ಕುಶಾಲನಗರ ಏರ್ಸ್ಟ್ರಿಪ್ ಯೋಜನೆ, ಕೊಡಗು ಪ್ರವಾಸಿಗರಿಗೆ ಹೇಗೆ ಅನುಕೂಲ
ಮಡಿಕೇರಿ, ಫೆಬ್ರವರಿ 10: ಕೇಂದ್ರ ಸರ್ಕಾರ ಉಡಾನ್ ಯೋಜನೆಯಡಿ ಕರ್ನಾಟಕದಲ್ಲಿ 5 ಏರ್ಸ್ಟ್ರಿಪ್ ಅಭಿವೃದ್ಧಿಗೊಳಿಸುವುದಾಗಿ ಘೋಷಣೆ ಮಾಡಿದೆ. ಇದರಲ್ಲಿ ಕುಶಾಲನಗರ ಏರ್ಸ್ಟ್ರಿಪ್ ಯೋಜನೆಯೂ ಸೇರಿದೆ. ಈಗಾಗಲೇ ಈ ಯೋಜನೆ ಕುರಿತು ಚರ್ಚೆಗಳು ನಡೆಯುತ್ತಿದ್ದವು, ಇಂತಹ ಸಮಯದಲ್ಲಿಯೇ ಕೇಂದ್ರ ಸರ್ಕಾರ ಈ ಘೋಷಣೆ ಮಾಡಿದೆ. ಇದು ಕೊಡಗು ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.
ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರ ನೀಡುವಾಗ ಕರ್ನಾಟಕದಲ್ಲಿ ಕರ್ನಾಟಕದಲ್ಲಿ 5 ಏರ್ಸ್ಟ್ರಿಪ್ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇವುಗಳಲ್ಲಿ ಬಳ್ಳಾರಿ, ಕೋಲಾರ, ಕುಶಾಲನಗರ, ರಾಯಚೂರು ಮತ್ತು ಹಾಸನ ಸೇರಿವೆ.

ಸಂಸದರ ಪ್ರತಿಕ್ರಿಯೆ: ಕೇಂದ್ರ ಸರ್ಕಾರದ ಘೋಷಣೆ ಬಳಿಕ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದು, 'ಉಡಾನ್ ಯೋಜನೆಯಡಿ ಅಭಿವೃದ್ಧಿಪಡಿಸಲಿರುವ ಐದು ಹೊಸ ಏರ್ಸ್ಟ್ರಿಪ್ಗಳಲ್ಲಿ ನಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುವ ಕುಶಾಲನಗರವನ್ನು ಸೇರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ' ಎಂದು ಹೇಳಿದ್ದಾರೆ.
'ಈ ಉಪಕ್ರಮವು ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ವೃದ್ಧಿಸಲಿದೆ ಹಾಗೂ ನಮ್ಮ ಕೊಡಗು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ನಿಮ್ಮ ಪ್ರತಿನಿಧಿಯಾಗಿ, ನಮ್ಮ ಸಮುದಾಯಗಳನ್ನು ಉನ್ನತೀಕರಿಸುವ ಮತ್ತು ನಮ್ಮ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸುವ ಮೂಲಸೌಕರ್ಯ ಯೋಜನೆಗಳನ್ನು ಕಲ್ಪಿಸಲು ನಾನು ಬದ್ಧನಾಗಿದ್ದೇನೆ' ಎಂದು ಪೋಸ್ಟ್ ಹಾಕಿದ್ದಾರೆ.
ರಾಜ್ಯ ಸರ್ಕಾರದ ಮಟ್ಟದಲ್ಲಿ ಕುಶಾಲನಗರ ಏರ್ಸ್ಟ್ರಿಪ್ ಯೋಜನೆ ಕುರಿತು ಚರ್ಚೆಗಳು ನಡೆಯುತ್ತಿದ್ದವು. ರಾಜ್ಯ ಸರ್ಕಾರ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 2022-23ನೇ ಸಾಲಿನ ಬಜೆಟ್ನಲ್ಲಿ ಹೆಲಿಪೋರ್ಟ್ ಯೋಜನೆ ಘೋಷಣೆ ಮಾಡಿತ್ತು. ಆಗ ಕೊಡಗು ಜಿಲ್ಲೆಯ ಕುಶಾಲನಗರ ಏರ್ಸ್ಟ್ರಿಪ್ (ವಿಮಾನಪಥ) ನಿರ್ಮಾಣವೂ ಸೇರಿತ್ತು.
