ಜೆಡಿಎಸ್ ತೊರೆಯಲಿದ್ದಾರೆ ಮಾಜಿ ಸಚಿವ ಬಿ.ಎ.ಜೀವಿಜಯ?
ಮಡಿಕೇರಿ, ಮಾರ್ಚ್ 12 : ಮಾಜಿ ಸಚಿವ, ಕೊಡಗು ಜಿಲ್ಲಾ ಜೆಡಿಎಸ್ ನಾಯಕ ಬಿ.ಎ.ಜೀವಿಜಯ ಅವರು ಪಕ್ಷ ತೊರೆಯಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಅವರು ಪಕ್ಷ ಬಿಡಲು ಮುಂದಾಗಿರುವುದು ಪಕ್ಷಕ್ಕೆ ಜಿಲ್ಲೆಯಲ್ಲಿ ಹಿನ್ನಡೆ ಉಂಟು ಮಾಡಿದೆ.
ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರು ಬಿ.ಎ.ಜೀವಿಜಯ ಅವರು ಎರಡು ದಿನದಲ್ಲಿ ಬೆಂಬಲಿಗರೊಂದಿಗೆ ಬೆಂಗಳೂರಿಗೆ ತೆರಳಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಕೆ.ಎಂ.ಬಿ.ಗಣೇಶ್ ಅವರನ್ನು ನೇಮಕ ಮಾಡಲಾಗಿದೆ. ಇದರಿಂದಾಗಿ ಜೀವಿಜಯ ಅವರು ಅಸಮಾಧಾನಗೊಂಡಿದ್ದಾರೆ. ಗಣೇಶ್ ಅವರು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ಅಗಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಬೆಂಬಲಿಗರು.

'2018ರ ವಿಧಾನಸಭೆ ಚುನಾವಣೆಯಲ್ಲಿ ಕೆ.ಎಂ.ಬಿ.ಗಣೇಶ್ ಅವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಅವರಿಗೆ ಜಿಲ್ಲಾ ಅಧ್ಯಕ್ಷ ಸ್ಥಾನ ನೀಡಬಾರದು ಎಂದು ವರಿಷ್ಠರ ಗಮನಕ್ಕೂ ತರಲಾಗಿತ್ತು. ಆದರೆ, ನಮ್ಮ ಮಾತಿಗೆ ಬೆಲೆ ಕೊಟ್ಟಿಲ್ಲ' ಎಂದು ಜೀವಿಜಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಗೆ ಬಿ.ಎ.ಜೀವಿಜಯ ಅವರು ಮಡಿಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 54,616 ಮತಗಳನ್ನು ಪಡೆದು ಬಿಜೆಪಿಯ ಅಪ್ಪಚ್ಚು ರಂಜನ್ ಅವರ ವಿರುದ್ಧ ಸೋಲು ಅನುಭವಿಸಿದ್ದರು.












Click it and Unblock the Notifications