ಕೊಡಗು ಜಿಲ್ಲೆಗೆ ಸಚಿವ ಕೆ.ಸುಧಾಕರ್ ಭೇಟಿ: ಕೋವಿಡ್ ನಿಯಂತ್ರಣ ಕ್ರಮಗಳ ಚರ್ಚೆ
ಮಡಿಕೇರಿ, ಅಕ್ಟೋಬರ್ 6: ಕೊಡಗು ಜಿಲ್ಲೆಯ ಕೋವಿಡ್ ಪರಿಸ್ಥಿತಿ ಪರಿಶೀಲನೆಗಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಗಮಿಸಿದ್ದು, ಜಿಲ್ಲಾಡಳಿತದೊಂದಿಗಿನ ಸಭೆಗೂ ಮುನ್ನ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಈ ವೇಳೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್, ""ಕೊಡಗು ಜಿಲ್ಲೆಗೆ ಇಂದು ಭೇಟಿ ನೀಡಲು ಎರಡು ಪ್ರಮುಖ ಕಾರಣಗಳಿವೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ'' ಎಂದು ತಿಳಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಪಂಚಾಯತಿ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚು ಕೋವಿಡ್-19 ಪ್ರಕರಣಗಳು ಕಂಡುಬರುತ್ತಿದೆ. ಇದನ್ನು ನಿಯಂತ್ರಿಸುವ ಸಂಬಂಧ ಚರ್ಚಿಸಲಾಗುವುದು ಎಂದರು.

ಮೈಸೂರು ಹೊರತು ಪಡಿಸಿದರೆ ಮಡಿಕೇರಿಯಲ್ಲಿ ದಸರಾ ಆಚರಣೆ
ಕೋವಿಡ್ ಪ್ರಕರಣಗಳ ನಿಯಂತ್ರಣ ಚರ್ಚೆಯ ಜೊತೆಗೆ ಕೊಡಗು ಜಿಲ್ಲೆಯಲ್ಲಿನ ವೈದ್ಯಕೀಯ ಕಾಲೇಜುಗಳ ನೂತನ ಕಟ್ಟಡ ವೀಕ್ಷಣೆ ಮಾಡುವ ಸಂಬಂಧ ಜಿಲ್ಲೆಗೆ ಆಗಮಿಸಿದ್ದೇನೆ. ದಸರಾ ಸಂಬಂಧ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರು, ಮೈಸೂರು ಹೊರತು ಪಡಿಸಿದರೆ ಮಡಿಕೇರಿಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಆಚರಿಸುವ ಪ್ರತೀತಿ ಇದೆ. ಆದ್ದರಿಂದ ಜಿಲ್ಲೆಯಲ್ಲಿ ಸರಳ ದಸರಾ ಆಚರಣೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ಕೊಡಗು ಜಿಲ್ಲೆಯ ವೈದ್ಯರ ಕೊರತೆ ಬಗ್ಗೆ ಚರ್ಚಿಸಿ ಕ್ರಮ
ಕೊಡಗಿನಲ್ಲಿ ದಸರಾ ಆಚರಣೆಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರೊಂದಿಗೆ ಮಾತನಾಡಿದ್ದೇನೆ, ಇನ್ನೊಂದು ಬಾರಿ ಅವರೊಂದಿಗೆ ಇಲ್ಲಿಗೆ ಬಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳ ದಸರಾ ಕಾರ್ಯಕ್ರಮಗಳ ಬಗ್ಗೆ ಚರ್ಚಿಸುತ್ತೇನೆ ಎಂದರು. ಕೊಡಗು ಜಿಲ್ಲೆಯಲ್ಲಿ ವೈದ್ಯರು ಸೇರಿದಂತೆ ಮತ್ತಿತರ ಕುಂದುಕೊರತೆ ಸರಿಪಡಿಸುವ ಸಲುವಾಗಿ ಇಂದಿನ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಮಾಹಿತಿ ನೀಡಿದರು.

ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ
ಇನ್ನು ಇದೇ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಸುಧಾಕರ್, "ನಾನು ನಿನ್ನೆಯೇ ಸ್ಪಷ್ಟಪಡಿಸಿದ್ದು, ಈ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ, 2018-19 ರ ಐಟಿ ಹಾಗೂ ಇಡಿ ಪ್ರಕರಣಕ್ಕೆ ಸಂಬಂಧಪಟ್ಟ ಮುಂದುವರೆದ ಭಾಗ ಎಂದು ಎಫ್ಐಆರ್ ನಲ್ಲಿ ದಾಖಲಿಸಿದ್ದನ್ನು ನೋಡಿದ್ದೇನೆ ಎಂದು ಹೇಳಿದರು. ಡಿ.ಕೆ ಶಿವಕುಮಾರ್ ಅವರು ಪ್ರಾರಂಭದಿಂದಲೂ ನಾನು ಪ್ರಾಮಾಣಿಕವಾಗಿದ್ದೇನೆ, ಯಾವುದೇ ತಪ್ಪು ಮಾಡಿಲ್ಲ ಅಂತ ಹೇಳಿದ್ದಾರೆ. ಹಾಗಾಗಿ ಅವರ ಪ್ರಾಮಾಣಿಕತೆಯನ್ನು ಸಾಬೀತುಪಡಿಸಿಕೊಳ್ಳಲು ಇದು ಸದಾವಕಾಶ" ಎಂದು ಪ್ರತಿಕ್ರಿಯಿಸಿದರು.

ವಿನಯ್ ಕುಲಕರ್ಣಿ ಸೇರ್ಪಡೆ ಬಗ್ಗೆ ಯಾವುದೇ ಮಾಹಿತಿಯಿಲ್ಲ
ಇನ್ನು ಧಾರವಾಡ ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರ್ಪಡೆಗೆ ಕೇಂದ್ರದ ಪ್ರಭಾವಿ ನಾಯಕರನ್ನು ಭೇಟಿ ಮಾಡಿದ ವಿಚಾರ ಕುರಿತಂತೆ ಮಾತನಾಡಿದ ಸಚಿವ ಸುಧಾಕರ್, "ನನಗೆ ಅದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ''ವೆಂದು ಜಾರಿಕೊಡರು.












Click it and Unblock the Notifications