ಕೊಡಗಿನಲ್ಲಿ ನಡೆಯುವ ಈ ಕ್ರೀಡೆ ಶೂರತ್ವದ ಸಂಕೇತ
ಮಡಿಕೇರಿ, ಮೇ, 8: ಕೊಡಗಿನಲ್ಲಿ ವರ್ಷಪೂರ್ತಿ ಒಂದಲ್ಲ ಒಂದು ರೀತಿಯ ಕ್ರೀಡೆಗಳು ನಡೆಯುತ್ತಲೇ ಇರುತ್ತವೆ. ಇವುಗಳ ನಡುವೆ ಸಾಂಪ್ರದಾಯಿಕವಾಗಿ ನಡೆದು ಬಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಕ್ರೀಡೆಯೂ ಒಂದಾಗಿದ್ದು, ಇತ್ತೀಚೆಗಿನ ವರ್ಷಗಳಲ್ಲಿ ಇದಕ್ಕೆ ಜನಪ್ರಿಯತೆ ಹೆಚ್ಚಾಗಿ ಕ್ರೀಡಾಕೂಟಗಳಲ್ಲಿ ಹೆಚ್ಚು ಆದ್ಯತೆ ದೊರೆಯುತ್ತಿರುವುದು ಕಂಡು ಬರುತ್ತಿದೆ. ಈ ಹಿಂದೆ ಹಬ್ಬ ಹರಿದಿನಗಳಲ್ಲಿ ಮಾತ್ರ ನಡೆಯುತ್ತಿತ್ತಾದರೂ ಈಗ ಅದಕ್ಕೆ ಇನ್ನೊಂದಷ್ಟು ಮೆರಗು ಬರುತ್ತಿದೆ.
ಈ ಕ್ರೀಡೆಯು ಶೂಟಿಂಗ್ನಲ್ಲಿ ಆಸಕ್ತಿಯಿರುವವರಿಗೆ ಪ್ರೋತ್ಸಾಹ ದೊರೆಯುತ್ತಿದ್ದು, ಹೆಚ್ಚಿನವರು ಆಸಕ್ತಿ ವಹಿಸಿ ಪಾಲ್ಗೊಳ್ಳುತ್ತಿದ್ದಾರೆ. ಇನ್ನು ಕೊಡಗಿನವರು ವೀರರು, ಶೂರರು, ಕ್ರೀಡಾಪ್ರೇಮಿಗಳು ಎನ್ನುವುದು ಇಲ್ಲಿ ನಡೆಯುವ ಹಬ್ಬಗಳಲ್ಲಿ, ಕ್ರೀಡಾಕೂಟಗಳಲ್ಲಿ ಕಾಣಸಿಗುತ್ತದೆ. ಜೊತೆಗೆ ಕೋವಿ ಹಿಡಿಯದ ಕೈಗಳೇ ಇಲ್ಲ ಎಂಬುದು ಕೂಡ ಅಷ್ಟೇ ಸತ್ಯ. ರಕ್ಷಣಾ ಪಡೆಗಳ ವಿವಿಧ ವಿಭಾಗಗಳಲ್ಲಿ ಇಲ್ಲಿನ ಯುವಕರು, ಯುವತಿಯರು ಕೆಲಸ ಮಾಡುತ್ತಿದ್ದರೆ, ಮಹಾನ್ ದಂಡನಾಯಕನಾಗಿ ಕೆಲಸ ಮಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಮೊದಲಾದವರು ಸೇರಿದಂತೆ ಅತ್ಯುನ್ನತ ಹುದ್ದೆಗಳನ್ನು ನಿರ್ವಹಿಸಿ ನಿವೃತ್ತರಾದವರು, ಹಾಲಿ ಹುದ್ದೆಯನ್ನು ನಿರ್ವಹಿಸುತ್ತಿರುವವರು ಇದ್ದಾರೆ.

