ಕೋವಿಡ್ ನೆಗೆಟಿವ್ ವರದಿ ಇದ್ದರೆ ಮಾತ್ರ ಕೊಡಗಿಗೆ ಪ್ರವೇಶ ನೀಡಿ: ಸಚಿವ ಕೋಟಾ ಪೂಜಾರಿ
ಮಡಿಕೇರಿ. ಆಗಸ್ಟ್ 16: "ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ," ಸಂಬಂಧಪಟ್ಟ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್- 19 ನಿಯಂತ್ರಣ ಮತ್ತು ಪ್ರಾಕೃತಿಕ ವಿಕೋಪದಡಿ ಪರಿಹಾರ ವಿತರಣೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಚಿವರು ಮಾತನಾಡಿದರು.
"ಕೋವಿಡ್- 19 ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಒಂಭತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿದೆ. ಆ ದಿಸೆಯಲ್ಲಿ ಕೋವಿಡ್- 19 ಪಾಸಿಟಿವಿಟಿ ಪ್ರಮಾಣವನ್ನು ಶೇ.2 ಕ್ಕಿಂತ ಕಡಿಮೆ ಮಾಡಲು ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಶ್ರಮಿಸುವಂತೆ," ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಸೂಚಿಸಿದರು.

"ಕೊಡಗು ಜಿಲ್ಲೆಯ ಗಡಿ ಭಾಗದ ಚೆಕ್ಪೋಸ್ಟ್ಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಆ ದಿಸೆಯಲ್ಲಿ ಕೇರಳ ರಾಜ್ಯದಿಂದ ಆಗಮಿಸುವವರ ಆರ್ಟಿ- ಪಿಸಿಆರ್ ನೆಗೆಟಿವ್ ವರದಿಯು 72 ಗಂಟೆಯೊಳಗಿರಬೇಕು," ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
"ಕೋವಿಡ್- 19ಗೆ ಸಂಬಂಧಿಸಿದಂತೆ ಹೊಸ ಸಮಸ್ಯೆಗಳು ಬರದಂತೆ ಜಿಲ್ಲಾಡಳಿತ ಎಚ್ಚರ ವಹಿಸಬೇಕು. ಕೋವಿಡ್- 19 ಸೋಂಕು ನಿಯಂತ್ರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು," ಎಂದು ಅವರು ಕಟ್ಟುನಿಟ್ಟಿನ ಆದೇಶ ನೀಡಿದರು.
"ಕೋವಿಡ್- 19 ಸೋಂಕು ನಿಯಂತ್ರಣ ಸಂಬಂಧ ಪ್ರತಿ ಗ್ರಾಮ ಪಂಚಾಯತ್ಗಳಲ್ಲಿ ಕಾರ್ಯಪಡೆ ಸಮಿತಿಗಳಿದ್ದು, ಈ ಸಮಿತಿಯು ವಾರದಲ್ಲಿ ಎರಡು ಬಾರಿಯಾದರೂ ಸಭೆ ನಡೆಸಿ ಕೋವಿಡ್- 19 ನಿಯಂತ್ರಣಕ್ಕೆ ಮುಂದಾಗಬೇಕು. ತಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೋವಿಡ್- 19 ಪ್ರಕರಣಗಳು ಕಂಡುಬಂದಲ್ಲಿ ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲು ಮಾಡುವುದು, ಮತ್ತಿತರ ಬಗ್ಗೆ ಗಮನ ನೀಡಬೇಕು," ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿರ್ದೇಶನ ನೀಡಿದರು.

"ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗೆ 14 ಮತ್ತು 15ನೇ ಹಣಕಾಸು ಯೋಜನೆಯಡಿ ಆಹಾರ ಕಿಟ್ ವಿತರಿಸುವಂತೆ," ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸಚಿವರು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ನ್ನು ಸಮರ್ಪಕವಾಗಿ ವಿತರಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
"ಗ್ರಾ.ಪಂಗಳಲ್ಲಿ ಪ್ರತಿ ವಾರ ಕಾರ್ಯಪಡೆ ಸಮಿತಿ ಸಭೆ ನಡೆಸಿ, ಕೋವಿಡ್- 19 ನಿಯಂತ್ರಣಕ್ಕೆ ಶ್ರಮಿಸಲಾಗುತ್ತದೆ. ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಲಾಗಿದೆ. ಆದರೂ ನೆರೆ ರಾಜ್ಯದಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಎಂದು ಅವರು ಸಲಹೆ ಮಾಡಿದರು. ಕೊಡಗು ಜಿಲ್ಲೆಯ ಗ್ರಾಮೀಣ ಮತ್ತು ಬಡ ಜನರಿಗೆ ಪ್ರಥಮ ಆದ್ಯತೆಯಲ್ಲಿ ಕೋವಿಡ್ ನಿರೋಧಕ ಲಸಿಕೆ ನೀಡಬೇಕು. ಜೊತೆಗೆ ಕೊಡಗು ಜಿಲ್ಲೆ ಕೇರಳ ರಾಜ್ಯದ ಗಡಿ ಭಾಗದಲ್ಲಿರುವುದರಿಂದ ಕೊಡಗು ಜಿಲ್ಲೆಗೆ ಹೆಚ್ಚಿನ ಕೋವಿಡ್ ಲಸಿಕೆ ಪೂರೈಸುವಂತಾಗಬೇಕು," ಎಂದು ಎಂ.ಪಿ. ಅಪ್ಪಚ್ಚು ರಂಜನ್ ಸಚಿವರ ಗಮನ ಸೆಳೆದರು.
"ಕೋವಿಡ್- 19 ಸಂದರ್ಭದಲ್ಲಿ ಆಯುಷ್ ವೈದ್ಯರು ಉತ್ತಮ ಕೆಲಸ ನಿರ್ವಹಿಸಿದ್ದು, ಈಗ ಅವರನ್ನು ಬಿಡುಗಡೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಇದೆ. ಆಯುಷ್ ವೈದ್ಯರನ್ನು ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿ ಮುಂದುವರೆಸಬೇಕು. ಕೊರೊನಾ ಸೋಂಕು ನಿಯಂತ್ರಣಕ್ಕೆ ಆಯುಷ್ ಇಲಾಖೆ ವೈದ್ಯರ ಪರಿಶ್ರಮವೂ ಇದೆ ಎಂಬುದನ್ನು ಮರೆಯಬಾರದು ಎಂದು ಅಪ್ಪಚ್ಚು ರಂಜನ್ ಹೇಳಿದರು. ಇದಕ್ಕೆ ಧ್ವನಿಗೂಡಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಆಯುಷ್ ವೈದ್ಯರನ್ನು ಮುಂದುವರೆಸಲು ಸರ್ಕಾರದ ಹಂತದಲ್ಲಿ ಅನುಮತಿ ಕೊಡಿಸಲಾಗುವುದು," ಎಂದು ಭರವಸೆ ನೀಡಿದರು.

ಎಸ್ಟೇಟ್ ಮಾಲೀಕರ ವಿರುದ್ಧ ಕ್ರಮ
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, "ಕೋವಿಡ್- 19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ದೊಡ್ಡ ದೊಡ್ಡ ಎಸ್ಟೇಟ್ಗಳಲ್ಲಿ ಕಂಡುಬರುತ್ತಿದ್ದು, ಕೋವಿಡ್ ಪ್ರಕರಣಗಳು ಹೆಚ್ಚಿರುವ ಎಸ್ಟೇಟ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದರು. ಜಿಲ್ಲೆಯ ದೊಡ್ಡ ದೊಡ್ಡ ಎಸ್ಟೇಟ್ಗಳಲ್ಲಿ ಗುಂಪು ಗುಂಪಾಗಿ ತೋಟದ ಕೆಲಸದಲ್ಲಿ ತೊಡಗುವುದರಿಂದ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ," ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ರವಿಕುಶಾಲಪ್ಪ, ಪ್ರಕರಣ ದಾಖಲಿಸಲು ತೊಂದರೆ ಇದೆಯೇ ಎಂದು ಕಾರ್ಮಿಕ ಅಧಿಕಾರಿಯನ್ನು ಪ್ರಶ್ನಿಸಿದರು.
"ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹೊರಗುತ್ತಿಗೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ವೇತನ ಪಾವತಿಸುವಂತೆ," ಶಾಸಕ ಕೆ.ಜಿ. ಬೋಪಯ್ಯ ಸೂಚಿಸಿದರು.
Recommended Video
ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮಾತನಾಡಿ, "ಕೋವಿಡ್ ನಿಯಂತ್ರಣ ಸಂಬಂಧ ಜಿಲ್ಲೆಯ ಗಡಿ ಚೆಕ್ಪೋಸ್ಟ್ಗಳು ಸೇರಿದಂತೆ ಹಲವು ಕಡೆಗಳಲ್ಲಿ ಬಿಗಿ ಕ್ರಮವಹಿಸಲಾಗಿದೆ. ಜೊತೆಗೆ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಲಾಗಿದೆ. ಕೋವಿಡ್- 19 ನಿಯಂತ್ರಣಕ್ಕೆ ಅಗತ್ಯ ಕ್ರಮವಹಿಸಲಾಗಿದೆ," ಮಾಹಿತಿ ನೀಡಿದರು.












Click it and Unblock the Notifications