ಕೆಎಸ್ಆರ್ಟಿಸಿ ಬಸ್ ಅಪಘಾತ, ಜನರಲ್ ತಿಮ್ಮಯ್ಯ ಪ್ರತಿಮೆಗೆ ಹಾನಿ
ಮಡಿಕೇರಿ, ಆಗಸ್ಟ್ 21: ಕೆಎಸ್ಆರ್ಟಿಸಿ ಬಸ್ ಮಡಿಕೇರಿಯ ಕೆ. ಎಸ್. ಜನರಲ್ ತಿಮ್ಮಯ್ಯ ವೃತ್ತದಲ್ಲಿ ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ, ಜನರಲ್ ತಿಮ್ಮಯ್ಯ ಪ್ರತಿಮೆಗೆ ಹಾನಿಯಾಗಿದೆ.
ಸೋಮವಾರ ಬೆಳಗ್ಗೆ ಮೈಸೂರು- ಮಂಗಳೂರು ಮಾರ್ಗದ ಕೆಎಸ್ಆರ್ಟಿಸಿ ಬಸ್ ಮಡಿಕೇರಿ ನಗರದಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸುಮಾರು 50 ವರ್ಷ ಹಳೆಯ ಕೆ. ಎಸ್. ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿಯಾಗಿದೆ.

ಎದುರು ಬಂದ ವಾಹನಕ್ಕೆ ಬಸ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕೆ. ಎಸ್. ಜನರಲ್ ತಿಮ್ಮಯ್ಯ ಪ್ರತಿಮೆ ಇರುವ ವೃತ್ತಕ್ಕೆ ಡಿಕ್ಕಿಯಾಗಿದೆ. ಬಸ್ ಡಿಪೋದಿಂದ ನಿಲ್ದಾಣಕ್ಕೆ ಆಗಮಿಸುತ್ತಿತ್ತು. ಆದ್ದರಿಂದ ಯಾವುದೇ ಪ್ರಯಾಣಿಕರು ಇರಲಿಲ್ಲ. ಆದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.
ಪ್ರತಿಮೆ ಸ್ಥಳಾಂತರ; ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಬಳಿಕ ಜನರಲ್ ಕೆ. ಎಸ್. ತಿಮ್ಮಯ್ಯ ಪ್ರತಿಮೆಗೆ ಹಾನಿಯಾಗಿದೆ. ಕೆಳಗೆ ಕುಸಿದು ಬಿದ್ದ ಪ್ರತಿಮೆಯನ್ನು ಸ್ಥಳಾಂತರ ಮಾಡಲಾಯಿತು. ಬಸ್ ಡಿಕ್ಕಿಯಿಂದಾಗಿ ವೃತ್ತಕ್ಕೆ ಭಾರೀ ಹಾನಿಯಾಗಿದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮಡಿಕೇರಿಯ ಕಾಂಗ್ರೆಸ್ ಶಾಸಕ ಡಾ. ಮಂಥರ್ ಗೌಡ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಸ್ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಕುರಿತು ಶಾಸಕರು ಫೇಸ್ಬುಕ್ ಪೋಸ್ಟ್ ಹಾಕಿದ್ದು, ಭಾರತ ದೇಶದ ಹೆಮ್ಮೆಯ ವೀರ ಸೇನಾಧಿಕಾರಿ ಜನರಲ್ ಕೆ. ಎಸ್. ತಿಮ್ಮಯ್ಯರವರ ಪ್ರತಿಮೆಗೆ ಭಾರೀ ಹಾನಿ ಸಂಭವಿಸಿದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಾಯಿತು ಎಂದು ಹೇಳಿದ್ದಾರೆ.
ಮಡಿಕೇರಿ ನಗರದ ಜನರಲ್ ಕೆ. ಎಸ್. ತಿಮ್ಮಯ್ಯ ವೃತ್ತದಲ್ಲಿ ಹಲವು ವರ್ಷಗಳಿಂದ ಜನರಲ್ ಕೆ. ಎಸ್. ತಿಮ್ಮಯ್ಯ ಪ್ರತಿಮೆ ಇದೆ. ಇದೇ ಮೊದಲ ಬಾರಿಗೆ ವಾಹನವೊಂದು ವೃತ್ತಕ್ಕೆ ಡಿಕ್ಕಿ ಹೊಡೆದು ಪ್ರತಿಮೆಗೆ ಹಾನಿಯಾಗಿದೆ.
ಸೋಮವಾರ ಮುಂಜಾನೆ ಮಂಜು ಮುಸುಕಿದ ವಾತಾವರಣವಿತ್ತು. ಬಸ್ ಚಾಲಕ ಡಿಪೋದಿಂದ ನಿಲ್ದಾಣಕ್ಕೆ ಬರುವಾಗ ಎದುರು ಬಂದ ವಾಹನವನ್ನು ತಪ್ಪಿಸಲು ಹೋಗಿ ಜನರಲ್ ಕೆ. ಎಸ್. ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದಾನೆ. ಬಸ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ.
ಅಪಘಾತದ ಮಾಹಿತಿ ಪಡೆದ ಬಳಿಕ ಮಡಿಕೇರಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಅಪಘಾತಗೊಂಡಿದ್ದ ಬಸ್ ತೆರವುಗೊಳಿಸಿ ಸಂಚಾರ ದಟ್ಟಣೆ ಉಂಟಾಗದಂತೆ ಕ್ರಮ ಕೈಗೊಂಡರು. ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜನರಲ್ ಕೆ. ಎಸ್. ತಿಮ್ಮಯ್ಯ ಪ್ರತಿಮೆಗೆ ಹಾನಿಯಾಗಿರುವ ಕುರಿತು ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ವಿಷಾದ ವ್ಯಕ್ತಪಡಿಸಿದ್ದಾರೆ. ಪ್ರತಿಮೆ ಪುನರ್ ಪ್ರತಿಷ್ಠಾಪಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.












Click it and Unblock the Notifications