2024ರಲ್ಲಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಮಂಥರ್ ಗೌಡ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಖಾತೆ ಸಚಿವ ಎಂ. ಬಿ. ಪಾಟೀಲ್ ಭೇಟಿ ಮಾಡಿ ಕುಶಾಲನಗರ ಏರ್ಸ್ಟ್ರಿಪ್ ಯೋಜನೆ ಕುರಿತು ಚರ್ಚಿಸಿದ್ದರು.
ಇದಕ್ಕೂ ಮೊದಲು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆ ಯೋಜನೆಗೆ ಭೂಮಿ ಹಸ್ತಾಂತರ ಮಾಡುವ ಕುರಿತು ಸಭೆಯನ್ನು ನಡೆಸಿದ್ದರು. ಕೊಡಗು ಜಿಲ್ಲೆಯಲ್ಲಿಏರ್ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವರು ಭರವಸೆ ನೀಡಿದ್ದರು.
ಕೊಡಗು ಕರ್ನಾಟಕದಲ್ಲಿ ಪ್ರವಾಸಿಗರು ಹೆಚ್ಚಾಗಿ ಭೇಟಿ ನೀಡುವ ಒಂದು ಜಿಲ್ಲೆಯ. ಇಲ್ಲಿ ಏರ್ಸ್ಟ್ರಿಪ್ ನಿರ್ಮಾಣವಾದರೆ ಚಿಕ್ಕ ವಿಮಾನಗಳ ಹಾರಾಟಕ್ಕೆ ಅನುಕೂಲವಾಗಲಿದೆ. ಇದರಿಂದಾಗಿ ಪ್ರವಾಸಿಗರಿಗೂ ಸಹಾಯಕವಾಗಲಿದೆ ಎಂದು ರಾಜ್ಯ ಸರ್ಕಾರ ಹೆಲಿಪೋರ್ಟ್ ಯೋಜನೆ ಪ್ರಸ್ತಾವನೆ ಸಿದ್ಧಗೊಳಿಸಿತ್ತು.
ಮೊದಲು ಕೆ.ನಿಡುಗಣೆ ಬಳಿ 4 ಎಕರೆಗಿಂತ ಹೆಚ್ಚು ಜಾಗವನ್ನು ಈ ಯೋಜನೆಗೆ ಗುರುತಿಸಲಾಗಿತ್ತು. ಆದರೆ ಈಗ ಆ ಸ್ಥಳದಲ್ಲಿ ಮನೆ ನಿರ್ಮಾಣ ಆಗಿದೆ. ಕೊಡಗು ಜಿಲ್ಲಾ ಕೇಂದ್ರದಲ್ಲಿ ಜಾಗ ಇಲ್ಲದಿರುವುದರಿಂದ ಕೂಡಿಗೆ ಸೈನಿಕ ಶಾಲೆ ಬಳಿ ಗುರುತಿಸಲಾಗಿರುವ ಜಾಗದಲ್ಲಿ ಏರ್ಸ್ಟ್ರಿಪ್ ನಿರ್ಮಾಣ ಮಾಡಬಹುದು ಎಂದು ಅಂದಾಜಿಸಲಾಗಿದೆ.
ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಣ್ಣ ವಿಮಾನ ನಿಲ್ದಾಣ ಸ್ಥಾಪಿಸಬೇಕು ಎಂದು ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಸಹ ಈ ಯೋಜನೆ ಕುರಿತು ಸಭೆಗಳನ್ನು ನಡೆಸಿತ್ತು.












Click it and Unblock the Notifications