ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಆತಂಕದಲ್ಲಿ ಜನರು
ಮಡಿಕೇರಿ ಜುಲೈ 04 : ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಭಾನುವಾರ ಸುರಿದಿರುವ ಮಳೆಗೆ ಜಿಲ್ಲೆಯ ವಿವಿಧೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಮಳೆ ಹೆಚ್ಚಾಗುತ್ತಿರುವುದರಿಂದ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.
ಈಗಾಗಲೇ ಹಾರಂಗಿ ಜಲಾಶಯ ಭರ್ತಿಯಾಗುತ್ತಿರುವ ಹಿನ್ನಲೆ ಮಡಿಕೇರಿ ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಬಾಗಿನ ಅರ್ಪಿಸಿದ್ದಾರೆ. ಆದರೆ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು ಜನರಲ್ಲಿ ಪ್ರವಾಹದ ಭೀತಿ ಉಂಟು ಮಾಡಿದೆ.
ಕೊಡಗಿನಲ್ಲಿ ಮಳೆಗಾಲ ಬಿರುಸು, ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಣೆ
ಏಕೆಂದರೆ 2018ರಲ್ಲಿ ಭೂಮಿ ಕಂಪಿಸಿದ ಬೆನ್ನಲ್ಲೇ ಭಾರೀ ಮಳೆಯಾಗಿ ಅವಾಂತರ ಸೃಷ್ಠಿಯಾಗಿತ್ತು.ಇದೀಗ ಮತ್ತೆ ಮಳೆ ನಿಲ್ಲದೇ ಸುರಿಯುತ್ತಿರುವುದರಿಂದ ಜನರಲ್ಲಿ ಹಿಂದಿನ ಕರಾಳ ಘಟನೆ ನೆನಪಾಗುತ್ತಿದೆ.
ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ; ಮಡಿಕೇರಿ ಜಿಲ್ಲೆಯ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿದ್ದು, ನಾಪೋಕ್ಲು- ಭಾಗಮಂಡಲ ಸಂಪರ್ಕ ಕಡಿತಗೊಂಡಿದೆ. ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಾಗಾಗಿ 15 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಮಲೆನಾಡಿನಲ್ಲಿ ಧಾರಾಕಾರ ಮಳೆ: ಮುಳುಗಡೆ ಭೀತಿಯಲ್ಲಿದೆ ಹೆಬ್ಬಾಳೆ ಸೇತುವೆ
ಜಿಲ್ಲೆಯಲ್ಲಿ 7 ಭಾರೀ ಭೂ ಕಂಪನವಾದ ಬೆನ್ನಲ್ಲೇ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದೆ. ಮಡಿಕೇರಿ ಸಮೀಪದ ಎರಡನೇ ಮೊಣ್ಣಂಗೇರಿಗೆ ತೆರಳುವ ರಸ್ತೆಯಲ್ಲಿ ಬೆಟ್ಟ ಕುಸಿದು ರಸ್ತೆ ಸಂಚಾರಕ್ಕೆ ತಡೆಯುಂಟಾಗಿದೆ. ಬೆಟ್ಟ ಗುಡ್ಡಗಳಲ್ಲಿ ವಾಸಮಾಡುವ ಜನರು ಆತಂಕದಲ್ಲಿದ್ದಾರೆ. ತಲಕಾವೇರಿ, ಭಾಗಮಂಡಲದಲ್ಲಿ ಭಾರೀ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮ ಭರ್ತಿಯಾಗಿದೆ. ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದ ಜನರು ಆತಂಕದಲ್ಲಿದ್ದಾರೆ.
ಜಿಲ್ಲೆಯಾದ್ಯಂತ ಮಳೆ ಪ್ರಮಾಣ; ಸೋಮವಾರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಸರಾಸರಿ ಮಳೆ 45.16 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 891 ಮಿ. ಮೀ. ಮಳೆಯಾಗಿದ್ದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 949.46 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ 74.30 ಮಿ.ಮೀ. , ವಿರಾಜಪೇಟೆ ತಾಲ್ಲೂಕಿನಲ್ಲಿ 31.32 ಮಿ.ಮೀ. , ಸೋಮವಾರಪೇಟೆ ತಾಲ್ಲೂಕಿನಲ್ಲಿ 29.87 ಮಿ.ಮೀ. ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಿದ್ದು, ಇಂದಿನ ನೀರಿನ ಮಟ್ಟ 2855.24 ಅಡಿಗಳಾಗಿದೆ. ಕಳೆದ ವರ್ಷ ಇದೇ ದಿನ ನೀರಿನ ಪ್ರಮಾಣ 2841.99 ಅಡಿವರೆಗಿತ್ತು.