ಎರಡು ವರ್ಷದ ನಂತರ ಕೊನೆಗೂ ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಮನೆ ಸಿಕ್ತು!
ಮಡಿಕೇರಿ, ಜೂನ್ 04: ಜಿಲ್ಲಾಡಳಿತ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ಪುನರ್ವಸತಿ ಯೋಜನೆ ಅಡಿ ಜಂಬೂರಿನಲ್ಲಿ ಸಂತ್ರಸ್ತರಿಗೆ ನಿರ್ಮಿಸಿರುವ 383 ಮನೆಗಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಅವರು ಮನೆ ಹಕ್ಕು ಪತ್ರ ಹಾಗೂ ಕೀ ನೀಡುವ ಮೂಲಕ ಗುರುವಾರ ಹಸ್ತಾಂತರಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಯನ್ನು ಸಂತ್ರಸ್ತರಿಗೆ ಹಸ್ತಾಂತರ ಮಾಡಬೇಕಿತ್ತು. ಆದರೆ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಉಪಸ್ಥಿತಿಯಲ್ಲಿ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬಡಾವಣೆಯಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಯಿತು.
ಪ್ರತಿ ಮನೆಗೆ 85 ಲಕ್ಷ ರೂ. ವೆಚ್ಚ
ಜಿಲ್ಲೆಯಲ್ಲಿ 2018ರ ಆಗಸ್ಟ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. ಈ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಸ್ಥಳ ಗುರುತಿಸಿ ಪ್ರತಿ ಮನೆಗೆ 9.85 ಲಕ್ಷ ರೂ. ವೆಚ್ಚದಲ್ಲಿ ಎರಡು ಬೆಡ್ರೂಮ್ ಒಳಗೊಂಡ ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗಿತ್ತು.
ಕೊಡಗಿನಲ್ಲಿ ಮುಂಗಾರು ಶುರುವಾಯ್ತು, ಸಜ್ಜಾದ ಜಿಲ್ಲಾಡಳಿತ
ಜಂಬೂರಿ, ಕರ್ಣಂಗೇರಿಯಲ್ಲಿ ಮನೆ ನಿರ್ಮಾಣ
ಜಂಬೂರಿನಲ್ಲಿ ನಿರ್ಮಿಸಿರುವ ಮನೆಗಳನ್ನು ಮಕ್ಕಂದೂರು, ಹೆಮ್ಮೆತಾಳು, ಮುಕ್ಕೋಡ್ಲು, ಆವಂಡಿ, ಹೊದಕಾನ, ಮೇಘತ್ತಾಳು, ಮಡಿಕೇರಿ ನಗರ, ಹಾಲೇರಿ, ಕಾಂಡನಕೊಲ್ಲಿ, ಹಾಡಗೇರಿ, ಮುವತ್ತೋಕ್ಲು, ಕಡಂದಾಳು, ಗರ್ವಾಲೆ, ಅತ್ತೂರು ನಲ್ಲೂರು, 2ನೇ ಮೊಣ್ಣಂಗೇರಿ, ಕರ್ಣಂಗೇರಿ, ಜೋಡುಪಾಲ, ಮದೆ, ಕಾಟಕೇರಿ ಮತ್ತಿತರ ಗ್ರಾಮದ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು. ಕರ್ಣಂಗೇರಿ ಗ್ರಾಮದಲ್ಲಿ ನಿರ್ಮಿಸಿದ 35 ಮನೆಗಳನ್ನು ಈಗಾಗಲೇ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಅಲ್ಲದೆ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಬಯಸಿದ್ದ 65 ಫಲಾನುಭವಿಗಳಿಗೆ ತಲಾ 9.85 ಲಕ್ಷ ಮೊತ್ತವನ್ನು ಪಾವತಿಸಲಾಗಿದೆ.
"242 ಮನೆಗಳ ಕಾಮಗಾರಿ ಶೀಘ್ರವೇ ಪೂರ್ಣ"
ಇದೇ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು, ಈಗಾಗಲೇ ಜಂಬೂರಿನಲ್ಲಿ ಮನೆ ಹಸ್ತಾಂತರ ಮಾಡಲಾಗಿದ್ದು, ಉಳಿದಂತೆ ಗಾಳಿಬೀಡು ಮತ್ತು ಬಿಳಿಗೇರಿಯಲ್ಲಿ ನಿರ್ಮಾಣವಾಗುತ್ತಿರುವ 242 ಮನೆಗಳ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಹಸ್ತಾಂತರಿಸಲಾಗುವುದು ಎಂದು ಹೇಳಿದರು.
ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಾಗಿದೆ ಮಳೆ; ಏನೇನು ತಯಾರಿಯಾಗಿದೆ?
ಜನಪ್ರತಿನಿಧಿಗಳ ಸಮ್ಮುಖದಲ್ಲಿ ಮನೆ ಹಸ್ತಾಂತರ
ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ.ಜಿ.ಬೋಪಯ್ಯ, ಕೊಡಗು ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಸೋಮವಾರಪೇಟೆ ತಾ.ಪಂ.ಅಧ್ಯಕ್ಷರಾದ ಪುಷ್ಪಾರಾಜ್, ಮಾದಾಪುರ ಗ್ರಾ.ಪಂ.ಅಧ್ಯಕ್ಷರಾದ ಲತಾ ಎನ್, ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ.ರಾಮ್ ಪ್ರಸಾಥ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಇತರರು ಇದ್ದರು.