ಕೊಡಗಿನಲ್ಲಿ ಭೂ ಕಂಪನ; ಜನರ ಆತಂಕ ದೂರ ಮಾಡಿದ ಸಚಿವರು
ಮಡಿಕೇರಿ ಜೂ.28 :- ಹಾಸನ ಹಾಗೂ ಕೊಡಗು ಜಿಲ್ಲೆಯ ನೈರುತ್ಯ ಗಡಿಭಾಗದಲ್ಲಿ ಭೂ ಕಂಪನದ ಅನುಭವವಾಗಿ, ಜನರು ಭೀತಿಗೆ ಒಳಗಾಗಿದ್ದಾರೆ. ಆದರೆ ಇದರಿಂದ ಯಾರು ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಸಿ. ನಾಗೇಶ್ ಹೇಳಿದ್ದಾರೆ.
ಕೊಡಗು ಪ್ರವಾಸದಲ್ಲಿರುವ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂದರ್ಭದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಆತಂಕದಲ್ಲಿ ಜನ
"ಭೂ ಕಂಪನದಿಂದ ಜಿಲ್ಲೆಯ ಯಾವುದೇ ಭಾಗದಲ್ಲಿ ಭೂಮಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿಲ್ಲ. ಈ ಹಿಂದೆ ರಿಕ್ಟರ್ ಮಾಪಕದಲ್ಲಿ 3.3 ರಷ್ಟು ದಾಖಲಾಗಿ ಭೂ ಕಂಪಿಸಿರುವ ಬಗ್ಗೆ ವರದಿಯಾಗಿತ್ತು. ಆ ಸಂದರ್ಭದಲ್ಲಿ ಭೂಕುಸಿತ ಹಾಗೂ ಪ್ರವಾಹ ಉಂಟಾಗಿತ್ತು. ಈ ಬಾರಿ ಸರಾಸರಿ ಮಳೆಯ ಪ್ರಮಾಣ ಕಡಿಮೆ ಇದ್ದು, ಆ ನಿಟ್ಟಿನಲ್ಲಿ ಯಾರೂ ಸಹ ಆತಂಕ ಪಡಬೇಕಿಲ್ಲ" ಎಂದು ಸಚಿವ ಬಿ. ಸಿ. ನಾಗೇಶ್ ತಿಳಿಸಿದರು.
"2018ರ ಜುಲೈ 09 ರಂದು ಸಂಪಾಜೆ ಹೋಬಳಿ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 3.3 ರಷ್ಟು ದಾಖಲಾಗಿ ಭೂಮಿ ಕಂಪಿಸಿದ ಕೆಲವೊಂದು ಕಡೆ ಭೂಮಿ ಬಿರುಕು ಬಿಟ್ಟಿತ್ತು. ನಂತರ ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾದ ಕಾರಣ ಬಿರುಕು ಬಿಟ್ಟ ಸ್ಥಳದಲ್ಲಿ ಮಳೆ ನೀರು ಹೋಗಿ ಭೂ ಕುಸಿತವಾಗಿತ್ತು" ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಮಾಹಿತಿ ನೀಡಿದರು.
ಭೂಕಂಪನ ಮಹಾಮಳೆಯ ಮುನ್ಸೂಚನೆಯಾ?... ಅವತ್ತು ಹಾಗೆಯೇ ಆಗಿತ್ತು!
ಭೂಮಿ ಕಂಪನದಿಂದ ಹಾನಿಯಾಗಿಲ್ಲ
ಶನಿವಾರ ಕರಿಕೆಯಿಂದ 04 ಕಿ.ಮೀ. ವಾಯುವ್ಯ ಭಾಗದಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ಎಂದು ದಾಖಲಾಗಿದೆ. ಹಾಗೂ ಕಳೆದ ವಾರ ಹಾಸನದ ಹೊಳೆನರಸೀಪುರ ತಾಲ್ಲೂಕಿನಲ್ಲಿ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.4 ಎಂದು ದಾಖಲಾಗಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಹಾಗೂ ಮಡಿಕೇರಿ ತಾಲ್ಲೂಕಿನ ದೇವಸ್ತೂರು ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಯಾವುದೇ ರೀತಿಯ ಭೂಮಿ ಬಿರುಕು ಬಿಟ್ಟಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿಸಿದರು.
ರಸ್ತೆ ಬದಿ ಕಟ್ಟಡ ನಿರ್ಮಾಣ ಮಾಡಲು ಎನ್ಒಸಿ ನೀಡಬಾರದು
ಸಭೆಯಲ್ಲಿ ಮಾತನಾಡಿದ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಇದ್ದು, ಒತ್ತುವರಿ ತೆರವುಗೊಳಿಸಬೇಕು. ಈ ಸಂಬಂಧ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದರು. ರಸ್ತೆ ಬದಿ ಕಟ್ಟಡ ನಿರ್ಮಾಣ ಮಾಡುವುದು ಕಂಡುಬಂದಲ್ಲಿ ಗ್ರಾಮ ಪಂಚಾಯಿತಿ ಅಥವಾ ಸ್ಥಳೀಯ ಆಡಳಿತದಿಂದ ಯಾವುದೇ ಕಾರಣಕ್ಕೂ ಎನ್ಒಸಿ ನೀಡಬಾರದು ಎಂದು ಅವರು ತಾಕೀತು ಮಾಡಿದರು.
ರೈತರಿಗೆ ಸಿಗದ ರಸಗೊಬ್ಬರ
ಜಿಲ್ಲೆಯಲ್ಲಿ ಸುಫಲಾ ಹೊರತುಪಡಿಸಿ ಡಿಎಪಿ ಮತ್ತಿತರ ರಸಗೊಬ್ಬರ ಸಹಕಾರ ಸಂಘಗಳಲ್ಲಿ ದೊರೆಯುತ್ತಿಲ್ಲ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಬಾಂಡ್ ಗಣಪತಿ ಅವರು ಸಚಿವರ ಗಮನಕ್ಕೆ ತಂದರು. ಇದಕ್ಕೆ ಧ್ವನಿಗೂಡಿಸಿದ ಶಾಸಕರಾದ ಎಂ. ಪಿ. ಅಪ್ಪಚ್ಚುರಂಜನ್, ಡಿಎಪಿ ರಸಗೊಬ್ಬರ ಯಾವುದೇ ಸಹಕಾರ ಸಂಘದಲ್ಲಿ ಸಿಗುತ್ತಿಲ್ಲ. ಈ ಸಂಬಂಧ ಕಳೆದ ಸಭೆಯಲ್ಲಿ ರಸಗೊಬ್ಬರ ಸಮರ್ಪಕವಾಗಿ ಪೂರೈಕೆಗೆ ಸೂಚಿಸಲಾಗಿತ್ತು. ಆದರೆ ಇಲ್ಲಿನ ರೈತರಿಗೆ ರಸಗೊಬ್ಬರ ಸರಿಯಾಗಿ ದೊರೆಯುತ್ತಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ. ಷೇಕ್, ಹಾಸನದಲ್ಲಿ ರಸಗೊಬ್ಬರ ದಾಸ್ತಾನು ಇದ್ದು, ರಸಗೊಬ್ಬರ ಪೂರೈಕೆಗೆ ಅಗತ್ಯ ಕ್ರಮವಹಿಸಲಾಗುವುದು ಎಂದು ಹೇಳಿದರು.
ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ
ಜಿಲ್ಲೆಯಲ್ಲಿ ಹೆಚ್ಚು ಮಳೆಯಾದಲ್ಲಿ ಅಗತ್ಯವಿರುವ ಕಡೆಗಳಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯುವುದು, ವೈದ್ಯರನ್ನು ನಿಯೋಜಿಸುವುದು, ಮತ್ತಿತರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ಮನೆ ನೀಡಲಾಗಿದೆ. ಹಾಗೆಯೇ ಬಾಕಿ ಇರುವ ಮನೆಗಳ ಹಸ್ತಾಂತರ ಮಾಡುವುದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.