ಮೈಸೂರು-ಕುಶಾಲನಗರ ಹೊಸ ರೈಲು ಮಾರ್ಗ, ವರದಿ ಅಂತಿಮ
ಮಡಿಕೇರಿ, ನವೆಂಬರ್ 24; ಸಾಕಷ್ಟು ವಿರೋಧಕ್ಕೆ ಕಾರಣವಾಗಿದ್ದ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗದ ನಿರ್ಮಾಣದ ವರದಿ ಬಹುತೇಕ ಅಂತಿಮಗೊಂಡಿದೆ. ಡಿಸೆಂಬರ್ ತಿಂಗಳಿನಲ್ಲಿ ವರದಿಯನ್ನು ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ.
2022ರ ಸೆಪ್ಟೆಂಬರ್ನಲ್ಲಿ ಮೈಸೂರು-ಬೆಳಗೊಳ-ಕುಶಾಲನಗರ ನಡುವಿನ 84.50 ಕಿ. ಮೀ. ನೂತನ ರೈಲು ಮಾರ್ಗದ ನಿರ್ಮಾಣಕ್ಷೆ ಸಮೀಕ್ಷೆ ನಡೆಸಲು ಆದೇಶಿಸಲಾಗಿತ್ತು. ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಈ ವರದಿಯನ್ನು ಮುಂದಿನ ತಿಂಗಳು ಸಲ್ಲಿಸಲಿದೆ.

ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಪ್ರಮುಖ ರೈಲು ಯೋಜನೆ ಇದಾಗಿದೆ. ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಅಗತ್ಯ ಇರುವ ಭೂ ಸಮೀಕ್ಷೆಯನ್ನು ಸಹ ನಡೆಸಲಾಗಿದೆ. ಸಮೀಕ್ಷೆ ವರದಿ, ಡಿಪಿಆರ್ ರೈಲ್ವೆ ಸಚಿವಾಲಯಕ್ಕೆ ಸಲ್ಲಿಕೆಯಾಗಲಿದೆ.
ಕೇಂದ್ರ ಸರ್ಕಾರ ಅನುಮತಿ ನೀಡಿತ್ತು; ಕೇಂದ್ರ ಸರ್ಕಾರ 2019ರಲ್ಲಿ ಮೈಸೂರು-ಕುಶಾಲನಗರ ರೈಲು ಯೋಜನೆಗೆ ಒಪ್ಪಿಗೆ ನೀಡಿತ್ತು. ಆದರೆ ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಂತಿಮವಾಗಿ 2022-2ರ ಬಜೆಟ್ನಲ್ಲಿ ಸಮೀಕ್ಷೆ ನಡೆಸಲು ಅನುದಾನ ಮಂಜೂರು ಮಾಡಲಾಯಿತು.
ಮೈಸೂರು (ಬೆಳಗೊಳ)-ಕುಶಾಲನಗರ ನಡುವಿನ ನೂತನ 84.50 ಕಿ. ಮೀ. ಮಾರ್ಗ ನಿರ್ಮಾಣಕ್ಕೆ 1,854.62 ಕೋಟಿ ರೂ. ವೆಚ್ಚವಾಗಲಿದೆ ಎಂದು 2019ರ ಫೆಬ್ರವರಿಯಲ್ಲಿ ನಡೆದ ಸಮೀಕ್ಷೆಯಲ್ಲಿ ಅಂದಾಜಿಸಲಾಗಿತ್ತು. ಯೋಜನೆಗಾಗಿಯೇ ಕೇಂದ್ರ ಸರ್ಕಾರ 1000 ಕೋಟಿ ಅನುದಾನವನ್ನು ನಿಗದಿಗೊಳಿಸಿದೆ.
ಪ್ರಾಥಮಿಕ ಸಮೀಕ್ಷೆಯಲ್ಲಿ ಈ ರೈಲು ಯೋಜನೆಗೆ ಪ್ರತಿ ಕಿಲೋಮೀಟರ್ ಮಾರ್ಗ ನಿರ್ಮಾಣಕ್ಕೆ 21.27 ಕೋಟಿ ಬೇಕು ಎಂದು ಅಂದಾಜಿಸಲಾಗಿತ್ತು. 274.65 ಹೆಕ್ಟೇರ್ ಒಣಭೂಮಿ ಮತ್ತು 275.15 ಹೆಕ್ಟೇರ್ ನೀರಾವರಿ ಜಮೀನು ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಈಗ ಡಿಪಿಆರ್ನಲ್ಲಿ ಯೋಜನಾ ವೆಚ್ಚ ಹೆಚ್ಚಾಗುವ ಸಾಧ್ಯತೆಯೂ ಇದೆ.