ಹಾಗೆನೋಡಿದರೆ ಕೋವಿಗೂ ಕೊಡಗಿನವರಿಗೂ ಅವಿನಾಭಾವ ಸಂಬಂಧ. ಇವತ್ತಿಗೂ ಹೆಚ್ಚಿನವರ ಮನೆಯಲ್ಲಿ ಕೋವಿಗಳಿವೆ. ಹುಟ್ಟು ಸಾವಿನಿಂದ ಹಿಡಿದು ಹಬ್ಬ ಹರಿದಿನಗಳಲ್ಲಿಯೂ ಕೋವಿಗಳನ್ನು ಬಳಸಲಾಗುತ್ತದೆ. ಜತೆಗೆ ಇದಕ್ಕೆ ಪೂಜೆಯೂ ನಡೆಯುತ್ತದೆ. ಹಿಂದಿನ ಕಾಲದಲ್ಲಿ ಮಗು ಹುಟ್ಟಿದರೆ ಒಂದು ಗುಂಡನ್ನು ಆಕಾಶಕ್ಕೆ ಹಾರಿಸಿ ಜನಕ್ಕೆ ಮಗುವಾಗಿರುವ ಸಂತಸವನ್ನು ಹಂಚಿಕೊಳ್ಳಲಾಗುತ್ತಿತ್ತು. ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದರೆ ಜೋಡಿ ಗುಂಡನ್ನು ಹಾರಿಸುವ ಮೂಲಕ ಸಾವಿನ ಸುದ್ದಿಯನ್ನು ಸುತ್ತಮುತ್ತಲಿನ ಜನಕ್ಕೆ ಮುಟ್ಟಿಸಲಾಗುತ್ತಿತ್ತು. ಈ ಸಂಪ್ರದಾಯ ಈಗಲೂ ಇದೆ.
ಹಿಂದಿನ ಕಾಲದಲ್ಲಿ ಹೆಚ್ಚಿನ ಭಾಗವು ದಟ್ಟ ಕಾಡಿನಿಂದ ಆವೃತವಾಗಿತ್ತು. ಹೀಗಾಗಿ ವನ್ಯ ಪ್ರಾಣಿಗಳೊಂದಿಗೆ ಹೋರಾಡಿ ಬೆಳೆಗಳನ್ನು ಮತ್ತು ಜಾನುವಾರುಗಳನ್ನು ರಕ್ಷಿಸಬೇಕಾಗಿತ್ತು. ಅವತ್ತಿನ ದಿನಗಳಲ್ಲಿ ಹುಲಿಯನ್ನು ಬೇಟೆಯಾಡಿ ಕೊಂದರೆ ಆತನನ್ನು ಹುಲಿಯೊಂದಿಗೆ ನಿಲ್ಲಿಸಿ ಮೆರವಣಿಗೆ ನಡೆಸಿ ಊರ ಮಂದಿಗೆ ಊಟ ಹಾಕಿಸಲಾಗುತ್ತಿತ್ತು. ಇದನ್ನು ನರಿಮಂಗಲ(ಹುಲಿಮದುವೆ) ಎಂದು ಕರೆಯಲಾಗುತ್ತಿತ್ತು. ಆದರೆ ಇದನ್ನು ನಿಷೇಧಿಸಲಾಗಿದೆ. ಹಲವು ದಶಕಗಲ ಹಿಂದೆ ಕುಟುಂಬದವರು ಊರಿನವರು ಒಟ್ಟಾಗಿ ಕಾಡಿಗೆ ತೆರಳಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು. ಈಗ ಬೇಟೆ ನಿಷಿದ್ಧವಾಗಿವೆ. ಹೀಗಾಗಿ ಕೋವಿಯ ಬಳಕೆ ಕಡಿಮೆಯಾಗುತ್ತಿದೆ.
