ಕೊಡಗಿನಲ್ಲಿ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ
ಮಡಿಕೇರಿ, ಮಾರ್ಚ್ 16: ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿ ಬರುತ್ತಿವೆ. ಕೊರೊನಾ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರದಿಂದ ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕರು ಕೋವಿಡ್ ನಿಯಮವನ್ನು ಪಾಲನೆ ಮಾಡುವಂತೆಯೂ ಕೊಡಗು ಜಿಲ್ಲಾಧಿಕಾರಿ ಸೂಚಿಸಿದ್ದು, ಕೋವಿಡ್ ನಿಯಂತ್ರಣಕ್ಕೆ ಕಡ್ಡಾಯವಾಗಿ ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲನೆ ಮಾಡುವುದು, ಕೋವಿಡ್ ಲಸಿಕೆ ಪಡೆದುಕೊಳ್ಳುವುದು ಹಾಗೂ ಕೋವಿಡ್ ಪರೀಕ್ಷೆಗೆ ಒಳಪಡುವುದು ಮತ್ತಿತರ ನಿಯಂತ್ರಣ ಚಟುವಟಿಕೆಗಳಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವಿವಿಧ ಸಮಾರಂಭಗಳು ಹಾಗೂ ಆಚರಣೆಗಳ ಸಂದರ್ಭದಲ್ಲಿ ಸಾರ್ವಜನಿಕರು ಹೆಚ್ಚು ಗುಂಪು ಸೇರುವ ಹಿನ್ನೆಲೆಯಲ್ಲಿ ಸೋಂಕು ಹರಡುವ ಅಪಾಯ ಹೆಚ್ಚಿದೆ. ಆದ್ದರಿಂದ ಭಾರತ ಸರ್ಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಆಚರಣೆಗಳು, ಸಮಾರಂಭಗಳಲ್ಲಿ ಪ್ರತಿ ವ್ಯಕ್ತಿಗೆ 3.25 ಚದರ ಮೀಟರ್ ಮಾನದಂಡ ಪಾಲಿಸುವುದು ಕಡ್ಡಾಯವಾಗಿದೆ.

ಇನ್ನು ಮದುವೆ ಸಮಾರಂಭದಲ್ಲಿ ತೆರೆದ ಪ್ರದೇಶಗಳಲ್ಲಿ 500 ಜನ ಮೀರದಂತೆ, ಸಭಾಂಗಣ ಇತ್ಯಾದಿ ಮುಚ್ಚಿದ ಹಾಲ್ಗಳಲ್ಲಿ 200 ಜನ ಮೀರಬಾರದು. ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 100 ಜನ ಮೀರದಂತೆ ಹಾಗೂ ಮುಚ್ಚಿದ ಪ್ರದೇಶಗಳಲ್ಲಿ 50 ಮೀರದಂತೆ, ನಿಧನ, ಶವ ಸಂಸ್ಕಾರಗಳಲ್ಲಿ ತೆರೆದ ಪ್ರದೇಶಗಳಲ್ಲಿ 100 ಹಾಗೂ 50 ಜನ ಮೀರಬಾರದು. ಅಂತ್ಯಕ್ರಿಯೆಗಳಲ್ಲಿ 50 ಮೀರದಂತೆ, ಇತರೆ ಸಮಾರಂಭಗಳಲ್ಲಿ ಸಭಾಂಗಣ ವಿಸ್ತೀರ್ಣಕ್ಕೆ ಅನುಗುಣವಾಗಿ 100 ಜನ ಮೀರದಂತೆ, ಧಾರ್ಮಿಕ ಆಚರಣೆಗಳು, ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನ ಮೀರದಂತೆ ಮತ್ತು ರಾಜಕೀಯ ಆಚರಣೆಗಳಿಗೆ 500 ಮಂದಿ ಮೀರಬಾರದಂತೆ ಸಾರ್ವಜನಿಕರು ಈ ಆದೇಶವನ್ನು ಪಾಲಿಸುವಂತೆ ಹೇಳಿದ್ದಾರೆ.
ಇದೆಲ್ಲದರ ನಡುವೆ ಕೇರಳ ಹಾಗೂ ಮಹಾರಾಷ್ಟ್ರಗಳಿಂದ ಬರುವವರಿಗೆ ಆರ್.ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ಹಾಗೂ ಜಿಲ್ಲೆಯ ಗಡಿ ಭಾಗಗಳಲ್ಲಿ ಆರ್.ಟಿ- ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯ ಪರಿಶೀಲನೆಯನ್ನು ತೀವ್ರಗೊಳಿಸಲು ಮತ್ತೊಮ್ಮೆ ಸೂಚಿಸಲಾಗಿದೆ.

ಸಾರ್ವಜನಿಕರು ಇದನ್ನರಿತು ಕೋವಿಡ್ ನಿಯಮದಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್-19 ನಿಯಂತ್ರಣದಲ್ಲಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.












Click it and Unblock the Notifications