ಇಂದು ಮಡಿಕೇರಿ ದಸರಾಗೆ ವಿಧ್ಯುಕ್ತ ಚಾಲನೆ
ಮಡಿಕೇರಿ, ಅಕ್ಟೋಬರ್ 2: ಕೊಡಗಿನ ಬೆಡಗಿನ ದಸರಾ ಎಂದೇ ಕರೆಯುವ, ಮಂಜಿನನಗರಿಯಲ್ಲಿ ಆಚರಿಸುವ ಮಡಿಕೇರಿ ದಸರಾಕ್ಕೆ ಭಾನುವಾರ ಸಂಜೆ ಚಾಲನೆ ದೊರೆಯಲಿದೆ.
ಮಧ್ಯಾಹ್ನ ನಾಲ್ಕು ಶಕ್ತಿದೇವತೆಗಳ ದೇವಸ್ಥಾನಗಳಿಂದ ವ್ರತಧಾರಿಗಳೊಂದಿಗೆ ದೇವಾಲಯ ಸಮಿತಿಯವರು ಮಂಗಳವಾದ್ಯ ಸಹಿತ ಕರಗ ನಿರ್ಮಾಣಕ್ಕೆ ಅಗತ್ಯವಾದ ಸಾಮಗ್ರಿಗಳನ್ನು ಹೊತ್ತು, ಮೆರವಣಿಗೆಯ ಮೂಲಕ ಬನ್ನಿ ಮಂಟಪಕ್ಕೆ ತೆರಳುತ್ತಾರೆ.
ಅಗತ್ಯ ಪೂಜಾ ವಿಧಿ-ವಿಧಾನಗಳೊಂದಿಗೆ ಅತ್ಯಾಕರ್ಷಕವಾಗಿ ಕರಗಗಳನ್ನು ಕಟ್ಟಿ, ಹೂವುಗಳಿಂದ ಅಲಂಕರಿಸಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಿದ್ದಾರೆ. ಸಂಜೆ ನಗರದ ಪಂಪಿನಕೆರೆ ಬಳಿ ಮಡಿಕೇರಿ ನಗರ ದಸರಾ ಸಮಿತಿ, ದಸರಾ ಉಪ ಸಮಿತಿ, ದಶಮಂಟಪ ಸಮಿತಿಯ ಪದಾಧಿಕಾರಿಗಳು ಸಾರ್ವಜನಿಕ ಪ್ರಮುಖರು ಜನಪ್ರತಿನಿಧಿಗಳು ಅಧಿಕಾರಿಗಳು ಸಂಜೆ ಕರಗಗಳಿಗೆ ಪೂಜೆ ಸಲ್ಲಿಸುತ್ತಾರೆ.[ತಲಕಾವೇರಿ: ಬ್ರಹ್ಮಗಿರಿ ಬೆಟ್ಟವನ್ನೇರಲು ನಿರ್ಬಂಧ ಇಲ್ಲ!]

ಆ ನಂತರ ನಾಡಿಗೆ ಸುಭಿಕ್ಷೆ ಉಂಟಾಗಲೆಂದು ಪ್ರಾರ್ಥಿಸುವ ಮೂಲಕ ಐತಿಹಾಸಿಕ ದಸರಾ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಪಂಪಿನ ಕೆರೆ ಆವರಣದಿಂದ ಹೊರ ಬಂದ ನಾಲ್ಕು ಕರಗಗಳ ಮೆರವಣಿಗೆಗೆ ಈಡುಗಾಯಿ ಒಡೆಯುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ.
ಪಂಪಿನಕೆರೆ ಬಳಿಯಿಂದ ಹೊರಟ ನಾಲ್ಕು ಕರಗಗಳು ಎ.ವಿ.ಶಾಲೆ ಬಳಿಯ ಬನ್ನಿಮಂಟಪಕ್ಕೆ ತೆರಳಿ, ಅಲ್ಲಿಂದ ಮಹದೇವಪೇಟೆಯ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿದ ಬಳಿಕ ಸಂಪ್ರದಾಯದಂತೆ ಪೇಟೆ ಶ್ರೀರಾಮಮಂದಿರ ತಲುಪುತ್ತದೆ.[ಅಕ್ಟೋಬರ್ 17ರಂದು ತಲ ಕಾವೇರಿಯಲ್ಲಿ ತೀರ್ಥೋದ್ಭವ]
ಅಲ್ಲಿ ಕರಗಗಳಿಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ದೇವಾಲಯಗಳಿಗೆ ತೆರಳಲಿವೆ. ದಾರಿಯುದ್ದಕ್ಕೂ ಸಾರ್ವಜನಿಕರು ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಲಿದ್ದು, ವಿಜಯದಶಮಿವರೆಗೆ ಕರಗವು ನಗರ ಪ್ರದಕ್ಷಿಣೆ ನಡೆಸಲಿದೆ.
