ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ
ಕೊಡಗು, ನವೆಂಬರ್ 04 : ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ವಿರೋಧ ವ್ಯಕ್ತವಾಗಿದೆ.
ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಟಿಪ್ಪು ಜಯಂತಿ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಸಂಘರ್ಷಕ್ಕೆ ದಾರಿ ಮಾಡಿ ಕೊಡದೇ ಸರ್ಕಾರ ಉತ್ತಮ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಸಮಿತಿ ಹೇಳಿದೆ.
ಸಮಿತಿ ಸಂಚಾಲಕ ಅಭಿಮನ್ಯು ಕುಮಾರ್ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಸಿದ್ದರಾಮಯ್ಯ ನೇತೃತ್ವದ ಸಮ್ಮಿಶ್ರ ಸರ್ಕಾರ ಮತಕ್ಕಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿತ್ತು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವೂ ಜಯಂತಿ ಆಚರಣೆಗೆ ಮುಂದಾಗಿರುವುದು ವಿಷಾದನೀಯ' ಎಂದರು.

'2015ರಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ಹತ್ಯೆಯಾಗಿದ್ದ ಕುಟ್ಟಪ್ಪ ಮನೆಗೆ ಭೇಟಿ ನೀಡಿದ್ದ ಕುಮರಸ್ವಾಮಿ ಅವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಯಂತಿ ಆಚರಣೆ ಕೈ ಬಿಡುತ್ತೇವೆ ಎಂದು ಭರವಸೆ ನೀಡಿದ್ದರು. ಈಗ ಮಾತಿಗೆ ತಪ್ಪುತ್ತಿದ್ದಾರೆ' ಎಂದು ಅಭಿಮನ್ಯು ಕುಮಾರ್ ಆರೋಪಿಸಿದ್ದಾರೆ.
ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಅವರು, 'ಜಿಲ್ಲೆಯ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸಕ್ಕೆ ಸಮ್ಮಿಶ್ರ ಸರ್ಕಾರ ಮುಂದಾಗಿದೆ. ಅಲ್ಲದೇ ಕಾವೇರಿ ನದಿಯ ತವರೂರಿನಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.
ಯಾರಿಗೂ ಬೇಡವಾದ ಟಿಪ್ಪು ಜಯಂತಿಯನ್ನು ಕೊಡಗಿನಲ್ಲಿ ಆಚರಣೆ ಮಾಡಿದರೆ ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾಗಿರುವ ಕೊಡಗಿನ ಜನರಿಗೆ ಮತ್ತಷ್ಟು ನೋವಾಗಲಿದೆ ಎಂದು ಜನರು ಹೇಳಿದ್ದಾರೆ.












Click it and Unblock the Notifications