ತಲಕಾವೇರಿ ತೀರ್ಥೋದ್ಭವಕ್ಕೆ ಭಕ್ತರ ಪ್ರವೇಶ ನಿರ್ಬಂಧ ತೆರವು; ಆದರೆ...
ಮಡಿಕೇರಿ, ಅಕ್ಟೋಬರ್ 6: "ತಲಕಾವೇರಿಗೆ ಭಕ್ತರ ಪ್ರವೇಶ ನಿರ್ಬಂಧಿಸಿರುವ ಕುರಿತು ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಕಾರಣ ತೀರ್ಥೋದ್ಭವಕ್ಕೆ ಭಕ್ತರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ," ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಪವಿತ್ರ ತೀರ್ಥೋದ್ಬವ ಸಂಬಂಧ ಸಚಿವರು ಮಾಹಿತಿ ನೀಡಿದರು.
"ಕಾವೇರಿ ತುಲಾ ಸಂಕ್ರಮಣ ಜಾತ್ರಾ ದಿನದಂದು ಕೋವಿಡ್-19ನಿಂದಾಗಿ ಕೆಲವು ನಿರ್ಬಂಧಗಳನ್ನು ಹೇರಲಾಗಿತ್ತು. ಕಾವೇರಿ ತೀರ್ಥೋದ್ಭವದ ವೇಳೆ ಪುಣ್ಯ ಸ್ನಾನಕ್ಕೆ ಅವಕಾಶವಿರುವುದಿಲ್ಲ. ಭಕ್ತರು ಬಂದು ತೀರ್ಥ ತೆಗೆದುಕೊಂಡು ಹೋಗಬಹುದು. ಭಾಗಮಂಡಲದ ತ್ರಿವೇಣಿಸಂಗಮದಲ್ಲಿ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ," ಎಂದು ಅವರು ತಿಳಿಸಿದರು.

"ಅಕ್ಟೋಬರ್ 17ರಂದು ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವವಾಗಲಿದೆ. ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡಾ 0.36 ರಷ್ಟಿದೆ. ಹೀಗಾಗಿ ತಲಕಾವೇರಿಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಕೋವಿಡ್ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ," ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
"ಭಕ್ತರಿಗೆ ಪ್ರವೇಶ ಕಲ್ಪಿಸಿ ಭಕ್ತರ ಭಾವನೆಗಳನ್ನು ಗೌರವಿಸಿದ್ದೇವೆ. ತಲಕಾವೇರಿಗೆ ಕಾಲ್ನಡಿಗೆಯಲ್ಲಿ ಭಕ್ತರು ತೆರಳಬೇಕಾಗಿಲ್ಲ. ತಲಕಾವೇರಿಗೆ ವಾಹನಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕಾಗಿಲ್ಲ. ಆದರೆ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ," ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.
"ಕೊಡಗು ಜಿಲ್ಲೆಯ ಜನತೆ ತಾಯಿ ಕಾವೇರಿ ಮಾತೆಯನ್ನು ಭಾವನಾತ್ಮಕವಾಗಿ ಪೂಜಿಸುತ್ತಾರೆ. ಆ ದಿಸೆಯಲ್ಲಿ ಜನರ ಭಾವನೆಗೆ ಸ್ಪಂದಿಸಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಭಕ್ತಾಧಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೋವಿಡ್- 19 ನಿಯಮಗಳನ್ನು ಪಾಲಿಸಿ ಪವಿತ್ರ ತುಲಾ ಸಂಕ್ರಮಣ ತೀರ್ಥೋಧ್ಬವಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ," ಎಂದರು.

ಶಾಸಕಾರದ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಕಳೆದ ಸಭೆಯಲ್ಲಿ ಕೋವಿಡ್ ಹಿನ್ನಲೆ ಆರೋಗ್ಯದ ಹಿತದೃಷ್ಟಿಯಿಂದ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು. ಆದರೆ ಕೋವಿಡ್- 19 ಪ್ರಕರಣಗಳು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಹಿನ್ನಲೆ ಭಕ್ತಾದಿಗಳು ತಲಕಾವೇರಿಗೆ ತೆರಳಲು ಅವಕಾಶ ಮಾಡಲಾಗಿದೆ ಎಂದು ಸಚಿವರು ಹೇಳಿದರು.
ಶಾಸಕಾರದ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆ ಸಮಿತಿಯ ಅಧ್ಯಕ್ಷರಾದ ರವಿಕುಶಾಲಪ್ಪ, ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅದ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ, ಜಿ.ಪಂ. ಸಿಇಒ ಭನ್ವರ್ ಸಿಂಗ್ ಮೀನಾ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ ಇತರರು ಇದ್ದರು.












Click it and Unblock the Notifications