ಕೊಡಗಿನಲ್ಲಿ ಪದೇ ಪದೇ ಭೂಕಂಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು ಜು.23: ಕೊಡಗು ಜಿಲ್ಲೆಯಲ್ಲಿ ಪದೇ ಪದೇ ಭೂ ಕುಸಿತ ಮತ್ತು ಭೂಕಂಪ ಆಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರು ಸಹಜವಾಗಿಯೇ ಭಯಭೀತರಾಗಿದ್ದಾರೆ.
ಆದರೆ ಅದಕ್ಕೆ ನಿಖರ ಕಾರಣವನ್ನು ಪತ್ತೆ ಹಚ್ಚಲು ಸರ್ಕಾರ ಈವರೆಗೆ ಮುಂದಾಗಿಲ್ಲ. ಹಾಗಾಗಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಗೀತಾಮಿಶ್ರಾ ಆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿ ಗಮನ ಸೆಳೆಸಿದ್ದಾರೆ.
ಪಿಐಎಲ್ ಆಲಿಸಿದ ಹಂಗಾಮಿ ಸಿಜೆ ಅಲೋಕ್ ಅರಾಧೆ ಅವರಿದ್ದ ವಿಭಾಗೀಯಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ನಡೆಸಲು ವಿಶೇಷ ತಂಡ ರಚನೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಆ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಮೂರು ವಾರಗಳಲ್ಲಿ ಅಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿತು.
ಅಲ್ಲದೆ, ಕೊಡಗಿನ ಸಮಸ್ಯೆ ಬಗೆಹರಿಸುವ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಸರಕಾರ ವಿವರ ನೀಡಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.1ಕ್ಕೆ ಮುಂದೂಡಿತು.

ಕೊಡಗಿನಲ್ಲಿ ಮತ್ತೆ ಮತ್ತೆ ಭೂ ಕುಸಿತ ಸಂಭವಿಸುತ್ತಿರುವುದರಿಂದ ಸಹಸ್ರಾರು ಮಂದಿಗೆ ತೊಂದರೆ ಆಗುತ್ತಿದೆ, ಇಡೀ ಜಿಲ್ಲೆಯ ಪರಿಸರದ ಮೇಲೂ ಪರಿಣಾಮಗಳಾಗುತ್ತಿವೆ. ಆದರೂ ಸರಕಾರ ಅದಕ್ಕೆ ವೈಜ್ಞಾನಿಕ ಕಾರಣಗಳನ್ನು ಅರಿಯಲು ಮುಂದಾಗಿಲ್ಲ. ಹಾಗಾಗಿ ಸರಕಾರಕ್ಕೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, 2018ರಲ್ಲಿ ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ವ್ಯಾಪಕ ಪ್ರಾಣ ಮತ್ತು ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿತು. ಆದಾದ ನಂತರ ಪ್ರತಿವರ್ಷವೂ ಜಿಲ್ಲೆಯಾದ್ಯಂತ ಭೂ ಕುಸಿತ ಮತ್ತು ಕಂಪನಗಳು ಹೆಚ್ಚಾಗುತ್ತಿದೆ, ಜೀವ ಹಾಗೂ ಆಸ್ತಿ-ಪಾಸ್ತಿ ಹಾನಿ ಪ್ರತಿವರ್ಷವೂ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ, ಕೊಡಗು ಜಿಲ್ಲೆಯಲ್ಲಿ ಹಾನಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳುವಂತೆ 2020ರಲ್ಲಿಯೇ ಸರಕಾರಕ್ಕೆ ಮನವಿ ಸಲ್ಲಿಸಿದ್ದರೂ ಏನೂ ಕ್ರಮ ಕೈಗೊಂಡಿಲ್ಲ ಎಂದರು.
