ಕೇರಳ ಪ್ರವಾಹ ನೋಡಿದ ಮೋದಿ ಕೊಡಗಿಗೂ ಬರಲಿ: ಸಿದ್ದರಾಮಯ್ಯ
ಕೊಡಗು, ಆಗಸ್ಟ್ 23: ಕೊಡಗಿಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ, ನಿರಾಶ್ರಿತರೊಂದಿಗೆ ಮಾತನಾಡಿ, ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಉಪಾಧ್ಯಕ್ಷ ಈಶ್ವರ್ ಖಂಡ್ರೆ, ಮಂತ್ರಿಗಳಾದ ಕೃಷ್ಣಬೈರೇಗೌಡ ಇನ್ನಿತರ ಪ್ರಮುಖರು ಸಿದ್ದರಾಮಯ್ಯ ಅವರೊಂದಿಗೆ ಕೊಡಗಿಗೆ ಆಗಮಿಸಿದ್ದರು.
ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?
ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಅವರು, ಕೊಡಗಿನ ಪರಿಸ್ಥಿತಿ ಬಗ್ಗೆ ಸರ್ಕಾರದ ಕಿವಿ ಹಿಂಡುವ, ಸಲಹೆ ಸೂಚನೆಗಳನ್ನು ಕೊಡುವ ಸ್ಥಾನದಲ್ಲಿರುವ ಕಾರಣ ಸಿದ್ದರಾಮಯ್ಯ ಅವರ ಕೊಡಗು ಭೇಟಿ ಮಹತ್ವದ್ದಾಗಿದೆ.
ಕೊಡಗಿನಲ್ಲಿ ಪ್ರವಾಹದಿಂದ ತೊಂದರೆಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು, ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಂತಿಮವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
'ಕೇರಳಕ್ಕೆ ಬಂದ ಪ್ರಧಾನಿ, ಕೊಡಗಿಗೂ ಬರಬೇಕು'
ಸಂತ್ರಸ್ತರಿಗೆ ಪರಿಹಾರ ಒದಗಿಸುವುದು, ಬೆಳೆ ಹಾನಿ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಪ್ರಧಾನಿಯವರು ಕೇರಳಕ್ಕೆ ಬಂದಿದ್ದರು. ಇಲ್ಲಿಗೂ ಬಂದು ನೋಡಿದ್ದರೆ ಒಳ್ಳೆಯದಿತ್ತು. ಈಗಲಾದರೂ ಕೊಡಗಿಗೆ ಭೇಟಿ ನೀಡಿ ಆಗಿರುವ ಹಾನಿ ಪರಿಶೀಲಿಸಿ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಬೇಕು.
ಕೊಡಗಿನಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ಮನೆ: ವಸತಿ ಸಚಿವರ ಭರವಸೆ
ಸರ್ಕಾರದ ಕೆಲಸದ ವೇಗ ಹೆಚ್ಚಾಗಬೇಕು
ಸರ್ಕಾರ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದು, ಅದರ ವೇಗ ಇನ್ನೂ ಹೆಚ್ಚಾಗಬೇಕು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಹಾನಿಗೊಳಗಾಗಿರುವ ಕೊಡಗಿನಲ್ಲಿ ಮೂಲಭೂತ ಸೌಕರ್ಯಗಳ ಮರು ನಿರ್ಮಾಣವಾಗಬೇಕು.ಇದಕ್ಕಾಗಿ ಮುಖ್ಯಮಂತ್ರಿಗಳು, ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ. ಸಮನ್ವಯ ಸಮಿತಿ ಸಭೆಯಲ್ಲೂ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಕೊಡಗಿಗೆ ಭೇಟಿ ನೀಡಿದ ಸಿದ್ದರಾಮಯ್ಯ, ನಿರಾಶ್ರಿತರೊಂದಿಗೆ ಮಾತುಕತೆ
|
'ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉದ್ಯೋಗ'
ಸಾವಿರಾರು ಎಕರೆ ಕೃಷಿ ಜಮೀನು ಹಾಳಾಗಿರುವುದರಿಂದ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ. ಅವರಿಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ತಿಳಿಸಿದ್ದೇನೆ. ಕೃಷಿ ಭೂಮಿ ಕಳೆದುಕೊಂಡವರಿಗೆ ಜಮೀನು ನೀಡುವ ಬಗ್ಗೆಯೂ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇನೆ.
|
ಮನೆ ಕಟ್ಟಿಕೊಡುವಂತೆ ವಸತಿ ಸಚಿವರಿಗೆ ಸೂಚನೆ
ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಮಂತ್ರಿಗಳೂ ಭೇಟಿ ನೀಡಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡಲು ಯೋಜನೆ ರೂಪಿಸುವಂತೆ ವಸತಿ ಸಚಿವರಿಗೆ ಹೇಳಿದ್ದೇನೆ. ಮುಂದೆ ಈ ರೀತಿ ಅನಾಹುತ ಆಗದಂತೆ ನೋಡಿಕೊಳ್ಳಲು ತಜ್ಞರ ಸಮಿತಿ ರಚನೆ ಆಗಬೇಕು. ಈ ಸಂಬಂಧ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ.
ಮಳೆಯಿಂದ ಊರುಗಳೇ ಹಾಳಾಗಿವೆ
ಭಾರಿ ಮಳೆಯಿಂದ ಹಲವಾರು ಊರುಗಳೇ ಹಾಳಾಗಿವೆ. ಜನ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ರಸ್ತೆ ಸಂಪರ್ಕವೂ ಇಲ್ಲದಂತಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ನೂರಾರು ಜನರು ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಅವರೆಲ್ಲರ ಕಾರ್ಯ ಶ್ಲಾಘನೀಯ.