ಮಡಿಕೇರಿಯಲ್ಲಿ ಗಾಂಧಿ ಚಿತಾಭಸ್ಮಕ್ಕೆ ಗೌರವಾರ್ಪಣೆ
ಮಡಿಕೇರಿ, ಜನವರಿ 30: ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರುವ ಗಾಂಧೀಜಿ ಚಿತಾಭಸ್ಮವನ್ನು ಹೊರತೆಗೆದು, ಪುಷ್ಪಮಾಲೆಗಳಿಂದ ಶೃಂಗರಿಸಿ, ಗೌರವ ಸಮರ್ಪಣೆ ಮಾಡುವ ಮೂಲಕ ಸೋಮವಾರ ಹುತಾತ್ಮರ ದಿನವನ್ನು ಅರ್ಥಪುರ್ಣವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊಲೀಸ್ ಬ್ಯಾಂಡ್, ಸ್ಕೌಟ್ ಮತ್ತು ಗೈಡ್ಸ್, ಎನ್ ಸಿಸಿ ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯರಸ್ತೆ ಮೂಲಕ ಗಾಂಧೀಜಿ ಚಿತಾಭಸ್ಮವನ್ನು ಮೆರವಣಿಗೆ ಮಾಡಲಾಯಿತು.[ಕೊಡಗಿನಲ್ಲಿ ಉರುಳಿಗೆ ಸಿಕ್ಕಿ ಮತ್ತೊಂದು ಹುಲಿ ಬಲಿ!]
ಗಾಂಧಿ ಮೈದಾನಕ್ಕೆ ತೆರಳಿ, ಅಲ್ಲಿನ ಗಾಂಧಿ ಮಂಟಪದಲ್ಲಿರಿಸಿ, ಗಾಂಧಿ ಪ್ರತಿಮೆಗೆ ಮಾಲೆ ಅರ್ಪಿಸಿ, ಗೌರವ ನಮನ ಸಮರ್ಪಿಸಲಾಯಿತು. ಇದೇ ವೇಳೆ ಪೊಲೀಸ್ ಇಲಾಖೆಯಿಂದ ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟ್ರಪಿತನಿಗೆ ಗೌರವ ಸಲ್ಲಿಸಲಾಯಿತು.[ಮಡಿಕೇರಿಯಲ್ಲಾಯ್ತು ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಮಗಳ ಮದುವೆ]
ಆ ಬಳಿಕ ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿ ಮೆಚ್ಚಿನ ಭಜನಾ ಗಾಯನ ಕಾರ್ಯಕ್ರಮವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ವಿದ್ಯಾರ್ಥಿಗಳು ನಡೆಸಿಕೊಟ್ಟರು, ಸರ್ವಧರ್ಮ ಗುರುಗಳಿಂದ ಭಗವದ್ಗೀತೆ, ಬೈಬಲ್, ಕುರಾನ್ ಸಂದೇಶಗಳ ಪಠಣ ಮಾಡಲಾಯಿತು.
ಸರ್ವೋದಯ ಸಮಿತಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಮಾತನಾಡಿ, ಗಾಂಧಿ ಮಂಟಪದ ಬಳಿ ಗಾಂಧೀಜಿ 'ಸ್ಮಾರಕ ಭವನ' ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಸಂಬಂಧ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸರಕಾರ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಗಾಂಧಿ ಭವನ ನಿರ್ಮಾಣಕ್ಕಾಗಿ 3 ಕೋಟಿ ರುಪಾಯಿ ನಿಗದಿ ಮಾಡಿದ್ದು, ಈಗಾಗಲೇ 20 ಲಕ್ಷ ರುಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.