ಕೊಡಗು ಜಿಲ್ಲೆಗೆ ಬರಲಿದೆ ಪ್ರವಾಸೋದ್ಯಮ ನೀತಿ
ಮಡಿಕೇರಿ, ಜೂನ್ 15: ಕರ್ನಾಟಕದಲ್ಲಿ ಪ್ರವಾಸಿಗರು ಅತಿ ಹೆಚ್ಚು ಭೇಟಿ ನೀಡುವ ಜಿಲ್ಲೆಗಳಲ್ಲಿ ಕೊಡಗು ಸಹ ಒಂದು. ಪ್ರವಾಸಿಗರಿಗೆ ಮತ್ತಷ್ಟು ಅನುಕೂಲ ಕಲ್ಪಿಸಲು ನೂತನ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ. ಈ ಕುರಿತು ಪ್ರವಾಸೋದ್ಯಮ ಸಚಿವರ ಜೊತೆ ಚರ್ಚೆ ನಡೆಸಲಾಗುತ್ತದೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹೇಳಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಶಾಸಕರು, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಹೋಂ ಸ್ಟೇ ಅಸೋಷಿಯೇಷನ್ನ ಪ್ರತಿನಿಧಿಗಳು ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಾತನಾಡಿದ ಶಾಸಕರು, "ಹೋಂ ಸ್ಟೇಗಳಿಗೆ ಸಂಬಂಧಿಸಿದಂತೆ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ವಿದ್ಯುತ್ ಶುಲ್ಕ ಸಂಬಂಧ ಪ್ರವಾಸೋದ್ಯಮ ಸಚಿವರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಹಾಗೂ ಆರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿ ವಿಸ್ತೃತವಾಗಿ ಚರ್ಚಿಸಲಾಗುವುದು" ಎಂದರು.
ಹಲವು ವಿಚಾರಳ ಕುರಿತು ಚರ್ಚೆ: ಸಭೆಯಲ್ಲಿ ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ವಾಣಿಜ್ಯ ಬಳಕೆ ಹಾಗೂ ಗೃಹ ಬಳಕೆ ವಿದ್ಯುತ್ ಶುಲ್ಕ ಸಂಬಂಧ ಒಂದೇ ರೀತಿಯ ಡೆಫಿನೇಶನ್ ಇರಬೇಕು. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರ ಜೊತೆ ಚರ್ಚಿಸಬೇಕು ಎಂದು ಚರ್ಚೆ ನಡೆಯಿತು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಗಮನಹರಿಸಬೇಕು ಎಂದು ಶಾಸಕರು ಸಭೆಯಲ್ಲಿ ತಿಳಿಸಿದರು.
ಎಲ್ಲೆಂದರಲ್ಲಿ ಕಸ ಬಿಸಾಡಬಾರದು. ಪ್ಲಾಸ್ಟಿಕ್ ಅನ್ನು ಕಡ್ಡಾಯವಾಗಿ ಬಳಸಬಾರದು. ಹಸಿಕಸ ಮತ್ತು ಒಣಕಸವನ್ನು ಬೇರ್ಪಡಿಸಿ ನೀಡಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕರು ಸಭೆಯಲ್ಲಿ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹೋಂ ಸ್ಟೇ ಅಸೋಷಿಯೇಷನ್ನ ಪ್ರತಿನಿಧಿಗಳು ನೋಂದಾಯಿತ ಹೋಂಸ್ಟೇ ಅವರು ಮನೆಯಲ್ಲಿ ಪ್ರವಾಸಿಗರಿಗೆ ವಾಸ್ತವ್ಯಕ್ಕೆ ಅವಕಾಶ ಮಾಡುತ್ತಾರೆ. ಅದನ್ನು ಬಿಟ್ಟು ಹೋಟೆಲ್ ಮಾದರಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಸುತ್ತಿಲ್ಲ. ಆದ್ದರಿಂದ ಗೃಹ ಬಳಕೆಯಂತೆ ವಿದ್ಯುತ್ ಅನ್ನು ನೀಡಬೇಕು ಎಂದು ಕೋರಿದರು.
ಕರ್ನಾಟಕ ವಿದ್ಯುತ್ಚ್ಛಕ್ತಿ ನಿಯಂತ್ರಣ ಮಂಡಳಿ ಇಂಜಿನಿಯರ್ಗಳು ತಪಾಸಣೆ ಕೈಗೊಂಡು ವಾಣಿಜ್ಯ ಬಳಕೆಯಂತೆ ವಿದ್ಯುತ್ ದರ ನಿಗದಿ ಮಾಡುತ್ತಾರೆ. ಇದರಿಂದ ಹೋಂಸ್ಟೇ ನಡೆಸುವವರಿಗೆ ತುಂಬಾ ತೊಂದರೆಯಾಗಿದೆ ಎಂದು ಹೋಂಸ್ಟೇ ಪ್ರತಿನಿಧಿಗಳು ಶಾಸಕರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಅನಿತಾ ಬಾಯಿ, "ಪ್ರವಾಸೋದ್ಯಮ ನೀತಿಯಡಿ ಹೋಂ ಸ್ಟೇ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಕ್ರಮವಹಿಸಲಾಗಿದೆ. ವಿದ್ಯುತ್ ನಿಗಮದಿಂದ ವಾಣಿಜ್ಯ ಮತ್ತು ಗೃಹ ಬಳಕೆ ಸಂಬಂಧಿಸಿದಂತೆ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶಗಳನ್ನು ಪಾಲಿಸಲಾಗುತ್ತಿದೆ" ಎಂದರು.