ಸರ್ಕಾರ ವೈಜ್ಞಾನಿಕ ರೀತಿಯಲ್ಲಿ ಭೂಕಂಪ ಮತ್ತು ಭೂ ಕುಸಿತಕ್ಕೆ ಕಾರಣಗಳನ್ನು ಪತ್ತೆ ಹಚ್ಚದ ಹಿನ್ನೆಲೆಯಲ್ಲಿ ಮತ್ತೆ ಇದೀಗ ಭೂಕಂಪಗಳು ಆಗುತ್ತಿವೆ. ಭೂಕಂಪ ಮತ್ತು ಹೆಚ್ಚಳಕ್ಕೆ ಅಕ್ರಮ ರೆಸಾರ್ಟ್ ಹಾಗೂ ಗಣಿಗಾರಿಕೆಯೇ ಕಾರಣವಾಗಿದ್ದು, ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕು, ಮಳೆಗಾಲದಲ್ಲಿ ಪ್ರವಾಹ, ಭೂ ಕುಸಿತದ ನಡುವೆ ಭೂಮಿಯ ಕಂಪನ ಮುಂದುವರಿದಿದ್ದು ಜನರು ನೆಮ್ಮದಿಯ ಜೀವನ ನಡೆಸಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ
ಕಳೆದ ನಾಲ್ಕು ವರ್ಷಗಳಿಗೆ ಹೋಲಿಸಿದರೆ ಇದುವರೆಗೆ ಸುರಿದ ಮಳೆಯ ಪ್ರಮಾಣವನ್ನು ಗಮನಿಸಿದರೆ ಇಲ್ಲಿವರೆಗೆ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಹೀಗಾಗಿ ಜಿಲ್ಲಾಡಳಿತ ವತಿಯಿಂದ ದಿನದ 24 ಗಂಟೆ ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ 0872-221077, ವಾಟ್ಸ್ಆಪ್ ಸಂಖ್ಯೆ 8550001077 ಗೆ ಮಳೆ ಹಾನಿ ಸಂಬಂಧ ಮಾಹಿತಿ ಹಂಚಿಕೊಳ್ಳಬಹುದಾಗಿದೆ.
ಹಾಗೆಯೇ ತಾಲ್ಲೂಕುವಾರು ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಮಡಿಕೇರಿ ತಾಲ್ಲೂಕು 08272-228396, ಮಡಿಕೇರಿ ನಗರಸಭೆ ವ್ಯಾಪ್ತಿ 08272-220111, ವಿರಾಜಪೇಟೆ ತಾಲ್ಲೂಕು 08274-256328, ಸೋಮವಾರಪೇಟೆ ತಾಲ್ಲೂಕು 08276-282045 ನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಮಳೆಯಿಂದಾಗಿ ವಿದ್ಯುತ್ ಸರಬರಾಜಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಅಡಚಣೆಗಳು ಉಂಟಾಗುತ್ತಿದ್ದು, ವಿದ್ಯುತ್ ಅವಘಡಗಳು ಉಂಟಾಗುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ವಿದ್ಯುತ್ ಜಾಲದ ವ್ಯತ್ಯಯಗಳನ್ನು ಗಮನಿಸಿದಲ್ಲಿ, ಸ್ವತಃ ಕ್ರಮಕೈಗೊಳ್ಳದೇ (ವಿದ್ಯುತ್ ತಂತಿಗಳನ್ನು ಸ್ಪರ್ಶಿಸದೇ) ತಕ್ಷಣ ಮಾಹಿತಿ ನೀಡಲು ಕೊಡಗು ಜಿಲ್ಲೆಯ (24X7) ಸರ್ವೀಸ್ ಸೆಂಟರ್ನ ದೂರವಾಣಿ ಸಂಖ್ಯೆ '1912' ಹಾಗೂ ಗ್ರಾಹಕರ ಸೇವಾ ಕೇಂದ್ರ ಸಂಖ್ಯೆ 9449598665 ಕಲ್ಪಿಸಲಾಗಿದೆ.
ಒಟ್ಟಾರೆ ಕೊಡಗಿನಲ್ಲಿ ಮಳೆಯಿಂದ ಹತ್ತಾರು ಸಮಸ್ಯೆಗಳು ಎದುರಾಗುತ್ತಿದ್ದು, ಎಲ್ಲವನ್ನು ಎದುರಿಸಿ ಬದುಕುವುದು ಅನಿವಾರ್ಯವಾಗಿದೆ. ಹೀಗಾಗಿ ಜನರು ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕಾಗಿದೆ. ಏಕೆಂದರೆ ಮುಂದಿನ ದಿನಗಳು ಕೊಡಗಿನ ಪಾಲಿಗೆ ನಡುಮಳೆಗಾಲದ ದಿನಗಳಾಗಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆ ಹೆಚ್ಚಿರುತ್ತದೆ.












Click it and Unblock the Notifications