ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಭರದ ಸಿದ್ಧತೆ
ಮಡಿಕೇರಿ, ಅಕ್ಟೋಬರ್, 15: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಅ.17ರ ಬೆಳಗ್ಗೆ 6.29 ನಿಮಿಷಕ್ಕೆ ಸಂಭವಿಸುವ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ.
ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ಅಗತ್ಯ ಬಸ್ಸು ಸೌಲಭ್ಯ, ಬೆಳಕು ವ್ಯವಸ್ಥೆ, ಬ್ಯಾರಿಕೇಡ್ ನಿರ್ಮಾಣ, ವಾಹನ ನಿಲುಗಡೆ ವ್ಯವಸ್ಥೆ ಮತ್ತಿತರ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ ನಡೆದಿವೆ.
ತುಲಾ ಸಂಕ್ರಮಣ ಜಾತ್ರೆ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ಸಿದ್ಧತೆ ಸಂಬಂಧ ಪರಿಶೀಲನೆ ಮಾಡಿದರು.
ತಲಕಾವೇರಿ ಜಾತ್ರೆಗೆ ಆಗಮಿಸುವ ಭಕ್ತಾಧಿಗಳಿಗೆ ಊಟೋಪಚಾರ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಮಡಿಕೇರಿ-ಭಾಗಮಂಡಲ-ತಲಕಾವೇರಿಗೆ ಹೋಗಿ ಬರಲು ಅಗತ್ಯ ಬಸ್ ಸೌಲಭ್ಯ, ಭಾಗಮಂಡಲದ ಪ್ರವಾಸಿ ಮಂದಿರದಿಂದ ತಲಕಾವೇರಿ ವರೆಗೆ ರಸ್ತೆ ಮಾರ್ಗದಲ್ಲಿ ಬೆಳಕು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಡಿಸೋಜ ಅವರು ತಿಳಿಸಿದ್ದಾರೆ.
ತಲಕಾವೇರಿಯಲ್ಲಿ ತೀರ್ಥ ಪಡೆದುಕೊಳ್ಳಲು, ಭಕ್ತಾಧಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಏಕಮುಖ ಪಥಗಳ ಬ್ಯಾರಿಕೇಡ್ಗಳ ನಿರ್ಮಾಣ, ತಾತ್ಕಾಲಿಕ ಶೌಚಾಲಯ ಹಾಗೂ ಕುಡಿಯುವ ನೀರು ವ್ಯವಸ್ಥೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಅ.16, 17 ಮತ್ತು 18 ರಂದು ವಾಹನ ಪಾರ್ಕಿಂಗ್ ಶುಲ್ಕವನ್ನು ತಲಕಾವೇರಿಯಲ್ಲಿ ಸಾರ್ವಜನಿಕರಿಂದ ಪಡೆಯಲಾಗುವುದಿಲ್ಲ ಹಾಗೂ ಅಕ್ಟೋಬರ್ 17 ರ ಬೆಳಗ್ಗೆ 4 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಭಾಗಮಂಡಲ ಕ್ಷೇತ್ರದಲ್ಲಿ ದಾರ್ಮಿಕ ಕಾರ್ಯಗಳಿಗೆ ಹಾಗೂ ಮುಡಿಕೊಡುವ ಸಂಪ್ರದಾಯಗಳಿಗೆ ಭಕ್ತಾಧಿಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜಾತ್ರಾ ಸಂದರ್ಭದಲ್ಲಿ ತಲಕಾವೇರಿಯಲ್ಲಿರುವ ಬ್ರಹ್ಮಗಿರಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ಕಲ್ಪಿಸಲಾಗುವುದು ಈ ಬಗ್ಗೆ ಅಗತ್ಯ ಬಂದೋಬಸ್ತ್ ತಯಾರಿ ನಡೆಸಲಾಗುವುದು ಎಂದು ತಿಳಿಸಿದರು.
ಕಾವೇರಿ ತುಲಾ ಸಂಕ್ರಮಣ ಜಾತ್ರೆ ಬಂದೋಬಸ್ತ್ ಗಾಗಿ 35 ಸಿಸಿ ಟಿವಿ ಕ್ಯಾಮೆರ ಅಳವಡಿಸಲಾಗಿದೆ. 500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ದೇವಾಲಯದ ಆಡಳಿತಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವತಿಯಿಂದ ಗೀತ ಗಾಯನ ಹಾಗೂ ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಎಂದು ಅವರು ತಿಳಿಸಿದರು.