ಕೊಡಗು ಜಿಲ್ಲೆಯಲ್ಲಿ ಕೃಷಿ ಜೊತೆಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ. ಇದರಿಂದ ಉದ್ಯೋಗ ಸೃಷ್ಟಿ ಮಾಡಲು ಸಹಕಾರಿಯಾಗಲಿದೆ ಎಂದು ಹೋಂಸ್ಟೇ ಅಸೋಷಿಯೇಷನ್ ಮಾಜಿ ಅಧ್ಯಕ್ಷರಾದ ಕರುಂಬಯ್ಯ ಹೇಳಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, "ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಸಂಬಂಧಿಸಿದಂತೆ ವೆಬ್ಸೈಟ್ನಲ್ಲಿ ಪವಿತ್ರ ದೇವಾಲಯಗಳು ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಮಾಹಿತಿ ಒದಗಿಸಲು ಮತ್ತಷ್ಟು ಕ್ರಮವಹಿಸಬೇಕಿದೆ" ಎಂದರು.
"ಜಿಲ್ಲೆಯಲ್ಲಿ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲೆಡೆ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬರೆಸಬೇಕು. ಇದನ್ನು ಚಾಚೂ ತಪ್ಪದೇ ಪಾಲಿಸಬೇಕು. ಇದುವರೆಗೆ ಈ ರೀತಿ ನಾಮಫಲಕ ಬರೆಸದಿದ್ದಲ್ಲಿ ಶೀಘ್ರ ನಾಮಫಲಕಗಳನ್ನು ಬದಲಿಸುವಂತೆ" ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು.
ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೋಂಸ್ಟೇ ಸಂಬಂಧಿಸಿದಂತೆ ಬೇರೆ ಬೇರೆ ರೀತಿಯ ಶುಲ್ಕ ಪಡೆಯಲಾಗುತ್ತಿದ್ದು, ಒಂದೇ ರೀತಿಯ ಶುಲ್ಕ ಪಾವತಿಸಿಕೊಳ್ಳಬೇಕು ಎಂದು ಮನವಿ ಮಾಡಲಾಯಿತು. ಈ ಕುರಿತು ಪ್ರಕ್ರಿಯಿಸಿದ ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ ಮಾತನಾಡಿ, "ಗ್ರಾಮ ಪಂಚಾಯಿತಿ ಆಡಳಿತದಲ್ಲಿ ತಮ್ಮದೇ ಆದ ಸದಸ್ಯರನ್ನು ಹೊಂದಿರುವ ಸ್ಥಳೀಯ ಸಂಸ್ಥೆಯಾಗಿದ್ದು, ಸ್ಥಳೀಯ ಸಂಪನ್ಮೂಲವನ್ನು ಗಮನಿಸಿಕೊಂಡು ತೆರಿಗೆ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮಧ್ಯ ಪ್ರವೇಶ ಮಾಡುವುದಿಲ್ಲ" ಎಂದರು.
ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಮಾತನಾಡಿ, "ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಹೋಂ ಸ್ಟೇ ಸಂಬಂಧಿಸಿದಂತೆ ಮಾಹಿತಿ ನೀಡಲಾಗಿದೆ. ಒಂದು ಮನೆಯಲ್ಲಿ 6 ರಿಂದ 8 ಕೊಠಡಿಯಲ್ಲಿ ಹೋಂಸ್ಟೇ ನಡೆಸಬಹುದಾಗಿದೆ. ಹೋಂಸ್ಟೇ ನಡೆಸಲು ಪ್ರವಾಸೋದ್ಯಮ ಇಲಾಖೆಯಲ್ಲಿ ಹೆಸರು ನೋಂದಾಯಿಸಿಕೊಂಡು ಸ್ಥಳೀಯ ಸಂಸ್ಥೆಗಳಲ್ಲಿ ಅನುಮತಿ ಪಡೆಯಬೇಕಿದೆ. ಪೊಲೀಸ್ ಇಲಾಖೆಯಿಂದ ಎನ್ಒಸಿ ಪಡೆಯಬೇಕಿದೆ" ಎಂದು ತಿಳಿಸಿದರು.
ಪೊಲೀಸ್ ಅಧಿಕಾರಿ ಐ. ಪಿ. ಮೇದಪ್ಪ ಮಾತನಾಡಿ, "ಸಿಸಿಟಿವಿ ಇರಬೇಕು. ವಾಹನ ನಿಲುಗಡೆ ಜಾಗ ಇರಬೇಕು. ಹತ್ತಿರದವರಿಂದ ಯಾವುದೇ ರೀತಿಯ ಆಕ್ಷೇಪಣೆ ಇಲ್ಲದಿರುವ ಬಗ್ಗೆ ಮಾಹಿತಿ ಪಡೆಯಲಾಗುತ್ತದೆ. ಹೋಂಸ್ಟೇ ನಡೆಸುವ ಮಾಲೀಕರ ವಿರುದ್ದ ಪೊಲೀಸ್ ಇಲಾಖೆಯಲ್ಲಿ ಯಾವುದೇ ದೂರು ಇರಬಾರದು. ಅಂತವರಿಗೆ 10 ದಿನದೊಳಗೆ ಎನ್ಒಸಿ ನೀಡಲಾಗುತ್ತದೆ" ಎಂದು ಹೇಳಿದರು.












Click it and Unblock the Notifications