ಪೊಲಿಂಕಾನ ಉತ್ಸವ; ತಾಯಿ ಕಾವೇರಿಗೆ ನಮಿಸಿದ ಕೊಡವರು
ಮಡಿಕೇರಿ, ಜುಲೈ 18; ಕೊಡಗು ಜಿಲ್ಲೆಯ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಪೊಲಿಂಕಾನ ಉತ್ಸವ ವಿಶೇಷ ಪೂಜೆಯೊಂದಿಗೆ ಸೋಮವಾರ ನಡೆಯಿತು. ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪ್ರಾರ್ಥಿಸಲಾಯಿತು.
ಭಗಂಡೇಶ್ವರ ದೇವಾಯಲಯದ ಪ್ರಧಾನ ಅರ್ಚಕರಾದ ಹರೀಶ್ ಮತ್ತು ರವಿಕುಮಾರ್ ಆಷಾಢ ಮಾಸದ ಅಮಾವಾಸ್ಯೆ ದಿನದಂದು ಭಗಂಡೇಶ್ವರ ದೇವಾಲಯದಲ್ಲಿ ಮಧ್ಯಾಹ್ನ ವಿಶೇಷ ಪೂಜೆ ಸಲ್ಲಿಸಿ ಬಳಿಕ ಬಾಳೆದಿಂಡಿನಿಂದ ಅಲಂಕರಿಸಿದ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ಭಗಂಡೇಶ್ವರ ದೇವಾಲಯದ ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ದೇವಾಲಯಗಳಿಗೆ ಪೂಜೆ ಸಲ್ಲಿಕೆ ಮಾಡಲಾಯಿತು. ಬಳಿಕ ಬಾಳೆದಿಂಡಿನಿಂದ ತಯಾರಿಸಿದ ಸುಮಂಗಲಿ ಮಂಟಪಕ್ಕೆ ದೀಪ ಬೆಳಗಿ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿತಟ್ಟೆ ಮತ್ತಿತರ ಆಭರಣವಿಟ್ಟು ವಿಶೇಷ ಪೂಜೆ ಸಲ್ಲಿಸಿ ಭಗಂಡೇಶ್ವರ ದೇವಾಲಯದ ಸುತ್ತ ಪ್ರದಕ್ಷಿಣೆ ಮಾಡಲಾಯಿತು.
ಬಳಿಕ ತ್ರಿವೇಣಿ ಸಂಗಮದಲ್ಲಿ ಪೂಜಾ ವಿಧಿ ವಿಧಾನಗಳನ್ನು ಕೈಗೊಂಡು ಮಂಟಪ ವಿಸರ್ಜಿಸಲಾಯಿತು. ಉತ್ಸವದಲ್ಲಿ ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಲ್ಲಡ್ಕ ಅಪ್ಪಾಜಿ, ಪಾರುಪತ್ತೆದಾರರಾದ ಕೆ. ಪಿ. ಪೊನ್ನಣ್ಣ, ಕುದುಪಜೆ ಪ್ರಕಾಶ್, ಎ. ಎಸ್. ಶ್ರೀಧರ ಮತ್ತು ನೂರಾರು ಭಕ್ತರು ಪಾಲ್ಗೊಂಡಿದ್ದರು.
ವಿಶೇಷ ಪೂಜೆ ಸಲ್ಲಿಸಲಾಗುತ್ತದೆ; ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರು ಉತ್ಸವದ ಬಗ್ಗೆ ಮಾತನಾಡಿ, "ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದಲ್ಲಿ ಪೊಲಿಂಕಾನ ಉತ್ಸವದಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಗಂಡೇಶ್ವರ ದೇವಾಲಯದ ಎಲ್ಲಾ ದೇವರಿಗೆ ಪೂಜೆ ಪುರಸ್ಕಾರ ಕೈಗೊಂಡು ಕರಿಮಣಿ, ಚಿನ್ನದ ಸರ, ತೊಟ್ಟಿಲು, ಬೆಳ್ಳಿತಟ್ಟೆ ಮತ್ತಿತರವನ್ನು ಸುಮಂಗಲಿಯ ಬಾಳೆ ದಿಂಡಿನ ಮಂಟಪಕ್ಕೆ ಹಾಕಿ ತ್ರಿವೇಣಿ ಸಂಗಮದಲ್ಲಿ ವಿಸರ್ಜಿಸುವ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ" ಎಂದು ವಿವರಿಸಿದರು.
