ಕೊರೊನಾ ಸೋಂಕಿತರ ಅಂತ್ಯಸಂಸ್ಕಾರ: ಮಾಹಿತಿ ಕಲೆ ಹಾಕಿದ ಕೊಡಗು ಜಿಲ್ಲಾಡಳಿತ
ಮಡಿಕೇರಿ, ಜುಲೈ 4: ಈಗ ಎಲ್ಲೆಡೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುವುದೇ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಅಲ್ಲಲ್ಲಿ ನಡೆದ ಅಧ್ವಾನಗಳು ಜನರನ್ನು ಭಯಭೀತರನ್ನಾಗಿಸುತ್ತಿದೆ. ಹೀಗಾಗಿ ಕೊಡಗು ಜಿಲ್ಲಾಡಳಿತ ವಿವಿಧ ಸಮಾಜದ ಹಾಗೂ ಧಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿ ಮಾಹಿತಿಗಳನ್ನು ಕಲೆಹಾಕಿದೆ.
Recommended Video
ಈ ವೇಳೆ ವಿವಿಧ ಸಮಾಜದ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಮುಂದೆ ಹೇಳಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಇಡೀ ರಾಜ್ಯ ಹಾಗೂ ದೇಶದಲ್ಲಿ ಕೋವಿಡ್-19 ಸೋಂಕು ಹರಡುತ್ತಿದೆ. ಆದ್ದರಿಂದ ಆಕಸ್ಮಿಕವಾಗಿ ಕೋವಿಡ್-19 ಸೋಂಕಿನಿಂದ ಮರಣ ಹೊಂದಿದ್ದಲ್ಲಿ ಎಸ್ಒಪಿಯಂತೆ ಅಂತ್ಯಸಂಸ್ಕಾರ ಮಾಡಬೇಕಿದೆ. ಮೃತಪಟ್ಟ ಕುಟುಂಬದವರು ಹಾಗೂ ಇತರ ಬಂಧುಗಳು ಸಹಕರಿಸಬೇಕಿದೆ" ಎಂದು ಮನವಿ ಮಾಡಿದರು.
ಜಿಲ್ಲಾಡಳಿತವು 3 ತಾಲೂಕಿನಲ್ಲಿ ತಲಾ 1 ಎಕರೆ ಜಾಗವನ್ನು ಗುರುತಿಸಿದೆ. ಶವ ಸಂಸ್ಕಾರ ಸಂದರ್ಭದಲ್ಲಿ ಕಾರ್ಯಾಚರಣ ವಿಧಾನ ಮಾಡಬೇಕಿರುವುದರಿಂದ ಜಿಲ್ಲೆಯಲ್ಲಿ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಿ ತರಬೇತಿ ನೀಡಲಾಗುವುದು. ಜೊತೆಗೆ ವಿವಿಧ ಧಾರ್ಮಿಕ ಹಾಗೂ ಸಮಾಜದ ಕಡೆಯಿಂದ ಸ್ವಯಂ ಸೇವಕರು ಸ್ವಯಂ ಪ್ರೇರಣೆಯಿಂದ ಮುಂದೆ ಬಂದಲ್ಲಿ ಅಂತಹವರಿಗೂ ತರಬೇತಿ ನೀಡಲಾಗುವುದು ಎಂದರು.

ಈ ಸಂಬಂಧ ಆಯಾ ತಾಲೂಕಿನ ಡಿವೈಎಸ್ ಪಿಗಳಿಗೆ ಜುಲೈ 6ರೊಳಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡುವುದಿಲ್ಲ. 4 ಮೀಟರ್ ಅಂತರದಲ್ಲಿ ಮೃತದೇಹದ ಮುಖವನ್ನು ನೋಡಬಹುದು. 4 ಮೀಟರ್ ದೂರದಲ್ಲಿಯೇ ವಿವಿಧ ಧಾರ್ಮಿಕ ಸಂಪ್ರದಾಯವನ್ನು ನೆರವೇರಿಸಬಹುದು. ಆದರೆ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದಂತೆ ವಿಡಿಯೋವನ್ನು ಸರ್ಕಾರದ ವತಿಯಿಂದ ಮಾಡಲಾಗುತ್ತದೆ. ಬೇರೆಯವರು ವಿಡಿಯೊ ಮಾಡುವಂತಿಲ್ಲ ಎಂದು ವಿವರಿಸಿದರು.












Click it and Unblock the Notifications