ಶಕ್ತಿ ದೇವತೆಗಳ ಕರಗದೊಂದಿಗೆ ಆರಂಭಗೊಂಡಿದೆ ಮಡಿಕೇರಿ ದಸರಾ
ಮಡಿಕೇರಿ, ಸೆಪ್ಟೆಂಬರ್ 30: ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವದೊಂದಿಗೆ ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ಜನೋತ್ಸವ ದಸರಾಗೆ ಭಾನುವಾರ ಸಂಜೆ ಚಾಲನೆ ನೀಡಲಾಯಿತು.
ನಗರದ ಕುಂದೂರುಮೊಟ್ಟೆ ಚೌಟಿ ಮಾರಿಯಮ್ಮ, ದಂಡಿನ ಮಾರಿಯಮ್ಮ, ಕೋಟೆ ಮಾರಿಯಮ್ಮ ಹಾಗೂ ಕಂಚಿ ಕಾಮಾಕ್ಷಿಯಮ್ಮ ಈ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವಕ್ಕೆ ಪಂಪಿನಕೆರೆಯಲ್ಲಿ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಾನುವಾರ ಒಂಬತ್ತು ದಿನಗಳ ನವರಾತ್ರಿ ದಸರಾ ಉತ್ಸವಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಚಾಲನೆ ನೀಡಿದರು.
ಮಡಿಕೇರಿಯಲ್ಲಿ ದಸರಾ ಆಚರಣೆಗೂ ಒಂದು ಹಿನ್ನೆಲೆಯಿದೆ. ಸುಮಾರು 189 ವರ್ಷಗಳ ಹಿಂದೆ ಮಡಿಕೇರಿ ನಗರದಲ್ಲಿ ಸಾಂಕ್ರಾಮಿಕ ರೋಗ ಹರಡಿತ್ತಂತೆ. ಆ ಸಂದರ್ಭ ರೋಗ ಹರಡಲು ಕಾರಣ ಹುಡುಕಿಕೊಂಡು ಧಾರ್ಮಿಕ ಮುಖಂಡರು ದೇವರ ಮೊರೆ ಹೋದರು. ಆಗ ಮಹಾಮಾರಿ ರೋಗಕ್ಕೆ ದುಷ್ಟ ಶಕ್ತಿಗಳು ಕಾರಣವಾಗಿದ್ದು, ಅದಕ್ಕೆ ಊರ ಹೊರಗಿರುವ ನಾಲ್ಕು ಶಕ್ತಿದೇವತೆಗಳನ್ನು ಒಳಕರೆದು ನವರಾತ್ರಿಯ ಸಂದರ್ಭ ಕರಗ ಹೊರಡಿಸುವ ಮೂಲಕ ನಗರ ಪ್ರದಕ್ಷಿಣೆ ಮಾಡಿಸಿದರೆ ಸಮಸ್ಯೆ ನಿವಾರಣೆಯಾವುದಾಗಿ ತಿಳಿದುಬಂದಿದೆ. ಅದರಂತೆ ನಾಲ್ಕು ಶಕ್ತಿದೇವತೆಗಳ ಕರಗಗಳನ್ನು ಹೊರಡಿಸಿ ಪೂಜೆ ಸಲ್ಲಿಸುವ ಕಾರ್ಯ ಆರಂಭಿಸಲಾಯಿತು.
ನವರಾತ್ರಿ ಮೊದಲ ದಿನ ಮಡಿಕೇರಿಯ ಪಂಪಿನಕೆರೆ ಬಳಿ ಸಾಂಪ್ರದಾಯಿಕ ಪೂಜೆಯೊಂದಿಗೆ ಹೊರಡುವ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ದಂಡಿನಮಾರಿಯಮ್ಮ ಹಾಗೂ ಕುಂದುರುಮೊಟ್ಟೆ ಮಾರಿಯಮ್ಮ ಕರಗಗಳು ದೊಡ್ಡಪೇಟೆಯ ರಾಮಮಂದಿರಕ್ಕೆ ತೆರಳಿ ಅಲ್ಲಿ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸಿದ ನಂತರ ನಗರ ಪ್ರದಕ್ಷಿಣೆ ಹೊರಡುವ ಧಾರ್ಮಿಕ ಸಂಪ್ರದಾಯವನ್ನು ರೂಢಿಗೆ ತಂದಿದ್ದು, ಅಂದಿನಿಂದ ಇಂದಿನವರೆಗೂ ಅದೇ ಸಂಪ್ರದಾಯ ನಡೆದುಕೊಂಡು ಬರುತ್ತಿದೆ.
ನವರಾತ್ರಿಯ ಮೊದಲ ದಿನ (ಮಹಾಲಯ ಅಮವಾಸ್ಯೆಯ ಮಾರನೆಯ ದಿನ) ಸಂಜೆ ಸುಮೂಹೂರ್ತದಲ್ಲಿ ನಗರದ ಸೋಮವಾರಪೇಟೆ ರಸ್ತೆಯಲ್ಲಿರುವ ಪಂಪಿನಕೆರೆಯಲ್ಲಿ ನೆರೆದ ಗಣ್ಯರ ಸಮ್ಮುಖದಲ್ಲಿ ಕರಗಪೂಜೆ ನಡೆಯುತ್ತದೆ. ಆ ನಂತರ ಕರಗ ಹೊರಡುತ್ತದೆ. ಅದು ಮಡಿಕೇರಿ ದಸರಾಕ್ಕೆ ವಿದ್ಯುಕ್ತ ಚಾಲನೆಯೂ ಹೌದು. ಆ ನಂತರ ಒಂಬತ್ತು ದಿನಗಳ ಕಾಲ ಕರಗವು ನಗರ ಪ್ರದಕ್ಷಿಣೆ ಹಾಕುತ್ತದೆ. ಈ ಸಂದರ್ಭ ನಗರದ ಜನರು ಕರಗ ಬರುವ ದಾರಿಯನ್ನು ಗುಡಿಸಿ, ಸಾರಿಸಿ ರಂಗೋಲಿಯಿಟ್ಟು ಬರಮಾಡಿಕೊಳ್ಳುತ್ತಾರೆ.