ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನಮಾನ; ಹೈಕೋರ್ಟ್ನಿಂದ ಸರ್ಕಾರಕ್ಕೆ ನಿರ್ದೇಶನ
ಮಡಿಕೇರಿ, ಜುಲೈ 21: "ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ," ಎಂದು ಪರಿಶೀಲಿಸುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನಮಾನ ನೀಡುವ ವಿಷಯದ ಬಗ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಮುಖ್ಯನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, "ಈಗಾಗಲೇ ನಡೆಸಿರುವ ಸಮೀಕ್ಷೆಯಲ್ಲಿ ಲೋಪ ಕಂಡು ಬಂದರೆ ಹೊಸ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ಮುಕ್ತವಾಗಿದೆ,'' ಎಂದು ತಿಳಿಸಿತು.
ಕೊಡವ ಜನಾಂಗದ ಹಕ್ಕಿಗಾಗಿ ಹೋರಾಡುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ರಾಜ್ಯ ಹೈಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿ, 2016ರ ಡಿಸೆಂಬರ್ 1ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ನಿಗದಿಪಡಿಸಿರುವ ನಿಯಮಗಳ ಪ್ರಕಾರ ಸಮೀಕ್ಷೆ ನಡೆಸಿಲ್ಲ ಎಂದು ಆರೋಪಿಸಿತ್ತು.

ಅರ್ಜಿಯಲ್ಲಿ, "ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಆಧರಿಸಿ ಸಮೀಕ್ಷೆ ನಡೆಸಬೇಕು. ಆದರೆ, ಸಮೀಕ್ಷೆಗೆ ಸಿದ್ಧಪಡಿಸಿದ್ದ ನಮೂನೆಯೇ ದೋಷಪೂರಿತವಾಗಿದ್ದು, ಅದರ ಆಧಾರದಲ್ಲಿ ನಡೆಸಿರುವ ಸಮೀಕ್ಷೆಯಿಂದ ಯಾವ ಪ್ರಯೋಜನವೂ ಆಗುವುದಿಲ್ಲ,'' ಎಂದು ಆರೋಪಿಸಿತ್ತು.












Click it and Unblock the Notifications