ಮಡಿಕೇರಿ ಆಸ್ಪತ್ರೆಯಲ್ಲಿ ಮೃತರ ಮಾಂಗಲ್ಯ ಸರ ಕಳವು; ಪೊಲೀಸ್ ದೂರು
ಮಡಿಕೇರಿ, ಮೇ 25: ಕೋವಿಡ್ ಸೋಂಕಿನಿಂದ ಮೃತಪಟ್ಟ ವೃದ್ಧೆಯ 25 ಗ್ರಾಂ ತೂಕದ ಚಿನ್ನದ ತಾಳಿ ಸರವನ್ನೇ ಕಳವು ಮಾಡಿರುವ ಪ್ರಕರಣ ಮಡಿಕೇರಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಸೋಮವಾರ ಪೊಲೀಸ್ ದೂರು ದಾಖಲಾಗಿದೆ.
ಇತ್ತೀಚಿಗೆ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಫೋನ್ ಕಳ್ಳತನವಾಗಿದ್ದ ಪ್ರಕರಣ, ಆಕೆಯ ಮಗಳ ಮನವಿಯಿಂದಾಗಿ ರಾಜ್ಯಾದ್ಯಂತ ಪ್ರಚಾರವಾದ ಬೆನ್ನಲ್ಲೇ ಈಗ ಅದೇ ಆಸ್ಪತ್ರೆಯಲ್ಲಿ ಮೃತ ವೃದ್ಧೆಯ ಚಿನ್ನದ ತಾಳಿ ಸರ ಕಳುವಾಗಿದೆ. ಕೋವಿಡ್ನಿಂದ ಮೃತಪಟ್ಟ ಕಮಲಾ ಎಂಬ ವೃದ್ಧೆಯ ಅಂದಾಜು 1.5 ಲಕ್ಷ ರೂ. ಮೌಲ್ಯದ 25 ಗ್ರಾಂ ತೂಕದ ಚಿನ್ನದ ಸರವನ್ನೇ ದಾದಿಯರು ಕಳ್ಳತನ ಮಾಡಿರುವ ಆರೋಪ ಕೇಳಿ ಬಂದಿದೆ.
ಸೋಮವಾರಪೇಟೆ ತಾಲೂಕಿನ ರಸೂಲ್ಪುರ ಗ್ರಾಮದ ಕಮಲಾರನ್ನು ಕಳೆದ ಮೇ 1ರಂದು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ಸಾಮಾನ್ಯ ವಾರ್ಡ್ನಲ್ಲೇ ದಾಖಲಾಗಿದ್ದ ಕಮಲಾರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದರಿಂದ, ಮೇ 2 ರಂದು ಐಸಿಯು ವಾರ್ಡ್ಗೆ ಶಿಫ್ಟ್ ಮಾಡಲಾಗಿತ್ತು.