ಇದೆಲ್ಲದರ ನಡುವೆ ಹಿಂದಿನ ಕಾಲದಿಂದಲೇ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಂತು ಹಬ್ಬದ ದಿನಗಳಲ್ಲಿ ಮತ್ತು ಊರ ದೇವಾಲಯಗಳಲ್ಲಿ ನಡೆಯುವ ವಾರ್ಷಿಕೋತ್ಸವದಂದು ನಡೆಯುತ್ತಲೇ ಬರುತ್ತಿದೆ. ಈ ಸ್ಪರ್ಧೆಗಳಲ್ಲಿ ಪುರುಷರು ಮಾತ್ರವಲ್ಲದೆ, ಮಹಿಳೆಯರು ಕೂಡ ಕೋವಿ ಹಿಡಿದು ಗುರಿಯಿಟ್ಟು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸುತ್ತಾರೆ. ಇಲ್ಲಿ ಗೆದ್ದವರಿಗೆ ಬಹುಮಾನಗಳನ್ನು ನೀಡುವುದಲ್ಲದೆ, ಒಳ್ಳೆಯ ಗುರಿಕಾರ ಎಂಬ ಖ್ಯಾತಿಯೂ ಸಲ್ಲುತ್ತದೆ.
ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ಕೂರ್ಗ್ ಬೈರೇಸ್ ಮತ್ತು ಜಮ್ಮಾ ವಿನಾಯಿತಿಯಂತೆ ಕೋವಿ ಬಳಸಲು ವಿಶೇಷ ಅವಕಾಶವನ್ನು ನೀಡಲಾಗಿದೆ. ಹಿಂದೆ ವನ್ಯಪ್ರಾಣಿಗಳಿಂದ ಪ್ರಾಣ-ಬೆಳೆಗಳ ರಕ್ಷಣೆಗೂ ಇದನ್ನು ಬಳಸಲಾಗುತ್ತಿತ್ತಾದರೂ ಈಗ ಕಾನೂನಿನ ನಿರ್ಬಂಧ ಹೇರಿದ್ದು ಬೇಟೆಯನ್ನು ನಿಷೇಧಿಸಲಾಗಿದೆ. ಹೀಗಾಗಿ ಕೋವಿ ಹೊಂದಿರುವವರು ಕ್ರೀಡಾಕೂಟಗಳ ಸಂದರ್ಭ ತೆಂಗಿನ ಕಾಯಿಗೆ ಗುಂಡು ಹೊಡೆದು ತಮ್ಮ ಗುರಿಯನ್ನು ಪರೀಕ್ಷಿಸುವುದರೊಂದಿಗೆ ಶೌರ್ಯ ಮೆರೆಯುತ್ತಾರೆ.
ಹಿಂದೆ ಕೈಲುಮುಹೂರ್ತ ಹಬ್ಬದ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ತೆಂಗಿನ ಕಾಯಿಗೆ ಗುಂಡು ಹಾರಿಸುವ ಸ್ಪರ್ಧೆ ಮನೆ ಮನೆಗಳಲ್ಲಿ ನಡೆಯುತ್ತಿತ್ತು. ಅಷ್ಟೇ ಅಲ್ಲದೆ, ವಿವಿಧ ದೇವಾಲಯಗಳಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ ತೆಂಗಿನಕಾಯಿಗೆ ಗುಂಡು ಹಾರಿಸುವುದು ಸಂಪ್ರದಾಯವಾಗಿ ಬಂದಿದೆ. ಆದರೆ ತೆಂಗಿನ ಕಾಯಿಗೆ ಗುಂಡು ಹಾರಿಸುವ ಸ್ಪರ್ಧೆಗೆ ಒತ್ತು ನೀಡಿ ಅದನ್ನು ಜನಪ್ರಿಯಗೊಳಿಸುವ ಕಾರ್ಯವನ್ನು ಇದೀಗ ಮಾಡಲಾಗುತ್ತಿದೆ. ಆ ಮೂಲಕ ಮುಂದಿನ ದಿನಗಳಲ್ಲಿ ಇಲ್ಲಿನ ಯುವಕರನ್ನು ಶೂಟಿಂಗ್ ಸ್ಪರ್ಧೆಗೆ ತಯಾರಿ ಮಾಡುವ ಕೆಲಸವೂ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications