"ಭಾಗಮಂಡಲ-ತಲಕಾವೇರಿ ಪವಿತ್ರ ಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ"
ಮಡಿಕೇರಿ. ಸೆಪ್ಟೆಂಬರ್ 13: ಭಾಗಮಂಡಲ ಹಾಗೂ ತಲಕಾವೇರಿ ತೀರ್ಥಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಧಾರ್ಮಿಕ ಕ್ಷೇತ್ರವನ್ನಾಗಿ ಮಾತ್ರ ಪರಿಗಣಿಸಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಕೊಡವ ಸಮಾಜಗಳ ಒಕ್ಕೂಟದ ಮಹಾಸಭೆಯಲ್ಲಿ ನಿರ್ಧರಿಸಲಾಗಿದೆ.
ಬಾಳುಗೋಡು ಕೊಡವ ಸಮಾಜದಲ್ಲಿ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಕೊಡಗಿನ ಭಾಗಮಂಡಲ ಹಾಗೂ ತಲಕಾವೇರಿ ಪುಣ್ಯಕ್ಷೇತ್ರಗಳಲ್ಲಿ ಯಾವುದೇ ಕಾರಣಕ್ಕೂ ಮೋಜು-ಮಸ್ತಿಗೆ ಅವಕಾಶ ನೀಡಬಾರದು, ಇದು ಪ್ರವಾಸಿ ತಾಣವಲ್ಲ ಎಂಬ ಬಗ್ಗೆ ಸರಕಾರಕ್ಕೆ ಮನವಿ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಒಕ್ಕೂಟದ ನೇತೃತ್ವದಲ್ಲಿ ನಿಯೋಗ ತೆರಳಿ ಈ ಸ್ಥಾನವನ್ನು ಧಾರ್ಮಿಕ ಕ್ಷೇತ್ರವನ್ನಾಗಿಯೇ ಉಳಿಸಲು ಶ್ರಮಿಸುವಂತೆ ಮನವಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕಾವೇರಿ ಸಂಕ್ರಮಣಕ್ಕಿಂತ ಮುಂಚಿತವಾಗಿ ಕೊಡಗಿನಲ್ಲಿರುವ ಎಲ್ಲಾ ಜನಾಂಗದ ಮುಖಂಡರ ಸಭೆ ಕರೆದು ಒಮ್ಮತದ ತೀರ್ಮಾನವನ್ನು ಕೈಗೊಳ್ಳುವಂತೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು.
ಕೊಡಗಿನ ಎಲ್ಲಾ ಜನಾಂಗದವರ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಪಡೆಯುವುದರೊಂದಿಗೆ ಧಾರ್ಮಿಕ ಕ್ಷೇತ್ರದಿಂದ 8 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೆಸಾರ್ಟ್, ಹೋಂಸ್ಟೆಗಳಿಗೆ ಅವಕಾಶ ನೀಡದಿರಲು ಒತ್ತಾಯಿಸಲು ನಿರ್ಧರಿಸಲಾಯಿತು.

ಕೋವಿಡ್-19 ಮಹಾಮಾರಿಯಿಂದ ಕೊಡಗು ಜಿಲ್ಲೆಯ ಜನತೆ ಸಂಕಷ್ಟದಲ್ಲಿದ್ದು, ಮದುವೆ, ಸಭೆ-ಸಮಾರಂಭಗಳು ಮುಂದೂಡಲ್ಪಟ್ಟಿದೆ. ಆದ್ದರಿಂದ ಮುಂದಿನ ದಿನದಲ್ಲಿ ಸಮಾಜದ ಬಾಡಿಗೆಯನ್ನು ಕಡಿಮೆ ಮಾಡಿ ಜನತೆಗೆ ಸಹಕಾರ ನೀಡಲು ತೀರ್ಮಾನಿಸಲಾಯಿತು. ಜೊತೆಗೆ ಕೋವಿಡ್ ಹಿನ್ನೆಲೆ ಪ್ರತಿವರ್ಷ ನಡೆಸಿಕೊಂಡು ಬರಲಾಗುತ್ತಿದ್ದ ಕೊಡವ ನಮ್ಮೆ (ಹಬ್ಬ)ಯನ್ನು ಈ ವರ್ಷ ನಡೆಸದಿರಲು ಸಭೆಯಲ್ಲಿ ನಿರ್ಧರಿಸಲಾಯಿತು.












Click it and Unblock the Notifications