ದುರ್ವಾಸನೆಯಿಂದ ಪಾರಾದ ಮಡಿಕೇರಿ ಜನ; ಹೇಗೆ ಗೊತ್ತಾ?
ಮಡಿಕೇರಿ, ಫೆಬ್ರವರಿ 24: ಮಡಿಕೇರಿ ನಗರದ ಹೃದಯ ಭಾಗದಲ್ಲಿ ತ್ಯಾಜ್ಯ ನೀರು ಹರಿಯುವ ಚರಂಡಿ ಕಸ, ಕಡ್ಡಿ ಪ್ಲಾಸ್ಟಿಕ್ಗಳಿಂದ ತುಂಬಿ ದುರ್ವಾಸನೆ ಬೀರುತ್ತಿದ್ದರಿಂದ ಸ್ಥಳೀಯರು ಹಾಗೂ ಪ್ರವಾಸಿಗರು ಮೂಗು ಮುಚ್ಚಿಕೊಂಡು, ನಗರಸಭೆಗೆ ಹಿಡಿಶಾಪ ಹಾಕಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಮನಗಂಡು ಗ್ರೀನ್ ಸಿಟಿ ಫೋರಂ ಸಂಘಟನೆ ನಗರಸಭೆ ಗಮನ ಸೆಳೆಯುವುದರ ಮೂಲಕ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿತ್ತು. ಇದಕ್ಕೆ ಸಕಾರತ್ಮಕವಾಗಿ ಸ್ಪಂದಿಸಿದ ನಗರಸಭೆ ಚರಂಡಿ ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಸ್ವಚ್ಛಗೊಳಿಸಿದ್ದು, ಇದರಿಂದ ಜನ ನೆಮ್ಮದಿಯುಸಿರು ಬಿಡುವಂತಾಗಿದೆ.
ಕೆಎಸ್ ಆರ್ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಹರಿಯುತ್ತಿರುವ ಚರಂಡಿಗೆ ಕೆಲವರು ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೆ ಅಲ್ಲಲ್ಲಿ ನಿಂತು ದುರ್ನಾತ ಬೀರುತ್ತಿತ್ತು. ಇದೀಗ ಚರಂಡಿಯನ್ನು ಸ್ವಚ್ಛಗೊಳಿಸಿದ ಪೌರಕಾರ್ಮಿಕರು ಚರಂಡಿಯಲ್ಲಿದ್ದ ಬಾಟಲಿಗಳು ಸೇರಿದಂತೆ ಶೇಖರಣೆಗೊಂಡಿದ್ದ ತ್ಯಾಜ್ಯಗಳನ್ನು ತೆರವುಗೊಳಿಸಿದ್ದಾರೆ.
ಜೆಸಿಬಿ ಯಂತ್ರದ ಮೂಲಕ ಚರಂಡಿಯಲ್ಲಿದ್ದ ತ್ಯಾಜ್ಯಗಳನ್ನು ಹೊರ ತೆಗೆದರಲ್ಲದೆ, ಚರಂಡಿಯಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದ್ದಾರೆ. ಮುಂದೆ ಓದಿ...

ಕೈಜೋಡಿಸಬೇಕೆಂದು ಮನವಿ
ಈ ಕಾರ್ಯಕ್ಕೆ ನಗರಸಭೆ ಅಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಸದಸ್ಯ ಪ್ರಕಾಶ್ ಆಚಾರ್ಯ, ಪೌರಾಯುಕ್ತ ಬಿ.ರಮೇಶ್ ಸಕಾರತ್ಮಕವಾಗಿ ಸ್ಪಂದಿಸಿದ್ದು, ಪಟ್ಟಣದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಗ್ರೀನ್ ಸಿಟಿ ಫೋರಂ ಕಳಕಳಿ ವ್ಯಕ್ತ ಪಡಿಸುತ್ತಿರುವುದಕ್ಕೆ ಹರ್ಷ ವ್ಯಕ್ತ ಪಡಿಸಿದರಲ್ಲದೆ, ಸಂಘ- ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವಚ್ಛತೆ ಕಾಪಾಡಲು ನಗರಸಭೆಯೊಂದಿಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.

ನಗರಸಭೆ ಪ್ರಮುಖರಲ್ಲಿ ಮನವಿ
ಚರಂಡಿ ಸಮೀಪದಲ್ಲಿರುವ ವಸತಿಗೃಹ, ಹೋಟೆಲ್ಗಳು ಸೇರಿದ್ದಂತೆ ವಿವಿಧೆಡೆಯಿಂದ ತ್ಯಾಜ್ಯಗಳನ್ನು ಚರಂಡಿಗೆ ನೇರವಾಗಿ ಬಿಡುತ್ತಿರುವ ಬಗ್ಗೆ ಗಮನಹರಿಸುವಂತೆ ಗ್ರೀನ್ ಸಿಟಿ ಫೋರಂ ಪ್ರಮುಖರು ನಗರಸಭೆ ಪ್ರಮುಖರಲ್ಲಿ ಮನವಿ ಮಾಡಿದರು. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ನಗರಸಭೆ ಅಧ್ಯಕ್ಷೆ ಹಾಗೂ ಪೌರಾಯುಕ್ತರು ನೀಡಿದರು.

ಚರಂಡಿಗೆ ಹಾಕದಂತೆ ನೋಡಿಕೊಳ್ಳಿ
ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಮುಂದಾಳತ್ವದಲ್ಲಿ ಗ್ರೀನ್ ಸಿಟಿ ಫೋರಂ ಪ್ರಮುಖರು, ಚರಂಡಿ ಸಮೀಪದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ವರ್ತಕರ ಬಳಿಗೆ ತೆರಳಿ, ತ್ಯಾಜ್ಯ ಹಾಕದಂತೆ ಜತೆಗೆ ಸಾರ್ವಜನಿಕರು ಕೂಡ ತ್ಯಾಜ್ಯವನ್ನು ಚರಂಡಿಗೆ ಹಾಕದಂತೆ ನೋಡಿಕೊಳ್ಳುವಂತೆ ಮನವಿ ಮಾಡಿಕೊಂಡರು.

ಸಮಾರಂಭದಲ್ಲಿ ಭಾಗಿಯಾಗಿದ್ದವರು
ಈ ವೇಳೆ ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಪೂಳಕಂಡ ರಾಜೇಶ್, ಖಜಾಂಚಿ ಕನ್ನಂಡ ಕವಿತಾ ಬೊಳ್ಳಪ್ಪ, ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಮಾಜಿ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ನಿರ್ದೇಶಕರಾದ ಪಿ.ಕೃಷ್ಣಮೂರ್ತಿ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಿರಿಯಮಾಡ ರತನ್ ತಮ್ಮಯ್ಯ, ಮೋಂತಿ ಗಣೇಶ್, ಸವಿತಾ ಭಟ್ ಇದ್ದರು.












Click it and Unblock the Notifications