ಚಿತ್ರಗಳು; ನೈಸರ್ಗಿಕ ವಿಕೋಪದ ವೇಳೆ ರಕ್ಷಣಾ ಕಾರ್ಯ ಹೇಗೆ?
ಮಡಿಕೇರಿ, ಫೆಬ್ರವರಿ 23: ಮಳೆಯಿಂದ ಭೂಕುಸಿತ ಹಾಗೂ ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂತಹ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಲಿದೆ?. ಕೊಡಗಿನಲ್ಲಿ ಈ ಕುರಿತು ಅಣಕು ಪ್ರದರ್ಶನ ನಡೆಯಿತು.
ಮಂಗಳವಾರ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ಬಗ್ಗೆ ಪ್ರಾತ್ಯಕ್ಷಿಕೆ/ ಅಣಕು ಪ್ರದರ್ಶನ ನಡೆಯಿತು. ಕೊಡಗು ಜಿಲ್ಲಾಡಳಿತ ಮತ್ತು ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ವತಿಯಿಂದ ಇದನ್ನು ಆಯೋಜನೆ ಮಾಡಲಾಗಿತ್ತು.
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ ಅವರು ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದರು. ತಲಕಾವೇರಿ ಸುತ್ತಮುತ್ತಲಿನ ಜನರು ಸಹ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದರು. ಅಣಕು ಪ್ರದರ್ಶನದ ನಂತರ ಜಿಲ್ಲಾಧಿಕಾರಿಗಳು ಅಗ್ನಿಶಾಮಕ ಇಲಾಖೆ, ಎನ್ಡಿಆರ್ಎಫ್ ರಕ್ಷಣಾ ತಂಡಗಳಿಂದ ಪ್ರದರ್ಶಿಸಿದ ಉಪಕರಣಗಳ ಮಾಹಿತಿ ಪಡೆದರು.
ಈ ಅಣಕು ಪ್ರದರ್ಶನದಲ್ಲಿ ಎನ್ಡಿಆರ್ಎಫ್, ಅಗ್ನಿಶಾಮಕ ಇಲಾಖೆ, ಗೃಹ ರಕ್ಷಕ ದಳ, ಪೊಲೀಸ್ ಇಲಾಖೆ, ಹೀಗೆ ನಾನಾ ರಕ್ಷಣಾ ತಂಡಗಳು ಪ್ರಕೃತಿ ವಿಕೋಪ ಸಂಭವಿಸಿದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯ ನಿಭಾಯಿಸಬೇಕು? ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜನರಿಗೆ ಮಾಹಿತಿಯನ್ನು ನೀಡಿದರು.

ಹಗ್ಗದಿಂದ ಜನರ ರಕ್ಷಣೆ
ಬೆಟ್ಟದಿಂದ ಕೆಳಗೆ ಹಗ್ಗ ಬಳಸಿ ನಾಗರಿಕರನ್ನು ರಕ್ಷಣೆ ಮಾಡುವುದು, ಬೆಟ್ಟದಿಂದ ಸಮತಟ್ಟು ಪ್ರದೇಶಕ್ಕೆ ಹಗ್ಗದ ಮೂಲಕ ಕಳುಹಿಸುವುದು, ರಕ್ಷಣೆ ಮಾಡಿದವರಿಗೆ ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸುವುದು. ಚಿಕಿತ್ಸೆ ನೀಡಿದ ನಂತರ ಪರಿಹಾರ ಕೇಂದ್ರಕ್ಕೆ ಸ್ಥಳಾಂತರ ಮಾಡುವುದು ಸೇರಿದಂತೆ ನಾನಾ ರೀತಿಯ ರಕ್ಷಣಾ ಕಾರ್ಯಗಳ ಅಣಕು ಪ್ರದರ್ಶನ ನಡೆಯಿತು.

ಜಿಲ್ಲಾಡಳಿತದ ಸಿದ್ಧತೆ
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, "ಕಳೆದ ಮೂರು ವರ್ಷದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿರುವ ಕ್ರಮಗಳ ಬಗ್ಗೆ ವಿವಿಧ ರಕ್ಷಣಾ ತಂಡಗಳಿಂದ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ" ಎಂದರು.

ಪೊಲೀಸ್ ಇಲಾಖೆ ಸಹಕಾರ
ಎಸ್ಪಿ ಕ್ಷಮಾ ಮಿಶ್ರಾ ಮಾತನಾಡಿ, "ಎನ್ಡಿಆರ್ಎಫ್, ಗೃಹ ರಕ್ಷಕ ದಳ, ಅಗ್ನಿ ಶಾಮಕ ಇಲಾಖೆ ಹೀಗೆ ಹಲವು ರಕ್ಷಣಾ ತಂಡಗಳ ಜೊತೆ ಸಮನ್ವಯತೆ ಸಾಧಿಸಿ ಅಗತ್ಯ ಸಹಕಾರ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಲಿದೆ" ಎಂದರು.

ಅಧಿಕಾರಿಗಳ ನೇತೃತ್ವ
ಕೊಡಗು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ, ಎನ್ಡಿಆರ್ಎಫ್ನ ಸಹಾಯಕ ಕಮಾಂಡರ್ ಜೆ. ಸೆಂಥಿಲ್ ಕುಮಾರ್, ಹೆಡ್ ಕಾನ್ಸ್ಟೇಬಲ್ ಜಾವೇದ, ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ ರಾಚಯ್ಯ ಇತರರ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು. ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮರೀಸ್ವಾಮಿ, ತಹಶೀಲ್ದಾರ್ ಮಹೇಶ್ ಇತರರು ಇದ್ದರು.












Click it and Unblock the Notifications