ಕೊಡಗು ಪ್ರವಾಹ ಸಂತ್ರಸ್ತರ ಸ್ಥಿತಿ-ಗತಿ ಅವಲೋಕಿಸಿದ ಲೋಕಾಯುಕ್ತರು
ಕೊಡಗು, ಆಗಸ್ಟ್ 31: ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು ಕೊಡಗು ಪ್ರವಾಹ ಸಂತ್ರಸ್ತರ ಸ್ಥಿತಿಗತಿ ಅವಲೋಕಿಸಿದರು. ಕುಶಾಲನಗರದಲ್ಲಿನ ಅಂಬೇಡ್ಕರ್ ಭವನ, ವಾಲ್ಮೀಕಿ ಸಮುದಾಯ ಭವನ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿರುವ ಪರಿಹಾರ ಕೇಂದ್ರಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಪರಿಹಾರ ಕೇಂದ್ರಗಳಲ್ಲಿನ ಸಂತ್ರಸ್ತರ ಕುಂದುಕೊರತೆ ವಿಚಾರಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಅವರು ಸಂತ್ರಸ್ತರಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸುತ್ತಿದೆ. ಆ ದಿಸೆಯಲ್ಲಿ ಜಿಲ್ಲಾಡಳಿತ ಸಂತ್ರಸ್ತರಿಗೆ ಊಟೋಪಚಾರ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದೆ.
ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿ.ಪಂ.ಸಿಇಒ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಣ್ಣಪುಟ್ಟ ಕುಂದುಕೊರತೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಪರಿಹರಿಸಿಕೊಳ್ಳುವಂತಾಗಬೇಕು ಎಂದರು.
ಸಂತ್ರಸ್ತರಿಗೆ ಉತ್ತಮ ಬದುಕು ಕಟ್ಟಿಕೊಡಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ. ಆ ನಿಟ್ಟಿನಲ್ಲಿ ವಸತಿ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಯಾರೂ ಸಹ ವಿಚಲಿತರಾಗಬಾರದು, ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆ ಕಳುಹಿಸಬೇಕು.

ಆ ನಿಟ್ಟಿನಲ್ಲಿ ಪುತ್ತೂರು ಮತ್ತಿತರ ಕಡೆಗಳಲ್ಲಿ ಖಾಸಗಿ ಸಂಸ್ಥೆಗಳು ಉಚಿತ ಶಿಕ್ಷಣ ನೀಡಲು ಮುಂದೆ ಬಂದಿದ್ದು, ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.
ಸಂತ್ರಸ್ತರ ನೆರವಿಗಾಗಿ ಜಿಲ್ಲಾಡಳಿತ ಸದಾ ಸ್ಪಂದಿಸುತ್ತಿದೆ. ತಳ ಮಟ್ಟದ ಅಧಿಕಾರಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕನಿಷ್ಠ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಯಾವುದೇ ರೀತಿಯ ಕುಂದು ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಲೋಕಾಯುಕ್ತ ವತಿಯಿಂದಲೂ ಇಬ್ಬರು ಎಸ್ಪಿ ಮೂವರು ಡಿವೈಎಸ್ ಪಿ ಮತ್ತು ಇನ್ಸ್ ಪೆಕ್ಟರ್ ಗಳನ್ನು ನಿಯೋಜಿಸಲಾಗಿದೆ. ಇವರು ಪ್ರತಿನಿತ್ಯ ವರದಿ ನೀಡುತಿದ್ದಾರೆ ಎಂದರು.
ಊಟೋಪಚಾರದಲ್ಲಿ ಯಾವುದೇ ರೀತಿಯಲ್ಲಿ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ. ಜೊತೆಗೆ ಗುಣಮಟ್ಟದ ಉತ್ತಮ ಆಹಾರ ನೀಡಲಾಗುತ್ತಿದೆ. ಪರಿಹಾರ ಕೇಂದ್ರದಲ್ಲಿ ಇಬ್ಬರು ವೈದ್ಯರು ಹಾಗೂ ಶ್ರೂಶ್ರೂಷಕರನ್ನು ನಿಯೋಜಿಸಲಾಗಿದೆ.
ಹಾಗೆಯೇ ಅಗತ್ಯ ಔಷಧ ಪೂರೈಸಲಾಗಿದೆ. ಬಿಸಿ ನೀರು ವ್ಯವಸ್ಥೆಗಾಗಿ ಗೀಜರ್ ಅಳವಡಿಸಲಾಗಿದೆ. ಈಗಾಗಲೇ ಹೆಚ್ಚುವರಿ ಮೊಬೈಲ್ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ ಎಂದು ಲೋಕಾಯುಕ್ತ ನ್ಯಾಯ ಮೂರ್ತಿ ಅವರು ನುಡಿದರು.
ಅಧಿಕಾರಿಗಳು ಪರಿಹಾರ ಕೇಂದ್ರದಲ್ಲಿದ್ದು, ಯಾವುದೇ ಕೋರತೆ ಉಂಟಾಗದಂತೆ ಗಮನ ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಅವರು ತಿಳಿಸಿದರು. ಲೋಕಾಯುಕ್ತ ಎಡಿಜಿಪಿ ಸಂಜಯ್, ಹಿರಿಯ ಐಎಎಸ್ ಅಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ, ತಹಶೀಲ್ದಾರ್ ಮಹೇಶ್, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್, ಪ.ಪಂ.ಮುಖ್ಯಾಧಿಕಾರಿ ಶ್ರೀಧರ್ ಇದ್ದರು.












Click it and Unblock the Notifications