ಈ ವೇಳೆ ದಾದಿಯರು ಕಮಲಾ ಅವರ ಕೊರಳಿನಲ್ಲಿದ್ದ ಚಿನ್ನದ ತಾಳಿ ಸರವನ್ನು ತೆಗೆದುಕೊಂಡಿದ್ದರು. ಐಸಿಯು ವಾರ್ಡ್ನಲ್ಲಿ ಸ್ವಲ್ಪ ಚೇತರಿಸಿಕೊಂಡಿದ್ದ ವೃದ್ಧೆ ಕಮಲಾ ತನ್ನ ಮಗ ಮೊಣ್ಣಪ್ಪ ಅವರಿಗೆ ಕರೆ ಮಾಡಿ, ತಾಳಿ ಸರವನ್ನು ದಾದಿಯರು ಪಡೆದುಕೊಂಡಿರುವ ಬಗ್ಗೆ ತಿಳಿಸಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಮೇ 19ರಂದು ಕಮಲಾ ಮೃತಪಟ್ಟಿದ್ದು, ಮೇ 20ರಂದು ಅಂತ್ಯಕ್ರಿಯೆ ನೆರವೇರಿಸಿದ ಮೊಣ್ಣಪ್ಪ, 21ರಂದು ಮಡಿಕೇರಿ ಆಸ್ಪತ್ರೆಗೆ ಬಂದು ತನ್ನ ತಾಯಿಯ ವಸ್ತುಗಳನ್ನು ಕೇಳಿದ್ದಾರೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಕೇವಲ ಬ್ಯಾಗನ್ನು ಮಾತ್ರ ನೀಡಿದರು. ತನ್ನ ತಾಯಿಯ ಚಿನ್ನದ ಸರವನ್ನು ಕೊಟ್ಟಿಲ್ಲ ಎಂದು ಮೊಣ್ಣಪ್ಪ ಕೋವಿಡ್ ಆಸ್ಪತ್ರೆಯ ಡೀನ್ ಮತ್ತು ಮಡಿಕೇರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ನಮ್ಮ ಸಂಪ್ರದಾಯದ ಪ್ರಕಾರ ಗಂಡ ಇರುವಾಗಲೇ ಹೆಂಡತಿ ಕೊರಳಿನಿಂದ ತಾಳಿಯನ್ನು ತೆಗೆಯುವುದಿಲ್ಲ. ಹೀಗಾಗಿ ತಾಯಿಯನ್ನು ಆಸ್ಪತ್ರೆಗೆ ಕಳುಹಿಸುವಾಗ ಚೈನ್ ತೆಗೆಯದೆ ಆಸ್ಪತ್ರೆಗೆ ಕಳುಹಿಸಿದೆವು. ಆದರೆ ಈಗ ತಾಯಿಯ ಚಿನ್ನದ ತಾಳಿಯ ಸರವನ್ನೇ ಕೊಟ್ಟಿಲ್ಲ. ಈಗ ಧಾರ್ಮಿಕ ಕಾರ್ಯಗಳನ್ನು ಮಾಡಲು ತಾಳಿ ಬೇಕಾಗಿದೆ. ಅದನ್ನು ದಯಮಾಡಿ ಕೊಡಿಸಿ ಎಂದು ಅಂಗಲಾಚುತ್ತಿದ್ದಾರೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್, ""ಆಸ್ಪತ್ರೆಯಲ್ಲಿ ಈ ರೀತಿ ಆಗಬಾರದಿತ್ತು. ಇದು ಅತ್ಯಂತ ಅಮಾನವೀಯ ಘಟನೆ. ಈ ಕುರಿತು ಈಗಾಗಲೇ ಆಸ್ಪತ್ರೆಯಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ವಾರ್ಡ್ಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಲಾಗುತ್ತಿದೆ. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿದೆ'' ಎಂದಿದ್ದಾರೆ.
ಒಟ್ಟಿನಲ್ಲಿ ಕೊವಿಡ್ನಿಂದ ಮೃತಪಟ್ಟವರ ಬೆಲೆ ಬಾಳುವ ವಸ್ತುಗಳು ಕೋವಿಡ್ ಆಸ್ಪತ್ರೆಯಲ್ಲಿ ನಾಪತ್ತೆಯಾಗುತ್ತಿರುವುದು ಎಲ್ಲರೂ ತಲೆತಗ್ಗಿಸುವಂತೆ ಆಗಿದೆ.
ಕೊಡಗು ಜಿಲ್ಲೆಯಲ್ಲಿ ಲಾಕ್ಡೌನ್ ಕೊಂಚ ಪರಿಣಾಮ ಬೀರಿದ್ದು, ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ ಸಾವಿನ ಪ್ರಮಾಣ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 10 ಸಾವು ಸಂಭವಿಸಿದ್ದು, ಇಲ್ಲಿಯವರೆಗೆ ಒಟ್ಟು 298 ಮರಣ ಪ್ರಕರಣಗಳು ವರದಿಯಾಗಿವೆ.
Recommended Video