ಕುದುಕುಳಿ ಭರತ್ ಮಾತನಾಡಿ, "ನಾಡಿನ ಜೀವನದಿ ಕಾವೇರಿಯ ತ್ರಿವೇಣಿ ಸಂಗಮಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಇದಾಗಿದೆ. ವಜ್ರ ವೈಡೂರ್ಯಗಳಿಂದ ಅಲಂಕರಿಸಿ ಕಾವೇರಿ ಮಾತೆಗೆ ಬೇಕಾದ ವಸ್ತುಗಳನ್ನು ಬಾಗಿನ ಅರ್ಪಿಸುವ ಕಾರ್ಯಕ್ರಮವು ಪೊಲಿಂಕಾನದ ವಿಶೇಷ ಪೂಜಾ ಕಾರ್ಯಕ್ರಮವಾಗಿದೆ" ಎಂದರು.
ಹಿಂದಿನಿಂದಲೂ ಜೀವನದಿ ಕಾವೇರಿ ನಾಡಿನಲ್ಲಿ ಉತ್ತಮ ಮಳೆಯಾಗಿ ರೈತರು, ನಾಡಿನ ಜನರಲ್ಲಿ ಸುಭಿಕ್ಷೆ ತರುವಂತಾಗಬೇಕು ಎಂದು ಪೊಲಿಂಕಾನ ಉತ್ಸವದಲ್ಲಿ ಪ್ರಾರ್ಥಿಸಲಾಗುತ್ತದೆ. ಹಿಂದೆ ಆಷಾಡ ಮಾಸದಲ್ಲಿ ಭಾರೀ ಮಳೆಯಾಗುತ್ತಿತ್ತು. ಇದರಿಂದಾಗಿ ಯಾವುದೇ ಜೀವಕ್ಕೆ ಹಾನಿಯಾಗದಂತೆ ಕಾವೇರಿ ಮಾತೆಗೆ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲಾಗುತ್ತಿತ್ತು. ಆದರೆ ಈ ಬಾರಿ ಕೊಡಗಿನಲ್ಲಿ ಸಹ ಮಳೆರಾಯ ಮುನಿಸಿಕೊಂಡಿದ್ದಾನೆ.
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 15.77 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 40.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 909.73 ಮಿ.ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 1808.26 ಮಿ. ಮೀ. ಮಳೆಯಾಗಿತ್ತು.
ಕೆಲವು ದಿನಗಳ ಹಿಂದೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು, ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದರು. ಕಾವೇರಿ ತಾಯಿಗೆ ಸಂಕಲ್ಪ ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆಯನ್ನು ನೆರವೇರಿಸಿದ್ದರು.
ನಾಡಿನಲ್ಲಿ ಉತ್ತಮ ಮಳೆಯಾಗಿ ಸುಭೀಕ್ಷೆ ತರುವಂತಾಗಬೇಕು. ಹೆಚ್ಚಿನ ಮಳೆಯಿಂದ ಕೃಷಿ ಚಟುವಟಿಕೆ ಗರಿಗೆದರಬೇಕು. ಉತ್ತಮ ಮಳೆಯಾಗಿ ಆಹಾರ ಬೆಲೆಗಳು ಇಳಿಕೆ ಆಗಬೇಕು ಎಂದು ಸಚಿವರು ಪ್ರಾರ್ಥಿಸಿದ್ದರು.












Click it and Unblock the Notifications