ಕೊಡಗಿನಲ್ಲಿ ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಅರೆಸ್ಟ್
ಮಡಿಕೇರಿ, ಸೆಪ್ಟೆಂಬರ್ 14: ಸಂಘಟನೆಗಳ ಹೆಸರಿನಲ್ಲಿ ಬೆದರಿಸಿ ಹಣ ಪಡೆಯುವ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕನ್ನಡಕ್ಕಾಗಿ ಹೋರಾಡುತ್ತೇನೆಂದು ಓಡಾಡುತ್ತಿದ್ದ ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷನನ್ನು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದಡಿ ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಬಂಧಿತ ಆರೋಪಿ. ಈತ ಕರ್ನಾಟಕ ಕಾವಲು ಪಡೆಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದನು. ಕಳೆದ ಕೆಲವು ವರ್ಷಗಳಿಂದ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿಕೊಂಡು ಸಂಘಟನೆ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡಿ ಹಣ ಸಂಪಾದಿಸಲು ಮುಂದಾಗಿದ್ದನು.
ಸೋಮವಾರಪೇಟೆ ತಾಲ್ಲೂಕಿನ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ರಾಮೇಗೌಡ ಎಂಬುವವರಿಗೆ ಹಣದ ಬೇಡಿಕೆಯಿಟ್ಟು, ಬ್ಲ್ಯಾಕ್ ಮೇಲ್ ಮಾಡಿ ಬೆದರಿಸುತ್ತಿದ್ದನು. ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದನು. ಈ ನಡುವೆ ಸೋಮೇಶ್ವರ ದೇವಸ್ಥಾನದ ಬಳಿ ಅಡ್ಡಗಟ್ಟಿ ಹಣ ನೀಡುವಂತೆ ಒತ್ತಡ ಹಾಕಿದ್ದನು. ಕೃಷ್ಣನ ಕಿರುಕುಳದಿಂದ ಬೇಸತ್ತ ರಾಮೇಗೌಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರಿಗೆ ಸಾಕ್ಷಿ ಸಮೇತ ದೂರು ನೀಡಿದ್ದರು.

ದೂರಿನಲ್ಲಿ ಕರ್ನಾಟಕ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಹಣ ನೀಡದಿದ್ದಲ್ಲಿ ಹೋರಾಟ ಮಾಡುವುದಾಗಿ ಬೆದರಿಸಿದ್ದಾರೆ ಎಂದು ನಮೂದಿಸಿದ್ದಾರೆ. ಅಲ್ಲದೆ ಈತನಿಗೆ ಸಹಕರಿಸಿದ ಇಲಾಖಾ ಸಿಬ್ಬಂದಿಯೊಬ್ಬರ ಮೇಲೆಯೂ ದೂರು ನೀಡಿದ್ದಾರೆ.
ಎಸ್ಪಿ ಅವರು ದೂರಿನ ಅರ್ಜಿಯನ್ನು ಕುಶಾಲನಗರ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ಟೌನ್ ಪೊಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಪ್ರಕರಣ ದಾಖಲಿಸಿಕೊಂಡು, ಶುಕ್ರವಾರ ರಾತ್ರಿ ಕೃಷ್ಣನನ್ನು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು 15 ದಿನಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.












Click it and Unblock the Notifications