ದಸರಾ ಸೂತ್ರಧಾರಿ ಕರಗಗಳು
ನಾಲ್ಕು ಶಕ್ತಿದೇವತೆಗಳಾದ ಕಂಚಿ ಕಾಮಾಕ್ಷಿಯಮ್ಮ, ಕೋಟೆ ಮಾರಿಯಮ್ಮ, ದಂಡಿನಮಾರಿಯಮ್ಮ ಹಾಗೂ ಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯಗಳ ಕರಗಗಳು ಮಡಿಕೇರಿ ದಸರಾದ ಸೂತ್ರಧಾರಿಗಳು.
ಮಡಿಕೇರಿ ನಗರದಲ್ಲಿ ಕರಗ ಆಚರಣೆ ಜಾರಿಗೆ ಬರಲು ಕೂಡ ಕಾರಣವಿದೆ. ನೂರಾರು ವರ್ಷಗಳ ಹಿಂದೆ ಮಡಿಕೇರಿ ನಗರದಲ್ಲಿ ಸಾಂಕ್ರಾಮಿಕ ರೋಗ ಹರಡಿತ್ತಂತೆ. ಆ ಸಂದರ್ಭದಲ್ಲಿ ರೋಗ ಹರಡಲು ಕಾರಣ ಹುಡುಕಿಕೊಂಡು ಧಾರ್ಮಿಕ ಮುಖಂಡರು ದೇವರ ಮೊರೆ ಹೋದರು.
ಆಗ ಮಹಾಮಾರಿ ರೋಗಕ್ಕೆ ದುಷ್ಟ ಶಕ್ತಿಗಳು ಕಾರಣವಾಗಿದ್ದು, ಅದಕ್ಕೆ ಊರ ಹೊರಗಿರುವ ನಾಲ್ಕು ಶಕ್ತಿದೇವತೆಗಳನ್ನು ಒಳಕರೆದು ನವರಾತ್ರಿಯ ಸಂದರ್ಭ ಕರಗ ಹೊರಡಿಸುವ ಮೂಲಕ ನಗರ ಪ್ರದಕ್ಷಿಣೆ ಮಾಡಿಸಿದರೆ ನಗರದಲ್ಲಿ ತಲೆದೋರಿರುವ ಸಾಂಕ್ರಾಮಿಕ ರೋಗ ನಿವಾರಣೆಯಾವುದಾಗಿ ತಿಳಿದು ಬಂತಂತೆ.[ಮಡಿಕೇರಿ: ಹದಿನೆಂಟು ಮೆಟ್ಟಿಲ ಮೇಲೆ ವಿರಾಜಮಾನನಾದ ಗಣಪ]

ಅದರಂತೆ ನಾಲ್ಕು ಶಕ್ತಿದೇವತೆಗಳ ಕರಗಗಳನ್ನು ಹೊರಡಿಸಿ ಪೂಜೆ ಸಲ್ಲಿಸುವ ಕಾರ್ಯ ಆರಂಭಿಸಲಾಯಿತು. ಈ ಕರಗ ಹೊರಡಿಸುವ ಸಂದರ್ಭ ಪೌರಾಣಿಕ ಹಿನ್ನೆಲೆಯಲ್ಲಿ ಧಾರ್ಮಿಕ ಸಂಪ್ರದಾಯವನ್ನು ಕೂಡ ಆಚರಣೆಗೆ ತರಲಾಯಿತು.
ಪಾರ್ವತಿಯು ದುಷ್ಟ ರಾಕ್ಷಸರ ಸಂಹಾರಕ್ಕೆ ಹೊರಡುವ ಮುನ್ನ ಮಹಾವಿಷ್ಣುವಿನ ಬಳಿಗೆ ತೆರಳಿದಳಂತೆ. ಆಗ ವಿಷ್ಣು ತನ್ನ ಅಸ್ತ್ರಗಳಾದ ಶಂಕ, ಚಕ್ರ, ಗಧೆ, ಪದ್ಮವನ್ನು ಆಕೆಗೆ ದಯಪಾಲಿಸಿದನಂತೆ. ಆ ನಂತರ ಪಾರ್ವತಿಯು ವಿವಿಧ ದೇವಿಯರ ಅವತಾರಗಳಲ್ಲಿ ತೆರಳಿ, ದುಷ್ಟ ರಾಕ್ಷಸರನ್ನು ಸಂಹರಿಸಿದಳಂತೆ.
