ಕೊಡಗು ಪುನಶ್ಚೇತನ: ಸರ್ಕಾರಿ ನೌಕರರಿಂದ 102 ಕೋಟಿ ನೆರವು
ಕೊಡಗು, ಆಗಸ್ಟ್ 27: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಜನರ ಸಂಕಷ್ಟಕ್ಕೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ಸರ್ಕಾರಿ ನೌಕರರು ತಮ್ಮ ಸಂಘದಿಂದ ಒಂದು ದಿನದ ವೇತನ 102ಕೋಟಿ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.
ಈ ಕುರಿತು ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕ ಅಧ್ಯಕ್ಷ ಎಚ್ಕೆ ರಾಮು ಅವರು ಮಾತನಾಡಿ, ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರಿದ್ದು, ಖಜಾನೆ ಮೂಲಕ ಒಂದು ದಿನದ ವೇತನ ಒಟ್ಟು 102 ಕೋಟಿ ರೂ ಕಡಿತವಾಗಲಿದ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವಿನ ಹಸ್ತ ನೀಡುತ್ತಾ ಬಂದಿದೆ.
ಪ್ರವಾಸಿಗರೇ ಎಚ್ಚರ! ಜಲಪ್ರಳಯದ ಪ್ರದೇಶಗಳಿಗೆ ಭೇಟಿ ನೀಡಿದರೆ ಕಾನೂನು ಕ್ರಮ!
ಈ ಹಿಂದೆ ಕಾರ್ಗಿಲ್ ಯುದ್ಧ ಪರಿಹಾರ ನಿಧಿ, ಗುಜರಾತ್ ಭೂಕಂಪ ಸೇರಿದಂತೆ ಹಲವು ಸಂದರ್ಭಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದೆ ಎಂದು ಅವರು ಸ್ಮರಿಸಿದರು.
ಪ್ರಸ್ತುತ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಲಕ್ಷಾಂತರ ಜನರು ನಿರಾಶ್ರೀತರಾಗಿದ್ದು, ಸಂಕಷ್ಟಕ್ಕೆ ಸಿಲುಕಿ ಅಪಾರ ಪ್ರಮಾಣದ ಸಾವುನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿ. ಈ ಸನ್ನಿವೇಶದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಆಗಸ್ಟ್ 20 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ತುರ್ತು ಕಾರ್ಯಕಾರಿ ಸಮಿತಿ ಸಭೆಯ ತೀರ್ಮಾನದಂತೆ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನ ಸಮಾರು 102 ಕೋಟಿ ರೂಗಳನ್ನು ಜಿಲ್ಲೆಯ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ಸಿಎಂ ಪರಿಹಾರ ನಿಧಿಗೆ ಹರಿದುಬಂದ ದೇಣಿಗೆ: ಜನತೆಗೆ ಲೆಕ್ಕಕೊಟ್ಟ ಎಚ್ಡಿಕೆ
ಈ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರು ಮಾಹಿತಿ ನೀಡಿದರು. ಜೋಡುಪಾಲ ಗ್ರಾಮದ ನಿವಾಸಿ ಹಾಗೂ ಸುಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಬಸಪ್ಪ ಅವರು ಅತಿವೃಷ್ಟಿಗೆ ಸಿಲುಕಿ ಮೃತರಾಗಿದ್ದು, ಅವರಿಗೆ ಇದೇ ಸಂದರ್ಭದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
2006 ರಿಂದ ಜಾರಿಗೆ ಬಂದಿರವ ಎನ್ಪಿಎಸ್ ರದ್ದುಪಡಿಸಿ ಹಳೇ ಪದ್ಧತಿಯವನ್ನೇ ಮುಂದುವರೆಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಯವರಲ್ಲಿ ಕೋರಲಾಗಿದೆ. ಈ ಮನವಿಗೆ ಮಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಮು ಅವರು ತಿಳಿಸಿದರು.
ರಾಜ್ಯ ಸರ್ಕಾರಿ ನೌಕಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ನಿರ್ದೇಶಕರಾದ ರಾಜಕುಮಾರ್, ಜಗದೀಶ, ಉಮೇಶ, ಗೋವಿಂದರಾಜು, ಶಿವರಾಮು, ಲಕ್ಷ್ಮಿಕಾಂತ್, ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ರವಿ ಇದ್ದರು.