರಕ್ಕೂ ಹೆಚ್ಚು ಕಾಡಾನೆಗಳು ಇದ್ದು, 100ಕ್ಕೂ ಹೆಚ್ಚು ಕಾಡಾನೆಗಳು ಅರಣ್ಯದಿಂದ ಹೊರಗಿವೆ. ಈ ಕಾಡಾನೆಗಳನ್ನು ಕಾಡಿಗೆ ಓಡಿಸಲಾಗುವುದು, ಜೊತೆಗೆ ರೇಡಿಯೊ ಕಾಲರ್ ಅಳವಡಿಸಲಾಗುವುದು" ಎಂದು ಹೇಳಿದರು.
ಮನವಿಯಂತೆ ಸಚಿವರ ಭೇಟಿ; ಸಚಿವರ ಜೊತೆ ಉಪಸ್ಥಿತರಿದ್ದ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ಮಾತನಾಡಿ, "ಕಾಡಾನೆ ಹಾವಳಿಯಿಂದ ಇಲ್ಲಿನ ಸ್ಥಳೀಯರಿಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಕೊಡಗು ಜಿಲ್ಲೆಗೆ ಭೇಟಿ ನೀಡಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಅರಣ್ಯ ಸಚಿವರಲ್ಲಿ ಮನವಿ ಮಾಡಲಾಗಿತ್ತು, ಅದರಂತೆ ಜಿಲ್ಲೆಗೆ ಭೇಟಿ ನೀಡಿದ್ದಾರೆ" ಎಂದರು.
"ಸರ್ಕಾರ ಮತ್ತು ಅರಣ್ಯ ಸಚಿವರು ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಯಲಿದ್ದಾರೆ. ಕಳೆದ 20 ವರ್ಷಗಳಿಂದ ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳು ಇದ್ದು, ಹಂತ-ಹಂತವಾಗಿ ಪರಿಹರಿಸಲಾಗುವುದು" ಎಂದು ಶಾಸಕರು ಹೇಳಿದರು.
ಸಚಿವ ಈಶ್ವರ ಖಂಡ್ರೆ ನಾಗರಹೊಳೆಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು, ಬಳಿಕ ಕುಟ್ಟ ಗ್ರಾಮ ಬಳಿಯ ಕಾಯಿಮಾನಿ ಸ್ಥಳದಲ್ಲಿ ಜನರನ್ನು ಭೇಟಿ ನೀಡಿ ಮಾಹಿತಿ ಪಡೆದರು. ಸ್ಥಳೀಯ ಗ್ರಾಮಸ್ಥರು ಕಾಡಾನೆ ಹಾವಳಿ ನಿಯಂತ್ರಣಕ್ಕೆ ರೇಡಿಯೊ ಕಾಲರ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಒತ್ತಾಯಿಸಿದರು. ಕಾಯಿಮಾನಿ ಭಾಗದಲ್ಲಿ 60ಕ್ಕೂ ಹೆಚ್ಚು ಕಾಡಾನೆಗಳು ಓಡಾಡುತ್ತಿದ್ದು, ಈ ಕಾಡಾನೆಗಳನ್ನು ಸ್ಥಳಾಂತರಿಸಬೇಕಿದೆ ಎಂದು ಸಚಿವರಿಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ಸ್ಥಳೀಯರಾದ ಪಂಕಜ ಮಾತನಾಡಿ, "ತಿತಿಮತಿ ಚೈನಿಹಡ್ಲು ಹಾಡಿಯಲ್ಲಿ 150ಕ್ಕೂ ಹೆಚ್ಚು ಆದಿವಾಸಿ ಕುಟುಂಬಗಳು ವಾಸಿಸುತ್ತಿದ್ದು, ಕಾಡಾನೆ ಹಾವಳಿಯಿಂದ ರಕ್ಷಣೆ ಬೇಕಿದೆ" ಎಂದು ಮನವಿ ಮಾಡಿದರು.
ಸಚಿವರು ತಿತಿಮತಿ ಬಳಿಯ ಬಂಬುಕಾಡಿನಲ್ಲಿನ ಮನೆಗೆ ಭೇಟಿ ನೀಡಿ ಇತ್ತೀಚೆಗೆ ಕಾಡಾನೆ ದಾಳಿಗೆ ತುತ್ತಾದ ಕೊಡಗು ಜಿಲ್ಲೆ ಸಿದ್ದಾಪುರ ಬಳಿಯ ಬಾಡಗ-ಬಾನಂಗಾಲ ಗ್ರಾಮದ ನಿವಾಸಿ ಆಯಿಷ (63) ಅವರ ಪುತ್ರ ಲತೀಫ್ಗೆ ಸಾಂತ್ವನ ಹೇಳಿ, ಪರಿಹಾರದ ಚೆಕ್ ವಿತರಿಸಿದರು.
ಕಾಡಾನೆ ದಾಳಿಗೆ ತುತ್ತಾದ ಜಿಲ್ಲೆಯ ಕಟ್ಟೆವಾಡು ಗ್ರಾಮದ ಪರಂಬು ಪೈಸಾರಿಯ ದೇವಪ್ಪ ಅವರ ಮನೆಗೆ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.












Click it and Unblock the Notifications