ಹಾಗಾಗಿಯೇ ಪಾರ್ವತಿ ಅವತಾರದ ನಾಲ್ಕು ಶಕ್ತಿದೇವತೆಗಳು ಊರೊಳಗೆ ಅಂದರೆ ಮಹಾವಿಷ್ಣುವಿನ ಸ್ಥಾನಕ್ಕೆ ಬರುವ ಸಂಪ್ರದಾಯ ಜಾರಿಗೆ ತರಲಾಯಿತು. ಆದರೆ ಆ ಕಾಲದಲ್ಲಿ ನಗರದಲ್ಲಿ ಮಹಾವಿಷ್ಣುವಿನ ದೇವಾಲಯ ಇಲ್ಲದ ಕಾರಣಕ್ಕೆ ನಗರದ ದೊಡ್ಡಪೇಟೆಯಲ್ಲಿ ಪೂಜಾ ಮಂದಿರವನ್ನು ನಿರ್ಮಿಸಿ ಅಲ್ಲಿ ರಾಮನ ಚಿತ್ರಪಟವನ್ನಿರಿಸಿ ಪೂಜಿಸಲಾಯಿತು.[ಕೊಡಗಿನ ಕಂಪು ಸೂಸುವ ಶ್ರೀಗಂಧದ ಸಾವಿನ ಕಥೆ!]
ಒಂಬತ್ತು ದಿನಗಳ ಕಾಲ ಕರಗವು ನಗರ ಪ್ರದಕ್ಷಿಣೆ ಹಾಕುತ್ತದೆ. ಈ ಸಂದರ್ಭದಲ್ಲಿ ನಗರದ ಎಲ್ಲಾ ಜನರು ಜಾತಿ ಭೇದ ಮರೆತು ಕರಗ ಬರುವ ದಾರಿಯನ್ನು ಗುಡಿಸಿ, ಸಾರಿಸಿ ರಂಗೋಲಿಯಿಟ್ಟು ಬರಮಾಡಿಕೊಳ್ಳುತ್ತಾರೆ. ಮಂಗಳಾರತಿ ಎತ್ತಿ ಪೂಜೆ ಸಲ್ಲಿಸುತ್ತಾರೆ.
ದಸರಾ ದಿನದಂದು ನಡೆಯುವ ಮೆರವಣಿಗೆಯಲ್ಲಿಯೂ ಕರಗಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ತಮ್ಮದೇ ಆದ ಧಾರ್ಮಿಕ ವಿಧಿ ವಿಧಾನಗಳೂ ರೂಢಿಯಲ್ಲಿದೆ. ಕುಂದುರುಮೊಟ್ಟೆ ಮಾರಿಯಮ್ಮ ದೇವಾಲಯದ ಕರಗ ಹೊರಡದ ಹೊರತು ಉತ್ಸವದ ಅಂಗವಾಗಿ ಪ್ರದರ್ಶಿಸುವ ಯಾವ ಮಂಟಪವಾಗಲೀ ಇತರ ಕರಗಗಳಾಗಲೀ ಮೆರವಣಿಗೆಗೆ ಬರುವಂತಿಲ್ಲ.
ಎಲ್ಲ ಕರಗಗಳೂ, ಮಂಟಪಗಳೂ ದಂಡಿನಮಾರಿಯಮ್ಮನ ಪೂಜೆಯನ್ನು ಸ್ವೀಕರಿಸಿದ ನಂತರ ಮೆರವಣಿಗೆಯಲ್ಲಿ ತೆರಳಿ ನಗರದ ಗದ್ದಿಗೆ ಬಳಿ ಬನ್ನಿ ಕಡಿಯಬೇಕೆಂಬ ನಿಯಮವಿದೆ. ಅದು ಇಂದಿಗೂ ಚಾಚೂ ತಪ್ಪದೆ ನಡೆಯುತ್ತಿದೆ.












Click it and Unblock the Notifications