ಭಾಗಮಂಡಲದಲ್ಲಿ ಸಂಭ್ರಮದ ಜರಗಿದ ಪೊಲಿಂಕಾನ ಉತ್ಸವ
ಮಡಿಕೇರಿ: ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ವಿಶೇಷ ಪೂಜೆಯೊಂದಿಗೆ ಭಾನುವಾರ ಜರುಗಿತು.
ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ, ಭಗಂಡೇಶ್ವರ ದೇವಾಲಯಗಳಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣಗಳನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.
ಇದಾದ ನಂತರ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ಬಳಿಕ ವಿಸರ್ಜಿಸಲಾಯಿತು. ನೆರೆದಿದ್ದ ಸಾವಿರಾರು ಭಕ್ತರು ಪೊಲಿಂಕಾನ ಉತ್ಸವಕ್ಕೆ ಸಾಕ್ಷಿಯಾದರು.
ತ್ರಿವೇಣಿ ಸಂಗಮದಲ್ಲಿ ವಿಧಿವಿಧಾನ
ಈ ಸಂದರ್ಭ ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಹೆಚ್ಚಿನ ಮಳೆಗಾಗಿ ಪ್ರಾರ್ಥನೆ
ಹಿಂದೆ ಆಷಾಡ ಮಾಸದಲ್ಲಿ ವ್ಯಾಪಕ ಮಳೆಯಾಗುತ್ತಿತ್ತು. ಇದರಿಂದಾಗಿ ಯಾವುದೇ ಜೀವಕ್ಕೆ ಹಾನಿಯಾಗದಂತೆ ಕಾವೇರಿ ಮಾತೆಗೆ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಆದರೆ ಇತ್ತೀಚಿನ ವರ್ಷದಲ್ಲಿ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಆದ್ದರಿಂದ ಕಾವೇರಿ ಕಣಿವೆಯಲ್ಲಿ ಹೆಚ್ಚಿನ ಮಳೆಯಾಗಿ ನಾಡಿಗೆ ಸಮೃದ್ದಿ ತರುವಂತಾಗಲಿ ಎಂದು ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಲಾಗುತ್ತದೆ ಎಂದು ಹೇಳಿದರು.
ಪೊಲಿಂಕಾನ ಉತ್ಸವದ ಆಚರಣೆ ವಿಶೇಷ
ಭಾಗಮಂಡಲ ಭಗಂಡೇಶ್ವರ ದೇವಾಯಲಯದ ಪ್ರಧಾನ ಅರ್ಚಕರಾದ ಹರೀಶ್ ಭಟ್ ಅವರು ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪೊಲಿಂಕಾನ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿರುವ ಬಗ್ಗೆ ವಿವರಿಸಿದರು
ತ್ರಿವೇಣಿ ಸಂಗಮಕ್ಕೆ ಬಾಗಿನ
ಕುದುಕುಳಿ ಭರತ್ ಅವರು, "ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಜ್ರ ವೈಡೂರ್ಯಗಳಿಂದ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ. ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪ್ರಾರ್ಥಿಸಿದರು.
ಹಲವರು ಭಾಗಿ
ಪೊಲಿಂಕಾನ ಉತ್ಸವದಲ್ಲಿ ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಲ್ಲಡ್ಕ ಅಪ್ಪಾಜಿ, ಪಾರುಪತ್ತೆದಾರರಾದ ಕೆ.ಪಿ.ಪೊನ್ನಣ್ಣ, ತಲಕಾವೇರಿ-ಭಾಗಮಂಡಲ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಕುಮಾರ್ ಇತರರು ಇದ್ದರು.