ಈ ನೂತನ ರೈಲು ಮಾರ್ಗ ನಿರ್ಮಾಣಗೊಂಡರೆ ಕೊಡಗು ಜಿಲ್ಲೆಗೆ ರೈಲು ಸಂಪರ್ಕ ದೊರಕಲಿದೆ. ಅಲ್ಲದೇ ಮಾರ್ಗದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರ ಮೂಲಕ ಸಾಗಲಿದ್ದು, ಜನರಿಗೆ ಅನುಕೂಲವಾಗಲಿದೆ.
ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಬೇಕು ಎಂಬುದು ಬಹಳ ವರ್ಷಗಳ ಬೇಡಿಕೆ. ಸಮೀಕ್ಷೆಯಂತೆ ಮೈಸೂರು-ಕುಶಾಲನಗರ ನಡುವೆ ಬೆಳಗೊಳ (ಮೈಸೂರು), ಇಲವಾಲ, ಬಿಳಿಕೆರೆ, ಉದ್ದೂರು, ಹುಣಸೂರು, ಸತ್ತೇಗಾಲ, ಪಿರಿಯಾಪಟ್ಟಣ, ದೊಡ್ಡ ಹೊನ್ನೂರು ಮಾರ್ಗವಾಗಿ ರೈಲು ಸಂಚಾರ ನಡೆಸಬೇಕಿದೆ. ಪಿರಿಯಾಪಟ್ಟಣ ತಾಲೂಕಿನ ಗಡಿಗ್ರಾಮವಾದ ಕೊಪ್ಪ ಕೊನೆಯ ನಿಲ್ದಾಣ.
ಕೊಪ್ಪ ಗ್ರಾಮದ ಗಡಿಯಲ್ಲಿ ಕಾವೇರಿ ನದಿ ಹರಿಯುತ್ತದೆ. ಸೇತುವೆ ಆಚೆಗೆ ಕುಶಾಲನಗರವಿದೆ, ಅದು ಕೊಡಗು ಜಿಲ್ಲೆಗೆ ಸೇರಿದೆ. ರೈಲ್ವೆ ಸಚಿವಾಲಯ ಅಂತಿಮ ವರದಿ ಸ್ವೀಕಾರ ಮಾಡಿದ ಬಳಿಕ ರಾಜ್ಯ ಸರ್ಕಾರದ ಜೊತೆ ಚರ್ಚಿಸಿ, ಕಾಮಗಾರಿ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸುವ ಸಾಧ್ಯತೆ ಇದೆ. ಈಗ ಕೇಂದ್ರ ಸರ್ಕಾರವೂ ಒಪ್ಪಿಗೆ ನೀಡಿದ್ದರಿಂದ ಶೀಘ್ರವೇ ಭೂ ಸ್ವಾಧೀನ ಕಾರ್ಯ ಆರಂಭವಾಗುವ ನಿರೀಕ್ಷೆ ಇದೆ.
ಈ ಹಿಂದೆ ಸಹ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲಾಗಿತ್ತು. ಆದರೆ ರೈಲು ಮಾರ್ಗಕ್ಕೆ ವಿರೋಧ ವ್ಯಕ್ತವಾಗಿತ್ತು. ಮಾರ್ಗ ನಿರ್ಮಾಣದಿಂದ ಕೊಡಗಿನಲ್ಲಿ ಪರಿಸರಕ್ಕೆ ಧಕ್ಕೆಯಾಗಲಿದೆ ಎಂದು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಕೊಡಗು ಮೂಲದ ಸಿ. ಪಿ. ಮುತ್ತಣ್ಣ ಕರ್ನಾಟಕ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಮಾಡಿದ್ದರು.
ಮೈಸೂರು-ಕೊಡಗು ರೈಲು ಮಾರ್ಗ ಲಾಭದಾಯಕವಲ್ಲ ಎಂಬ ಮಾತು ಸಹ ಕೇಳಿ ಬಂದಿತ್ತು. ಆದ್ದರಿಂದ ಆಗ ಒಪ್ಪಿಗೆ ಸಿಕ್ಕಿರಲಿಲ್ಲ. ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ರೈಲು ಮಾರ್ಗ ನಿರ್ಮಾಣಕ್ಕೆ ಪುನಃ ರೈಲ್ವೆ ಸಚಿವರಿಗೆ ಮನವಿ ಸಲ್ಲಿಕೆ ಮಾಡಿದ್ದರು. ಬಳಿಕ ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿದೆ.
ಮೈಸೂರು ಸಾಂಸ್ಕೃತಿಕ ನಗರಿಯಾಗಿ ವರ್ಷದ ಸದಾ ಕಾಲವೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಕೊಡಗು ಸಹ ಕರ್ನಾಟಕದ ಪ್ರಮುಖ ಪ್ರವಾಸಿ ತಾಣವಾಗಿದೆ. ರೈಲು ಸಂಪರ್ಕ ಕಲ್ಪಿಸಿದರೆ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂದು ಅಂದಾಜಿಸಲಾಗಿದೆ.












Click it and Unblock the Notifications