ಅಗಸ್ತ್ಯನ ತೊರೆದ ಕಾವೇರಿ ಲೋಕಕಲ್ಯಾಣಕ್ಕೆ ಹೊರಟಿದ್ದೇಕೆ?

ಅನಾದಿ ಕಾಲದಿಂದಲೂ ಕರ್ನಾಟಕದ ಸಿರಿದೇವಿ... ತಮಿಳುನಾಡಿನ ಭಾಗ್ಯಲಕ್ಷ್ಮಿ... ಕೊಡಗಿನ ಕುಲದೇವಿಯಾದ ಮಾತೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಸಂಕ್ರಾಂತಿ ಮುಹೂರ್ತದಲ್ಲಿ ಅಂದರೆ ಅ.18ರ ಶುಕ್ರವಾರ ಮುಂಜಾನೆ 12 ಗಂಟೆ 59 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಹರಿದು ದರ್ಶನ ನೀಡಲಿದ್ದಾಳೆ.

ಒಂದು ವೇಳೆ ಕಾವೇರಿ ಬ್ರಹ್ಮಗಿರಿ ಬೆಟ್ಟದಾಚೆ ಧುಮುಕಿದ್ದರೆ ಕೆಲವೇ ಕೆಲವು ಕಿ.ಮೀ. ದೂರ ಹರಿದು ಅರಬ್ಬಿ ಸಮುದ್ರ ಸೇರಿ ಬಿಡುತ್ತಿದ್ದಳು. ಇದರಿಂದ ಯಾರಿಗೂ ಯಾವುದೇ ಪ್ರಯೋಜನವಾಗುತ್ತಿರಲಿಲ್ಲ. ಆದರೆ ಕಾವೇರಿ ಗುಪ್ತಗಾಮಿನಿಯಾಗಿ ಭಾಗಮಂಡಲದ ಕಡೆಗೆ ಹರಿದಿದ್ದರಿಂದಾಗಿ ಇವತ್ತು ಸುಮಾರು 802 ಕಿ.ಮೀ. ದೂರದವರೆಗೆ ರೈತರು ಸೇರಿದಂತೆ ಜನ ಸಾಮಾನ್ಯರಿಗೆ ಆಸರೆಯಾಗಿದ್ದಾಳೆ.

 ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿದ ಕಾವೇರಿ

ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿದ ಕಾವೇರಿ

ಇಷ್ಟಕ್ಕೂ ಅಗಸ್ತ್ಯಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿದ ಕಥೆಯಂತೂ ರೋಚಕವಾಗಿದೆ. ಕಾವೇರಿ ತಲಕಾವೇರಿಯಲ್ಲಿ ಹೇಗೆ ಅವತರಿಸಿದಳು ಎಂಬುವುದರ ಕುರಿತು ಸ್ಕಂದ ಪುರಾಣದಲ್ಲಿ ಕಥೆಯಿರುವುದನ್ನು ನಾವು ಕಾಣಬಹುದು. ಆ ಕಥೆ ಹೀಗಿದೆ.

ತಲಕಾವೇರಿ ಸಮೀಪದ ಬ್ರಹ್ಮಗಿರಿ ಬೆಟ್ಟದಲ್ಲಿ ಕವೇರನೆಂಬ ಮುನಿ ವಾಸವಾಗಿದ್ದನು. ಅವನಿಗೊಬ್ಬಳು ಪುತ್ರಿ ಬೇಕೆಂಬ ಅಭಿಲಾಷೆವುಂಟಾಗಿ ಬ್ರಹ್ಮನನ್ನು ಕುರಿತು ತಪಸ್ಸು ಮಾಡತೊಡಗಿದನು. ತಪಸ್ಸಿಗೆ ಮೆಚ್ಚಿದ ಬ್ರಹ್ಮ ತನ್ನ ಮಾನಸ ಪುತ್ರಿ ಲೋಪಾಮುದ್ರೆಯನ್ನು ದತ್ತು ಮಗಳಾಗಿ ನೀಡಿದನು. ಲೋಪಾಮುದ್ರೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆಯತೊಡಗಿದಳು. ಹೀಗೆ ಕವೇರ ಮುನಿಯ ಆಶ್ರಮದಲ್ಲಿ ಬೆಳೆದಿದ್ದರಿಂದ ಆಕೆ ಕಾವೇರಿಯಾದಳು.

