'ಹಿಂದೂಗಳ ಮೇಲೆ ದೌರ್ಜನ್ಯ ಮಾಡಿದ ಟಿಪ್ಪುವಿನ ಜಯಂತಿ ಬೇಡ'
ಸೋಮವಾರಪೇಟೆ, ಅಕ್ಟೋಬರ್ 19: ಭಾರೀ ವಿರೋಧಕ್ಕೆ ಕಾರಣವಾಗಿರುವ ಟಿಪ್ಪು ಜಯಂತಿ ಆಚರಣೆಯನ್ನು ಸರಕಾರ ಕೈ ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಕಿರಿಕೊಡ್ಲಿ ಮಠದ ಆವರಣದಲ್ಲಿ ಆಯೋಜಿಸಿದ್ದ ವೀರಶೈವ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿ, ವಿವಾದಿತ ಟಿಪ್ಪು ಜಯಂತಿಯನ್ನು ಸರಕಾರಿ ಕಾರ್ಯಕ್ರಮವಾಗಿ ಆಚರಿಸುವ ಮೂಲಕ ಕಾಂಗ್ರೆಸ್ ಸಮಾಜದಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿದೆ. ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದ ಟಿಪ್ಪುವಿನ ಜಯಂತಿಯನ್ನು ಆಚರಿಸುವ ಮೂಲಕ ಒಂದು ವರ್ಗದ ತುಷ್ಟೀಕರಣಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.
ಸಮಾಜದಲ್ಲಿ ಕೋಮು ಸಾಮರಸ್ಯ ಹಾಳುಗೆಡಹುವ ಇಂತಹ ಆಚರಣೆಗಳು ರಾಜ್ಯದಲ್ಲಿ ಬೇಕಾಗಿಲ್ಲ. ಇದರಿಂದ ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂದು ಹೇಳಿದರು.[ಇನ್ನು ಮುಂದೆ ಪ್ರತಿ ವರ್ಷ ಟಿಪ್ಪು ಜಯಂತಿ, ನವೆಂಬರ್ 10 ದಿನ ನಿಗದಿ]
ಕಳೆದ ವರ್ಷ ವಿರೋಧದ ನಡುವೆ ಟಿಪ್ಪು ಜಯಂತಿ ಆಚರಿಸಿ ಕೊಡಗು ಜಿಲ್ಲೆಯಲ್ಲಿ ಸಾವು-ನೋವುಗಳಾಗಿವೆ. ಟಿಪ್ಪು ಜಯಂತಿಯನ್ನು ಸರಕಾರ ಕೈಬಿಡದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಬೆಂಗಳೂರಿನಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ನಡೆದಿರುವುದು ಖಂಡನೀಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂಬದು ಇಂತಹ ಘಟನೆಗಳಿಂದ ವೇದ್ಯವಾಗುತ್ತಿದೆ. ಇಂತಹ ವಿದ್ರೋಹಿ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಹತ್ಯೆ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅ.19ರಂದು ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಪಕ್ಷದ ವತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.[ಟಿಪ್ಪು ಜಯಂತಿ ರದ್ದತಿಗೆ ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಆಗ್ರಹ]
ಮಾಜಿ ಸಚಿವ ಶ್ರೀನಿವಾಸ್ಪ್ರಸಾದ್ ಅವರು ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರ್ಪಡೆಗೊಳ್ಳುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಸಂಬಂಧ ಚರ್ಚೆಗಳು ನಡೆಯುತ್ತಿವೆ. ನಾನು ಈಗಾಗಲೇ ಎರಡು ಬಾರಿ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಶೀಘ್ರದಲ್ಲೇ ಅಂತಿಮ ತೀರ್ಮಾನ ಹೊರಬರಲಿದೆ ಎಂದರು.
ರಾಜ್ಯಾದ್ಯಂತ ರೈತರು ವಿವಿಧ ಸಹಕಾರ ಸಂಘ ಹಾಗೂ ಬ್ಯಾಂಕ್ಗಳಲ್ಲಿ ಪಡೆದಿರುವ ಕೃಷಿ ಸಾಲವನ್ನು ಬರದ ಹಿನ್ನೆಲೆಯಲ್ಲಿ ಸಂಪೂರ್ಣ ಮನ್ನಾ ಮಾಡಲು ಸರಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.[ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿಸಿ ಕೊಡವರ ಅರ್ಜಿ]
ಸಮಾನ ನಾಗರಿಕ ಸಂಹಿತೆ ಜಾರಿ ಸಂಬಂಧಿಸಿದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ಕಾನೂನು ದೇಶಕ್ಕೆ ಅವಶ್ಯವಿದೆ. ಈ ಕಾನೂನಿನಿಂದ ಮಹಿಳೆಯರಿಗೆ ಹೆಚ್ಚಿನ ನೆರವು, ಸಾಮಾಜಿಕ ರಕ್ಷಣೆ ದೊರಕಲಿದೆ. ಇದು ಇನ್ನೂ ಚರ್ಚಾ ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಸಂಸತ್ ಚರ್ಚೆಗೆ ಬರಲಿದೆ. ಇಂತಹ ಸಂಹಿತೆ ಜಾರಿಯಿಂದ ದೇಶಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು.