ಕೊಡಗಿನಲ್ಲೀಗ ಪ್ರವಾಹ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ
ಮಡಿಕೇರಿ, ಆಗಸ್ಟ್ 14: ಕೊಡಗಿನಲ್ಲಿ ಮಹಾಮಳೆ ತಂದ ದುರಂತ ನೂರೆಂಟು... ಈ ದುರಂತದಿಂದ ಆಚೆ ಬಂದು ಮತ್ತೆ ಬದುಕು ಕಟ್ಟಿಕೊಳ್ಳುವುದು, ಜತೆಗೆ ಪ್ರಕೃತಿಯ ಮುನಿಸಿಗೆ ತತ್ತರಿಸಿ ಹೋಗಿರುವ ಊರನ್ನು ಮತ್ತೆ ಯಥಾಸ್ಥಿತಿಗೆ ತರುವುದೇ ಇದೀಗ ಎಲ್ಲರ ಮುಂದಿರುವ ದೊಡ್ಡ ಸವಾಲಾಗಿದೆ.
ಪ್ರವಾಹ ನಿಂತ ಬಳಿಕ ಮಾಡಬೇಕಾದ ಮುಖ್ಯ ಕೆಲಸವೆಂದರೆ, ಸಂಕಷ್ಟಕ್ಕೆ ತುತ್ತಾದವರಿಗೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿ ಪರಿಹಾರ ಕೇಂದ್ರದಲ್ಲಿರುವವರಿಗೆ ಆತ್ಮಸ್ಥೈರ್ಯ, ಮನೋಸ್ಥೈರ್ಯ ತುಂಬುವುದು. ಇದೀಗ ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹೀಗೆ ನಾನಾ ಇಲಾಖೆಗಳು ಈ ಕಾರ್ಯದಲ್ಲಿ ನಿರತರಾಗಿರುವುದು ಕಂಡುಬರುತ್ತಿದೆ.
ಮುಗಿಯದ ಆತಂಕ: ಕೊಡಗು ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್
ಈಗಾಗಲೇ ಜಿಲ್ಲಾಡಳಿತದಿಂದ ಪರಿಹಾರ ಕೇಂದ್ರದಲ್ಲಿ ವೈದ್ಯರು ಹಾಗೂ ಶುಶ್ರೂಷಕರ ನಿಯೋಜನೆ ಮಾಡಲಾಗಿದ್ದು, ಅಗತ್ಯ ಔಷಧ ಪೂರೈಕೆ, ಆರೋಗ್ಯ ಮತ್ತು ಶಿಕ್ಷಣ ಚಟುವಟಿಕೆ, ಜಿಲ್ಲಾ ಮಾನಸಿಕ ಆರೋಗ್ಯ ತಂಡದಿಂದ ಸಮೂಹ ಸಮಾಲೋಚನೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಬಗ್ಗೆ ಅರಿವು, ಪರಿಹಾರ ಕೇಂದ್ರದಲ್ಲಿ ಮಕ್ಕಳ ಚಲನಚಿತ್ರ ಪ್ರದರ್ಶನ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ವಿಡಿಯೋ ಪ್ರದರ್ಶನ ನಡೆಯುತ್ತಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಮಾನಸಿಕ ಆರೋಗ್ಯ ತಂಡ ಹಾಗೂ ಕೊಡಗು ವೈದ್ಯಕೀಯ ವಿಜ್ಞಾನ ಮತ್ತು ಬೋಧಕ ಸಂಸ್ಥೆ ಸಮನ್ವಯದಿಂದ 6 ಮನೋತಜ್ಞರು ಹಾಗೂ ಸಮುದಾಯ ಆರೋಗ್ಯ ತಂಡದಿಂದ ಸಮೂಹ ಸಮಾಲೋಚನಾ ಚಟುವಟಿಕೆ ನಡೆಸಲಾಗುತ್ತಿದೆ. ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದರೊಂದಿಗೆ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬೀಳುತ್ತಿದ್ದ ಮನೆಯಿಂದ ಓಡಿಬಂದು ಜೀವ ಉಳಿಸಿಕೊಂಡರು
ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ 5 ಜನ ವೈದ್ಯರ ತಂಡವನ್ನು ಕರೆಸಿಕೊಳ್ಳಲಾಗಿದೆ. ಆರೋಗ್ಯ ಸಹಾಯಕಿಯರನ್ನು ನಿಯೋಜಿಸಲಾಗಿದೆ. ತೋರ ಗ್ರಾಮದಲ್ಲಿ ಪ್ರೊಜೆಕ್ಟರ್ ಮೂಲಕ ಸಾಂಕ್ರಾಮಿಕ ರೋಗ ನಿಯಂತ್ರಣ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ನಡುವೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ವಿ.ಸ್ನೇಹಾ, ಡಿಎಚ್ ಒ ಡಾ.ಕೆ.ಮೋಹನ್ ಮೊದಲಾದವರು ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅತಿವೃಷ್ಟಿ ಸಂದರ್ಭ ಮತ್ತು ನಂತರ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹೊರತಂದಿರುವ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡುವ ಮೂಲಕ ಅರಿವು ಮೂಡಿಸುವ ಕಾರ್ಯ ಮಾಡಿದ್ದಾರೆ.