 ಅಗಸ್ತ್ಯಮುನಿಯ ಭೇಟಿ

ಅಗಸ್ತ್ಯಮುನಿಯ ಭೇಟಿ

ಒಂದು ದಿನ ಅಗಸ್ತ್ಯ ಮುನಿಗಳು ಕವೇರನ ಆಶ್ರಮಕ್ಕೆ ಬರುತ್ತಾರೆ. ಅಲ್ಲಿ ಕಾವೇರಿಯನ್ನು ಕಂಡು ಮನಸೋತು ಆಕೆಯನ್ನು ವಿವಾಹವಾಗುವ ಇಚ್ಛೆಯನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ಕವೇರ ಮುನಿಗಳು ಒಪ್ಪಿ ತನ್ನ ಮಾನಸ ಪುತ್ರಿ ಕಾವೇರಿಯನ್ನು ವಿವಾಹ ಮಾಡಿಕೊಡಲು ಮುಂದಾಗುತ್ತಾರೆ. ಆದರೆ ವಿವಾಹವಾಗುವ ಬಯಕೆಯಿಲ್ಲದ ಕಾವೇರಿ ನನಗೆ ಜನಕಲ್ಯಾಣ ಮಾಡುವ ಅಭಿಲಾಷೆಯಿದ್ದು, ನೀವು ಸದಾ ನನ್ನೊಂದಿಗೆ ಇರಬೇಕು. ಒಂದು ವೇಳೆ ನನ್ನನ್ನು ನೀವು ಉಪೇಕ್ಷಿಸಿ ಎಲ್ಲೂ ಹೋಗಬಾರದು. ಹಾಗೊಂದು ವೇಳೆ ನನ್ನನ್ನು ಒಬ್ಬಂಟಿಯಾಗಿ ಬಿಟ್ಟು ಹೋದರೆ ತಾನು ನದಿಯಾಗಿ ಹರಿಯುವುದಾಗಿ ಹೇಳುತ್ತಾಳೆ. ಕಾವೇರಿಯ ಷರತ್ತಿಗೆ ಒಪ್ಪಿದ ಅಗಸ್ತ್ಯ ಮುನಿಗಳು ಆಕೆಯನ್ನು ವಿವಾಹವಾಗಿ ತನ್ನ ಆಶ್ರಮಕ್ಕೆ ಕರೆದೊಯ್ಯುತ್ತಾರೆ.

 ಗುಪ್ತಗಾಮಿನಿಯಾಗಿ ಭಾಗಮಂಡಲ ಸೇರಿದ ಕಾವೇರಿ

ಗುಪ್ತಗಾಮಿನಿಯಾಗಿ ಭಾಗಮಂಡಲ ಸೇರಿದ ಕಾವೇರಿ

ಕಾವೇರಿಗೆ ಕೊಟ್ಟ ಮಾತಿನಂತೆ ಅಗಸ್ತ್ಯ ಮುನಿಗಳು ತಮ್ಮ ಆಶ್ರಮದಲ್ಲಿ ಕಾವೇರಿಯೊಂದಿಗೆ ಆನಂದದಿಂದ ದಿನ ಕಳೆಯುತ್ತಿರುತ್ತಾರೆ. ಒಂದು ದಿನ ಅಗಸ್ತ್ಯ ಮುನಿಗಳು ತಾವಿದ್ದ ಆಶ್ರಮದಿಂದ ಬೆಟ್ಟದಾಚೆಗಿರುವ ಕನ್ನಿಕೆ ನದಿಯಲ್ಲಿ ಸ್ನಾನ ಮಾಡಲೆಂದು ಹೊರಡುತ್ತಾರೆ. ಕಾವೇರಿ ನಿದ್ದೆಯಲ್ಲಿರುವುದರಿಂದ ಅವಳು ಎಚ್ಚರವಾಗುವ ವೇಳೆಗೆ ಹಿಂತಿರುಗಿ ಬರಬಹುದೆಂದುಕೊಳ್ಳುತ್ತಾರೆ. ಆದರೆ ಅಗಸ್ತ್ಯ ಮುನಿಗಳು ಅತ್ತ ಸ್ನಾನಕ್ಕೆ ತೆರಳುತ್ತಿದ್ದಂತೆಯೇ ಇತ್ತ ನಿದ್ದೆಯಲ್ಲಿದ್ದ ಕಾವೇರಿಗೆ ಎಚ್ಚರವಾಗುತ್ತದೆ. ಸನಿಹದಲ್ಲಿ ಅಗಸ್ತ್ಯಮುನಿಗಳು ಇಲ್ಲದನ್ನು ಕಂಡು ಆಕೆಗೆ ಪತಿಯ ಮೇಲೆ ಕೋಪಬರುತ್ತದೆ. ಅಲ್ಲದೆ ಷರತ್ತು ಮೀರಿದ ಪತಿಯಿಂದ ದೂರವಾಗಿ ನದಿಯಾಗಿ ಹರಿದು ಲೋಕಕಲ್ಯಾಣ ಮಾಡಲು ಇದು ಸೂಕ್ತ ಸಮಯವೆಂದುಕೊಂಡು ಅಲ್ಲೇ ಇದ್ದ ಕೊಳಕ್ಕೆ ಇಳಿದು ಅಗಸ್ತ್ಯ ಮುನಿಗಳಿಗೆ ತಿಳಿಯದಂತೆ ಅಲ್ಲಿಂದ ಗುಪ್ತಗಾಮಿನಿಯಾಗಿ ಹರಿದು ಭಾಗಮಂಡಲ ಸೇರುತ್ತಾಳೆ. ಅಲ್ಲಿ ಕನ್ನಿಕೆ, ಸುಜ್ಯೋತಿ ನದಿಗಳೊಂದಿಗೆ ಸಂಗಮವಾಗಿ ಮುಂದೆ ಹರಿಯುತ್ತಾಳೆ. ಹೀಗೆ ಲೋಕಕಲ್ಯಾಣಕ್ಕೆ ಹೊರಟ ಕಾವೇರಿ ಪ್ರತಿ ವರ್ಷ ತುಲಾ ಸಂಕ್ರಮಣದಂದು ಭಕ್ತರಿಗೆ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಜಲರೂಪಿಣಿಯಾಗಿ ದರ್ಶನ ನೀಡುತ್ತಾ ಬಂದಿದ್ದಾಳೆ.

 ಭಗಂಡೇಶ್ವರನಿಗೂ ಪೂಜೆ

ಭಗಂಡೇಶ್ವರನಿಗೂ ಪೂಜೆ

ತಲಕಾವೇರಿಯಲ್ಲಿ ಹುಟ್ಟುವ ಕಾವೇರಿ ಭಾಗಮಂಡಲ, ಬಲಮುರಿ, ಗುಹ್ಯ, ಕಣಿವೆ ಮೂಲಕ ಕೊಡಗಿನಿಂದ ಹೊರಹರಿದು ಬಳಿಕ ಕರ್ನಾಟಕದಲ್ಲಿ ಸುಮಾರು 381 ಕಿ.ಮೀ. ಹರಿದು ಆ ನಂತರ ತಮಿಳುನಾಡು, ಪಾಂಡಿಚೇರಿ ಮೂಲಕ 802 ಕಿ.ಮೀ. ಕ್ರಮಿಸಿ ಕಾವೇರಿ ಪಟ್ಟಣಂನಲ್ಲಿ ಬಂಗಾಳಕೊಲ್ಲಿಯನ್ನು ಸೇರುವುದರೊಂದಿಗೆ ತಾನು ಹರಿದಲೆಲ್ಲಾ ಪವಿತ್ರ ಕ್ಷೇತ್ರಗಳನ್ನು ಸೃಷ್ಟಿಸಿ, ಲಕ್ಷಾಂತರ ಮಂದಿಯ ಪಾಲಿಗೆ ಅನ್ನದಾತೆಯಾಗಿದ್ದಾಳೆ.

