ಅಯೋಧ್ಯೆ ತೀರ್ಪಿನ ಹಿನ್ನೆಲೆ ಕೊಡಗು ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಕಣ್ಗಾವಲು
ಮಡಿಕೇರಿ, ನವೆಂಬರ್ 9: ಅಯೋಧ್ಯೆ ವಿವಾದದ ತೀರ್ಪು ಹೊರಬರಲಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಭದ್ರತಾ ಸಿದ್ಧತೆ ಮಾಡಿಕೊಂಡಿದ್ದು, ಕೊಡಗು ಪ್ರವೇಶದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಸುಮನ ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ, ಕೇರಳ ರಾಜ್ಯದ ಕಣ್ಣೂರು, ವಯನಾಡು, ಕಾಸರಗೂಡು ಹಾಗೂ ಹಾಸನ, ಮೈಸೂರು ಜಿಲ್ಲೆಗಳ ಗಡಿಭಾಗಗಳಿಗೆ ಹೊಂದಿಕೊಂಡಂತೆ 14 ಚೆಕ್ ಪೋಸ್ಟ್ ಗಳನ್ನು ತೆರೆದಿದ್ದು, ವಾಹನ ಗಸ್ತು, ತಪಾಸಣೆ ಹೆಚ್ಚುವರಿ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ತಿಳಿಸಿದರು. ಈಗಾಗಲೇ ಸ್ಥಳೀಯ ಠಾಣಾ ಮಟ್ಟದಲ್ಲಿ ಸಾರ್ವಜನಿಕ ಸಭೆ ನಡೆಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಲಾಗಿದೆ.
ಅಯೋಧ್ಯೆ ತೀರ್ಪು ಹಿನ್ನೆಲೆ: ಹಲವೆಡೆ ಇಂಟರ್ನೆಟ್ ಸೇವೆ ಸ್ಥಗಿತ
"ಟಿಪ್ಪು ಜಯಂತಿ ಮತ್ತು ಅಯೋಧ್ಯೆ ತೀರ್ಪಿನ ಕುರಿತು ಈಗಾಗಲೇ ಎರಡು ಕೋಮುಗಳ ಶಾಂತಿ ಸಭೆ ನಡೆಸಲಾಗಿದೆ. ಖಾಸಗಿಯಾಗಿ ಟಿಪ್ಪು ಜಯಂತಿ ಆಚರಿಸಲು ಮುಂದಾಗುವುದಿಲ್ಲ ಎಂದು ಕೆಲವರು ಭರವಸೆ ನೀಡಿದ್ದಾರೆ. ಅದರಂತೆ ಅಯೋಧ್ಯೆ ತೀರ್ಪು ಕುರಿತು ವಿಜಯೋತ್ಸವ ಮತ್ತು ಕರಾಳ ದಿನವನ್ನೂ ಆಚರಿಸುವುದಿಲ್ಲ ಎಂದು ಉಭಯ ಕಡೆಯವರು ತಿಳಿಸಿದ್ದಾರೆ. ಹೀಗಿದ್ದರೂ ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ" ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಡಲಾಗಿದ್ದು, ಯಾರೂ ಪ್ರಚೋದನೆಗೆ ಒಳಗಾಗಬಾರದು ಮತ್ತು ಯಾವುದೇ ರೀತಿಯ ಕೋಮುಭಾವನೆ ಬಿತ್ತುವ ಪೋಸ್ಟ್ ಗಳನ್ನು ಹಾಕಬಾರದೆಂದು ಮನವಿ ಮಾಡಿದ್ದಾರೆ. ಈ ಹಿಂದೆ ಕೋಮು ಗಲಭೆ ಪ್ರಕರಣದಲ್ಲಿ ಶಾಮೀಲಾದವರು ಮತ್ತು ಗಲಭೆ ನಡೆಸುವ ಸಾಧ್ಯತೆಯಿರುವವರನ್ನು ಕೂಡ ಠಾಣೆಗಳಿಗೆ ಕರೆಯಿಸಿ ಎಚ್ಚರಿಕೆ ನೀಡಿ, ಮುಚ್ಚಳಿಕೆ ಪಡೆಯಲಾಗಿದೆ. ಜಿಲ್ಲೆಯಾದ್ಯಂತ ಬಂದೋಬಸ್ತ್ ಗಾಗಿ ಒಟ್ಟು 400 ಪೊಲೀಸ್ ಸಿಬ್ಬಂದಿ ಬಳಸಿಕೊಳ್ಳಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ವಿಡಿಯೋಗ್ರಾಫರ್ ಗಳನ್ನು ಕೂಡ ಬಳಸಿಕೊಳ್ಳಲಾಗುತ್ತಿದೆ. ಕೊಡಗು ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಜಿಲ್ಲೆಯ ಜನರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.