ತೌಕ್ತೆ ಚಂಡಮಾರುತ: ಕೊಡಗಿನಲ್ಲಿ ಗಾಳಿ ಸಹಿತ ಮಳೆ, ಗುಡ್ಡ ಕುಸಿತದ ಆತಂಕ
ಮಡಿಕೇರಿ, ಮೇ 15: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಗಾಳಿ ಸಹಿತ ಮಳೆ ಆರಂಭವಾಗಿದೆ.
ತೌಕ್ತೆ ಚಂಡಮಾರುತದ ಪರಿಣಾಮದಿಂದ ಕೊಡಗು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಕೊಡಗಿನಲ್ಲೂ ಗಾಳಿ ಸಹಿತ ಮಳೆ ಆಗುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆರೆಂಜ್ ಅಲರ್ಟ್ ಘೋಷಿಸಿತ್ತಲ್ಲದೆ, ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿತ್ತು. ಕೆಲವೆಡೆಗಳಲ್ಲಿ ಜನರು ಕೂಡ ಅಪಾಯದ ಸ್ಥಳಗಳನ್ನು ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ.
ಕಳೆದ ಮೂರು ವರ್ಷಗಳಿಂದ ಪ್ರತೀ ವರ್ಷವೂ ಆಗಸ್ಟ್ ತಿಂಗಳಿನಲ್ಲಿ ಕಡಿದಾದ ಗುಡ್ಡ ಪ್ರದೇಶಗಳಲ್ಲಿ ಭೂ ಕುಸಿತ ಸಂಭವಿಸಿ ನೂರಾರು ಜನರು ಮನೆ ಮಠ ಕಳೆದುಕೊಂಡಿದ್ದರು. ಕಳೆದ ವರ್ಷದ ಅನಾಹುತದಲ್ಲಿ ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿದು ಐವರು ಭೂಸಮಾಧಿ ಆಗಿದ್ದರು.
ಗಾಳಿ ಸಹಿತ ಮಳೆಯಿಂದಾಗಿ ಬೆಟ್ಟಗುಡ್ಡಗಳಲ್ಲಿ, ನದಿಪಾತ್ರದಲ್ಲಿ ವಾಸ ಮಾಡುವ ಜನರಿಗೆ ವರುಣಾರ್ಭಟದಿಂದ ಭೀತಿ ಹೆಚ್ಚಾಗಿದೆ. ಮಡಿಕೇರಿ ನಗರದ ಇಂದಿರಾನಗರ, ಚಾಮುಂಡೇಶ್ವರಿ ನಗರ ಹಾಗೂ ಮಂಗಳಾದೇವಿ ನಗರ ನಿವಾಸಿಗಳಿಗೆ ನಗರಸಭೆ ನೋಟಿಸ್ ಜಾರಿ ಮಾಡಿದ್ದರೂ ಕೆಲವು ಜನರು ಅಲ್ಲೇ ವಾಸಿಸುತ್ತಿದ್ದಾರೆ. ಈಗಾಗಲೇ ಮೂರು ವರ್ಷಗಳಿಂದ ಕೊಡಗಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ನಲುಗಿ ಹೋಗಿರುವ ಜನ ಬಿರುಗಾಳಿ ಸಹಿತ ಮಳೆ ಬರುತ್ತಿರುವುದರಿಂದ ಆತಂಕಗೊಳ್ಳುವಂತಾಗಿದೆ.
ಕೊಡಗು ಜಿಲ್ಲೆಯ ವಿರಾಜಪೇಟೆ ನಗರದ ಅಯ್ಯಪ್ಪ ಬೆಟ್ಟ, ನೆಹರು ನಗರ, ಅರಸುನಗರ ಹಾಗೂ ಮಲೇತಿರಿಕೆ ಬೆಟ್ಟದ ನಿವಾಸಿಗಳಿಗೆ ಪಟ್ಟಣ ಪಂಚಾಯಿತಿಯಿಂದಲೂ ನೋಟಿಸ್ ನೀಡಲಾಗಿತ್ತು. ಕಳೆದ ಮೂರು ವರ್ಷದ ಮಳೆಗಾಲದಲ್ಲಿ ಅರ್ಧ ಬಿದ್ದು ಅಪಾಯದಂಚಿನಲ್ಲಿರುವ ಮನೆಗಳಲ್ಲೇ ಜನರು ಬದುಕು ಕಟ್ಟಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಕಾವೇರಿ ನದಿ ತಟದಲ್ಲಿ ವಾಸಿಸುತ್ತಿರುವ ಕುಟುಂಬಗಳು ಆತಂಕದಲ್ಲಿವೆ.
ಕೊಡಗು ಜಿಲ್ಲೆಯಲ್ಲೇ ಇರುವ ಉಸ್ತುವಾರಿ ಸಚಿವ ವಿ.ಸೋಮಣ್ಣ ಇಂದು ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆ ಮತ್ತು ಕುಟ್ಟ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Recommended Video