ಭಾಗಮಂಡಲ ಮೇಲ್ಸೇತುವೆ ಕಾಮಗಾರಿ; ಸಚಿವರ ಮಹತ್ವದ ಸೂಚನೆ
ಮಡಿಕೇರಿ, ಸೆಪ್ಟೆಂಬರ್ 17; ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾಮಗಾರಿ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ಸಚಿವರು ವಿಕಾಸಸೌಧದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಹಾಗೂ ಪುಣ್ಯ ಕ್ಷೇತ್ರವಾದ ಭಾಗಮಂಡಲಕ್ಕೆ ಪ್ರತಿವರ್ಷ ಮಳೆಗಾಲದಲ್ಲಿ 2-3 ತಿಂಗಳ ಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸಮಸ್ಯೆ ಎದುರಿಸುತ್ತಿದ್ದ ಹಿನ್ನಲೆ ಮೇಲ್ಸೇತುವೆ ಕಾಮಗಾರಿ ಆರಂಭಿಸಲಾಯಿತು ಎಂದರು.

ಸೇತುವೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಜನರಿಗೆ ಸಂಚಾರಕ್ಕೆ ಅವಕಾಶ ದೊರೆತಿರಲಿಲ್ಲ. ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ಬಾರಿ ಜಿಲ್ಲಾ ಪ್ರವಾಸದಲ್ಲಿ ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
3 ವರ್ಷಗಳ ಕಾಮಗಾರಿ; ಪ್ರತಿಬಾರಿಯ ಮಳೆಗಾಲದಲ್ಲಿ ಭಾಗಮಂಡಲ ಹೊರ ಜಗತ್ತಿನ ಸಂಪರ್ಕ ಕಳೆದುಕೊಳ್ಳುತ್ತದೆ. ಭಾಗಮಂಡಲ ಬಳಿಯ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡರೆ ಜನರಿಗೆ ಸಹಾಯವಾಗಲಿದೆ ಎಂದು ಅಂದಾಜಿಸಲಾಗಿದೆ. ಆದರೆ ಕಾಮಗಾರಿ ಪ್ರಾರಂಭವಾಗಿ 3 ವರ್ಷಗಳು ಕಳೆದರೂ ಅದು ಪೂರ್ಣಗೊಳ್ಳುತ್ತಿಲ್ಲ.
ಕೊಡಗು ಜಿಲ್ಲೆಯ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ದಿನಕ್ಕೆ ಸುಮಾರು 100 ಮಿ. ಮೀ. ನಷ್ಟು ಮಳೆಯಾಗುತ್ತದೆ. ಆಗ ಮೊದಲು ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡು ಪ್ರವಾಹ ಉಂಟಾಗುತ್ತದೆ. ಆದ್ದರಿಂದ ಮೇಲ್ಸೇತುವೆ ಯೋಜನೆ ರೂಪಿಸಲಾಗಿದೆ.
ತ್ರಿವೇಣಿ ಸಂಗಮ ಮುಳುಗಿದರೆ ತಲಕಾವೇರಿ, ಕೋರಂಗಾಲ, ಅಯ್ಯಂಗೇರಿ, ನಾಪೋಕ್ಲು, ಚೇರಂಗಾಲ ಸೇರಿ ಹಲವು ಗ್ರಾಮದ ಸಂಪರ್ಕ ಕಡಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ 2018ರಲ್ಲಿ ಸೇತುವೆ ಕಾಮಗಾರಿಯನ್ನು 34 ಕೋಟಿ ವೆಚ್ಚದಲ್ಲಿ ಪ್ರಾರಂಭಿಸಲಾಯಿತು. 2021ರಲ್ಲಿ ಕಾಮಗಾರಿ ಸರಿಯಾಗಿ ಆರಂಭವಾಯಿತು. 2023ಕ್ಕೆ ಸಹ ಪೂರ್ಣಗೊಂಡಿಲ್ಲ. ಒಂದು ವರ್ಷದಲ್ಲಿ ಕಾಮಗಾರಿ ಮುಗಿಯಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮೂರು ವರ್ಷಗಳು ಕಳೆದಿವೆ.
ವಿಧಾನಸಭೆ ಕಲಾಪದಲ್ಲಿಯೂ ಈ ಮೇಲ್ಸೇತುವೆ ಕಾಮಗಾರಿ ಬಗ್ಗೆ ಚರ್ಚೆಯಾಗಿತ್ತು. ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್ ಪೊನ್ನಣ್ಣ ಕೊಡಗು ಜಿಲ್ಲೆ ಭಾಗಮಂಡಲದಲ್ಲಿ ನಿರ್ಮಿಸುತ್ತಿರುವ ಮೇಲ್ಸೇತುವೆ ಕಾಮಗಾರಿ ಕುರಿತು ಕೇಳಿದ ಪ್ರಶ್ನೆಗೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಉತ್ತರ ನೀಡಿದ್ದರು.
"ಈ ಕಾಮಗಾರಿ ಮಾಡಲು 6/10/2016ರಲ್ಲಿ ಅನುಮೋದನೆ ನೀಡಲಾಗಿದ್ದು, ಸದರಿ ಕಾಮಗಾರಿ ಟೆಂಡರ್ ಆಧಾರದ ಮೇಲೆ 30 ಕೋಟಿಗೆ 2018ರಲ್ಲಿ ವಹಿಸಲಾಗಿದ್ದು, ಪ್ರಸ್ತುತ ಮೇಲ್ಸೇತುವೆ ಬಹುತೇಕ ಪೂರ್ಣಗೊಂಡಿದ್ದು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗಲಿದೆ. 2023ರ ಅಕ್ಟೋಬರ್ ಅಂತ್ಯದ ವೇಳೆಗೆ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು" ಎಂದು ತಿಳಿಸಿದ್ದರು.
ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, "ಮೇಲ್ಸೇತುವೆಗೆ ರ್ಯಾಂಪ್ಗಳನ್ನು ನೀಡಿಲ್ಲ. ಮಳೆಯಲ್ಲಿ ಕೆಸರು ತುಂಬಿಕೊಂಡಿದ್ದು, ಈ ಯೋಜನೆ ಆರಂಭವಾಗಿ 5 ವರ್ಷವಾಗಿದ್ದು, ಕಾಮಗಾರಿ ಪೂರ್ಣಗೊಂಡಿಲ್ಲ. ಗುತ್ತಿಗೆದಾರರಿಗೆ ನೋಟಿಸ್ ಕೂಡ ಕೊಟ್ಟಿಲ್ಲ" ಎಂದು ಗಮನ ಸೆಳೆದಿದ್ದರು.
ಡಿ. ಕೆ. ಶಿವಕುಮಾರ್ ಉತ್ತರ ನೀಡಿ, "ಶಾಸಕರ ಮಾತನ್ನು ಗಂಭೀರವಾಗಿ ಪರಿಗಣಿಸಿ ಈ ಕುರಿತು ವರದಿ ತರಿಸಿಕೊಳ್ಳುತ್ತೇನೆ. ಆ ಭಾಗಕ್ಕೆ ಭೇಟಿ ಮಾಡಿದಾಗ ನಾನೇ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ" ಎಂದು ಭರವಸೆ ನೀಡಿದ್ದರು.











Click it and Unblock the Notifications