ಕೊರೊನಾ ಮುಕ್ತ ಗ್ರಾಮ ಪಂಚಾಯತ್ಗೆ 5 ಲಕ್ಷ ರೂ.
ಮಡಿಕೇರಿ, ಮೇ 22: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ 'ಕೊರೊನಾ ಮುಕ್ತ ಗ್ರಾಮ' ಮಾಡುವ ಗ್ರಾ.ಪಂಗೆ ಶಾಸಕರ ನಿಧಿಯಡಿ 5 ಲಕ್ಷ ರೂ ನೀಡಲಾಗುವುದು ಎಂದು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರು ಪ್ರಕಟಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಕೋವಿಡ್- 19 ಸೋಂಕಿತರಿಗೆ ""ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದೆ, ಜೊತೆಗೆ ಸಾವಿನ ಪ್ರಮಾಣವು ಇಳಿಮುಖವಾಗುತ್ತಿದೆ. ಆದರೆ ಇಷ್ಟಕ್ಕೆ ಸಮಾಧಾನ ಪಡದೆ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಲಾಕ್ಡೌನ್ನ್ನು ಮುಂದುವರೆಸುವುದು ಒಳ್ಳೆಯದು'' ಎಂದು ಎಂ.ಪಿ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲವು ಸುಧಾರಣೆ ಮತ್ತು ಬದಲಾವಣೆ ಮಾಡಲಾಗಿದೆ. ತಜ್ಞ ವೈದ್ಯರು, ಶ್ರುಶ್ರೂಷಕರು, ಇತರೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯ ಹೊರಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಹಲವು ವೈದ್ಯರು ತವರು ಜಿಲ್ಲೆಗೆ ಆಗಮಿಸಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾದ ಸೋಂಕಿತರ ಮೊಬೈಲ್ ಮತ್ತು ಹಣ ಕಳೆದಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಸಂಬಂಧಪಟ್ಟವರು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.
ಕೋವಿಡ್-19 ಮಹಾಮಾರಿ ಇಂದಿಗೆ ಅಥವಾ ನಾಳೆಗೆ ತೊಲಗುವುದಿಲ್ಲ, ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು ಇತರೆ ತೊಂದರೆ ಉಂಟಾದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು. ಆದರೆ ಆತಂಕಕ್ಕೆ ತುತ್ತಾಗಬಾರದು ಎಂದು ಮನವಿ ಮಾಡಿದರು.
ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಕೋವಿಡ್- 19 ದೂರ ಇರಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ, ಸೋಂಕಿತರು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಔಷಧಿ ಪಡೆಯಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಸಲಹೆ ನೀಡಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತರಿಗೆ ಪೂರೈಕೆಯಾಗುವ ಆಹಾರ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ಅಲ್ಲಿನ ವ್ಯವಸ್ಥೆಯನ್ನು ಗಮನಿಸಿದರು. ಸಾಂಬಾರು ಸವಿದ ಶಾಸಕರು ಉತ್ತಮ ಗುಣಮಟ್ಟದ ಆಹಾರವನ್ನು ಕಾಲಮಿತಿಯೊಳಗೆ ಬಿಸಿಯಾಗಿ ಒದಗಿಸಬೇಕು. ನಿಯಮಿತವಾಗಿ ಆಹಾರ ಪೂರೈಸಿದ್ದಲ್ಲಿ ಮಾನಸಿಕವಾಗಿ ಸೋಂಕಿತರು ನೆಮ್ಮದಿಯಾಗಿ ಇರಲು ಸಾಧ್ಯವೆಂದರು.
Recommended Video
ಆಹಾರ ತಯಾರಿಸುವಾಗ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಅಡುಗೆ ಮಾಡಬೇಕು. ಸ್ವಚ್ಛತೆ ಕಾಪಾಡಬೇಕು. ಆಹಾರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.