ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ 'ಮನೆ ಮನೆಗೆ ಕಾಂಗ್ರೆಸ್' ನಡಿಗೆ
ಮಡಿಕೇರಿ, ನವೆಂಬರ್ 5: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಜಿಲ್ಲೆಯಾದ್ಯಂತ 'ಮನೆ ಮನೆಗೆ ಕಾಂಗ್ರೆಸ್' ಅಭಿಯಾನ ಬಿರುಸುಗೊಂಡಿದೆ.
ಈಗಾಗಲೇ ಕೊಡಗಿನಲ್ಲಿ ಬಿಜೆಪಿ ಭದ್ರವಾಗಿ ನೆಲೆಯೂರಿದ್ದು, ಇದೀಗ ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಿ ಮತದಾರರನ್ನು ಒಲಿಸಿಕೊಳ್ಳುವ ಕಾರ್ಯಕ್ಕೆ ಕಾಂಗ್ರೆಸ್ ಮುಂದಾಗಿದೆ. 'ಮನೆ ಮನೆಗೆ ಕಾಂಗ್ರೆಸ್' ಅಭಿಯಾನದ ಮೂಲಕ ಮನೆ ಮನೆಗೆ ಭೇಟಿ ನೀಡಿ ರಾಜ್ಯ ಸರ್ಕಾರದ ಸಾಧನೆಗಳ ಅರಿವು ಮೂಡಿಸುವ ಕಾರ್ಯವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ.
ಮಡಿಕೇರಿ ನಗರದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ನಗರ ಕಾಂಗ್ರೆಸ್ ಸಮಿತಿ ತನ್ನ ಚಟುವಟಿಕೆಯನ್ನು ಚುರುಕುಗೊಳಿಸಿದ್ದು, ನಿರಂತರವಾಗಿ ಅಭಿಯಾನ ನಡೆಸುತ್ತಿರುವುದು ಕಂಡು ಬರುತ್ತಿದೆ.
ನಗರ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್ ಅವರ ನೇತೃತ್ವದಲ್ಲಿ ನಗರದ ಮೈತ್ರಿ ಹಾಲ್, ಐಟಿಐ ಬಡಾವಣೆ, ಸುಬ್ರಮಣ್ಯ ನಗರ, ಪೊಲೀಸ್ ವಸತಿ ಗೃಹ ಸೇರಿದಂತೆ ವಿವಿಧೆಡೆ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ನಡೆಸಲಾಗಿದೆ. ರಾಜ್ಯ ಸರಕಾರದ ಸಾಧನೆಯ ಕೈಪಿಡಿಯನ್ನು ಸಾರ್ವಜನಿಕರಿಗೆ ವಿತರಿಸಿದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪರ ಒಲವು ವ್ಯಕ್ತಪಡಿಸುವಂತೆ ಮನವಿ ಮಾಡಿದ್ದಾರೆ.
ಕಾಂಗ್ರೆಸ್ ನಗರಾಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್ ಮಾತನಾಡಿ ಜಿಲ್ಲೆಯ ಜನರು ಬದಲಾವಣೆಯನ್ನು ಬಯಸುತ್ತಿದ್ದು, ಈ ಬಾರಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದ ವಿವಿಧ ಬಡಾವಣೆಗಳಲ್ಲಿ ಕಾಂಗ್ರೆಸ್ ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆಯುತ್ತಿರುವುದಾಗಿ ಹೇಳಿದ್ದಾರೆ.
ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಟಿ.ಪಿ.ರಮೇಶ್, ನಗರಸಭೆಯ ಮಾಜಿ ಅಧ್ಯಕ್ಷರಾದ ಜುಲೇಕಾಬಿ ಹಾಗೂ ಕಾಂಗ್ರೆಸ್ ಜಿಲ್ಲಾ ವಕ್ತಾರರಾದ ಟಿ.ಎಂ.ಅಯ್ಯಪ್ಪ ನಗರಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ತಜುಸುಂ, ಮೂಡಾ ಅಧ್ಯಕ್ಷರಾದ ಚುಮ್ಮಿ ದೇವಯ್ಯ ಸೇರಿದಂತೆ ಪ್ರಮುಖರು ಮಡಿಕೇರಿ ನಗರದಲ್ಲಿ ಮತದಾರರ ಮನೆಬಾಗಿಲು ತಟ್ಟುತ್ತಿದ್ದರೆ, ಇನ್ನೊಂದೆಡೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಅವರು ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳುತ್ತಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಗೆಲುವಿಗಾಗಿ ಶ್ರಮಿಸುತ್ತಿರುವುದು ಕಂಡು ಬಂದಿದೆ. ಇದೇ ಉತ್ಸಾಹ ಮುಂದಿನ ದಿನಗಳಲ್ಲೂ ಇರುತ್ತಾ ಎಂಬುದನ್ನು ಕಾದು ನೋಡಬೇಕಾಗಿದೆ.