ಹಣ ಪಡೆದ ಸಂತ್ರಸ್ತರು ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ: ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ, ನವೆಂಬರ್ 5: ಕಳೆದ ವರ್ಷ (2019-20) ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಈಗಾಗಲೇ ಹಣ ನೀಡಲಾಗಿದ್ದು, ಪ್ರಥಮ ಹಂತದಲ್ಲಿ ಹಣ ಪಡೆದ ಶೇ.50ರಷ್ಟು ಸಂತ್ರಸ್ತರು ಮನೆ ನಿರ್ಮಾಣಕ್ಕೆ ಮುಂದಾಗಿಲ್ಲ ಎಂಬ ಮಾಹಿತಿ ಇದ್ದು, ಕೂಡಲೇ ಮನೆ ನಿರ್ಮಾಣ ಕಾಮಗಾರಿ ಆರಂಭಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರು, ಈಗಾಗಲೇ ಹಣ ಪಡೆದು ಮನೆ ನಿರ್ಮಿಸಿಕೊಳ್ಳದಿದ್ದಲ್ಲಿ, ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಬೇಕಾಗುತ್ತದೆ. ಆದ್ದರಿಂದ ಮನೆ ನಿರ್ಮಾಣಕ್ಕೆ ಮುಂದಾಗಬೇಕು. ಮನೆ ನಿರ್ಮಾಣ ಕಾಮಗಾರಿ ಪ್ರಗತಿ ಸಂಬಂಧ ಜಿಪಿಎಸ್ ಮೂಲಕ ಮಾಹಿತಿ ನೀಡಿದ್ದಲ್ಲಿ ಎರಡನೇ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ವಿನಯ್ ಕುಲಕರ್ಣಿ ಬಂಧನ: "ನಾನೇನೂ ಹೇಳುವುದಕ್ಕೆ ಬರಲ್ಲ"
ತಹಶೀಲ್ದಾರ ಹಂತದಲ್ಲಿಯೇ ಪರಿಶೀಲಿಸಿ ಸರ್ಕಾರಿ ಕಚೇರಿ ಕಟ್ಟಡಗಳು, ಅಂಗನವಾಡಿ, ವಿದ್ಯಾರ್ಥಿ ನಿಲಯ ಮತ್ತಿತರಕ್ಕೆ ಜಾಗ ಒದಗಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದರು.
ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಜಾಗ ಸಂಬಂಧಿಸಿದಂತೆ ಅರಣ್ಯ ಇಲಾಖೆಯವರಿಂದ ಮಾಹಿತಿ ಪಡೆದು ಹಿಂಬರಹ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
Recommended Video
ರೈತ ಸಂಪರ್ಕ ಕೇಂದ್ರಗಳು, ಕಸ ವಿಲೇವಾರಿ ಘಟಕ ನಿರ್ಮಾಣ ಸಂಬಂಧ ಕಾಲ ಮಿತಿಯೊಳಗೆ ಜಾಗ ಒದಗಿಸಬೇಕು. ಭೂಮಾಪನ ಇಲಾಖೆಯಿಂದ ಬಾಕಿ ಇರುವ ಸರ್ವೆ ಕಡತಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.
ತಾ.ಪಂ ಇಒಗಳು, ಗ್ರಾ.ಪಂ ಪಿಡಿಒಗಳ ಉಪಸ್ಥಿತಿಯಲ್ಲಿ ಸಭೆ ನಡೆಸಿ ತಮ್ಮ ತಾ.ಪಂ ವ್ಯಾಪ್ತಿಯಲ್ಲಿ ಜಾಗ ಮತ್ತಿತರ ಕಂದಾಯಕ್ಕೆ ಸಂಬಂಧಿಸಿದಂತೆ ಕೆಲಸಗಳು ಆಗಬೇಕಿದ್ದಲ್ಲಿ ಪಟ್ಟಿ ಮಾಡಿಕೊಂಡು ಬರಬೇಕು. ನಿಖರ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ತಾ.ಪಂ.ಇಒಗಳು ಮತ್ತು ತಹಶೀಲ್ದಾರರು ಜೊತೆಗೂಡಿ ಕೆಲಸ ಮಾಡಿದಾಗ ಹಲವು ಸಮಸ್ಯೆಗಳನ್ನು ಇತ್ಯರ್ಥಪಡಿಸಬಹುದು, ಸಮಸ್ಯೆಗಳಿದ್ದಲ್ಲಿ ಕಂದಾಯಾಧಿಕಾರಿಗಳ ಸಭೆಗೆ ಮಾಹಿತಿ ನೀಡಬೇಕು ಎಂದು ಅನೀಸ್ ಕಣ್ಮಣಿ ಜಾಯ್ ಅವರು ಹೇಳಿದರು.