ಕಾವೇರಿ ತುಲಾ ಸಂಕ್ರಮಣ 2023; ಕಾರ್ಯಕ್ರಮ, ಸಿದ್ದತೆ, ಭಕ್ತರಿಗೆ ಸೂಚನೆ
ಮಡಿಕೇರಿ, ಸೆಪ್ಟೆಂಬರ್ 28; ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 17ರಂದು ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಕಾವೇರಿ ತುಲಾಸಂಕ್ರಮಣ ತೀರ್ಥೋದ್ಭವದ ಸಿದ್ಧತೆಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಕಳೆದ ಬಾರಿಯಂತೆ ಕಾವೇರಿ ತುಲಾ ಸಂಕ್ರಮಣಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬುಧವಾರ ಬೆಳಗ್ಗೆ 9.29ಕ್ಕೆ ತುಲಾ ಲಗ್ನದಲ್ಲಿ 'ಪತ್ತಾಯಕ್ಕೆ ಅಕ್ಕಿ ಹಾಕುವುದು'. ಅಕ್ಟೋಬರ್ 5ರಂದು ಬೆಳಗ್ಗೆ 8.31 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ 'ಆಜ್ಞಾ ಮುಹೂರ್ತ'. ಅಕ್ಟೋಬರ್ 15ರಂದು ಮಧ್ಯಾಹ್ನ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ 'ಅಕ್ಷಯ ಪಾತ್ರೆ ಇರಿಸುವುದು' ಮತ್ತು ಸಂಜೆ 4.05 ಗಂಟೆಗೆ ಸಲ್ಲುವ ಕುಂಭ ಲಗ್ನದಲ್ಲಿ 'ಕಾಣಿಕೆ ಡಬ್ಬಿ'ಗಳನ್ನು ಇಡುವ ಕಾರ್ಯಕ್ರಗಳು ನಡೆಯಲಿವೆ. ಅಕ್ಟೋಬರ್ 17ರಂದು ರಾತ್ರಿ 1.27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವವಾಗಲಿದೆ.
ಅಗತ್ಯ ಸಿದ್ದತೆಗಳಿಗೆ ಸಚಿವರ ಸೂಚನೆ; ಸಚಿವ ಎನ್. ಎಸ್. ಬೋಸರಾಜು ತಲಕಾವೇರಿಗೆ ತೆರಳುವ ಭಕ್ತಾದಿಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸುವುದು, ವಾಹನ ನಿಲುಗಡೆಗೆ ವ್ಯವಸ್ಥೆ ಮಾಡುವುದು, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವುದು, ಶೌಚಾಲಯ ವ್ಯವಸ್ಥೆ ಮಾಡುವುದು, ಆರೋಗ್ಯ ಸೇವೆ ಕಲ್ಪಿಸುವುದು ಹೀಗೆ ಹಲವು ನಿರ್ದೇಶನಗಳನ್ನು ನೀಡಿದ್ದಾರೆ.
ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಕೆಎಸ್ಆರ್ಟಿಸಿ ಬಸ್ಗಳನ್ನು ನಿಯೋಜನೆ ಮಾಡಿ ಭಕ್ತರು ಆಗಮಿಸುವುದಕ್ಕ ವ್ಯವಸ್ಥೆ ಮಾಡಬೇಕು ಎಂದು ಸಚಿವರು ಸಲಹೆ ನೀಡಿದರು. ಅಲ್ಲದೇ ರಾತ್ರಿ ವೇಳೆ ತೀರ್ಥೋದ್ಭವ ಸಂಭವಿಸುವುದರಿಂದ ಭಾಗಮಂಡಲದಿಂದ ತಲಕಾವೇರಿವರೆಗೆ ಲೈಟಿಂಗ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಮಾತನಾಡಿ, "ತಲಕಾವೇರಿ ತುಲಾ ಸಂಕ್ರಮಣ ಜಾತ್ರೆ ಸಂಬಂಧಿಸಿದಂತೆ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಮನಹರಿಸಬೇಕು. ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಸೂಕ್ತ ಭದ್ರತೆ ಒದಗಿಸಬೇಕು" ಎಂದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸಭೆಯಲ್ಲಿ ಮಾತನಾಡಿ, "ಎರಡು ಪಾಳಿಯಲ್ಲಿ ಬಂದೋಬಸ್ತ್ ಮಾಡಲಾಗುತ್ತದೆ. ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗುವುದು. ದಸರಾ ಸಂದರ್ಭದಲ್ಲಿ ವಾಹನಗಳ ಓಡಾಟ ಹೆಚ್ಚು ಇರುತ್ತದೆ. ಆದ್ದರಿಂದ ರಸ್ತೆ ಬದಿ ಗಿಡಗಂಟೆಯನ್ನು ಕಡಿಯಬೇಕು" ಎಂದು ಹೇಳಿದರು.
ಸಭೆಯಲ್ಲಿ ತುಲಾ ಸಂಕ್ರಮಣ ಜಾತ್ರೆಗೆ ಸರ್ಕಾರದಿಂದ 1 ಕೋಟಿ ರೂ. ಅನುದಾನ ಒದಗಿಸಬೇಕು ಎಂದು ಸಹ ಜಿಲ್ಲಾ ಉಸ್ತುವಾರಿ ಸಚಿವರಿಗೆ ಬೇಡಿಕೆ ಇಡಲಾಯಿತು. ಅನ್ನದಾನ ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗದಂತೆ ಗಮನಹರಿಸಬೇಕು. ಈ ಬಾರಿ 'ಶಕ್ತಿ' ಯೋಜನೆಯ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ಸಾಧ್ಯತೆ ಇದೆ ಎಂದು ಚರ್ಚಿಸಲಾಯಿತು.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ಎಲ್ಲರ ಸಲಹೆ, ಮಾರ್ಗದರ್ಶನ ಪಡೆದು ಜಾತ್ರೆ, ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು. ಶಾಸಕರ ನೇತೃತ್ವದಲ್ಲಿ ಮತ್ತೊಂದು ಸಭೆ ಮಾಡಲಾಗುವುದು" ಎಂದು ಹೇಳಿದರು.
ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನಡೆಯುವ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ ಮುಡಿ ಕಟ್ಟಡದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.












Click it and Unblock the Notifications