ಇನ್ನು ತಲಕಾವೇರಿಗೆ ಹೋಗುವವರು ಭಾಗಮಂಡಲಕ್ಕೆ ತೆರಳಿ ಭಗಂಡೇಶ್ವರನಿಗೆ ಪೂಜೆ ಮಾಡಿ ಬಳಿಕ ತಲಕಾವೇರಿಗೆ ತೆರಳುತ್ತಾರೆ. ಭಾಗಮಂಡಲವು ತ್ರಿವೇಣಿ ಸಂಗಮವಾಗಿದ್ದು, ಇಲ್ಲಿ ಭಗಂಡೇಶ್ವರ, ಶಿವ, ಸುಬ್ರಹ್ಮಣ್ಯ, ವಿಷ್ಣು, ಗಣಪತಿ ದೇವಾಲಯಗಳಿವೆ. ಭಗಂಡ ಮಹರ್ಷಿ ತಪಸ್ಸು ಮಾಡಿದ ಸ್ಥಳವಾದುದರಿಂದ ಭಾಗಮಂಡಲ ಎಂಬ ಹೆಸರು ಬಂತು ಎನ್ನಲಾಗಿದೆ. ಭಾಗಮಂಡಲವನ್ನು ದಕ್ಷಿಣದ ಕಾಶಿ ಎಂಬುವುದಾಗಿಯೂ ಕರೆಯುತ್ತಾರೆ.

 ಕೊಡಗಿಗೆ ಕಾವೇರಿ ಸಂಕ್ರಮಣ

ಕೊಡಗಿಗೆ ಕಾವೇರಿ ಸಂಕ್ರಮಣ

ಕಾವೇರಿ ತೀರ್ಥೋದ್ಭವದ ಸಮಯದಲ್ಲಿ ಭಾಗಮಂಡಲ ಜನಸಂದಣಿಯಿಂದ ಕೂಡಿರುತ್ತದೆ. ಈ ಸಂದರ್ಭ ಹಿರಿಯರಿಗೆ ಪಿಂಡ ಪ್ರದಾನ ಮಾಡುವ ಕಾರ್ಯವೂ ನಡೆಯುತ್ತದೆ. ತುಲಾಸಂಕ್ರಮಣದ ಒಂದು ತಿಂಗಳ ಕಾಲ ಭಗಂಡೇಶ್ವರ ದೇವಾಲಯದ ಕೊಠಡಿಯೊಂದರಲ್ಲಿ ನಂದಾದೀಪ ಉರಿಸಲಾಗುತ್ತದೆ. ಭಕ್ತರು ತಾವು ತರುವ ತುಪ್ಪವನ್ನು ಈ ದೀಪಕ್ಕೆ ಹಾಕುತ್ತಾರೆ. ಹಾಗೆಯೇ ಅಕ್ಕಿಯನ್ನು ಕೂಡ ಇಲ್ಲಿನ ಅಕ್ಷಯ ಭಂಡಾರಕ್ಕೆ ಹಾಕಿ ತಮ್ಮ ಮನೆಯ ಕಣಜದಲ್ಲಿ ಸದಾ ಭತ್ತ ತುಂಬಿರುವಂತೆ ಬೇಡಿಕೊಳ್ಳುತ್ತಾರೆ.

ಕಾವೇರಿಯ ಉಗಮಸ್ಥಾನ ತಲಕಾವೇರಿಯು ಮಡಿಕೇರಿಯಿಂದ ನಲವತ್ತೆರಡು ಕಿ.ಮೀ. ದೂರದ ಬ್ರಹ್ಮಗಿರಿಯ ಬೆಟ್ಟಶ್ರೇಣಿಯಲ್ಲಿದ್ದು, ಸಮುದ್ರಮಟ್ಟದಿಂದ ಸುಮಾರು ಐದು ಸಾವಿರ ಅಡಿ ಎತ್ತರದಲ್ಲಿದೆ. ಕೊಡಗಿನಲ್ಲಿ ಆಚರಿಸಲ್ಪಡುವ ಹಬ್ಬಗಳ ಪೈಕಿ ಕಾವೇರಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಒಂದಾಗಿದೆ. ಇಲ್ಲಿನವರು ಇದನ್ನು ಕಾವೇರಿ ಸಂಕ್ರಮಣವೆಂದು ಕರೆಯುತ್ತಾರೆ. ಅಂದು ಗದ್ದೆಗೆ ಕಾಡಿನಲ್ಲಿ ಸಿಗುವ ಬೆತ್ತು (ಬೆಚ್ಚು) ನೆಟ್ಟು ದೋಸೆಯಿಟ್ಟು ಭೂಮಿ ತಾಯಿಯನ್ನು ಪೂಜಿಸುವ ಸಂಪ್ರದಾಯ ಇಲ್ಲಿ ಕಂಡು ಬರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+