ಕೊಡಗಿನ ಮಕ್ಕಿಶಾಸ್ತಾವುನಲ್ಲಿ ಭೂತಗಳ ಆರ್ಭಟ!

ಮಡಿಕೇರಿ, ಡಿಸೆಂಬರ್ 20: ಕೊಡಗಿನ ನಾಪೋಕ್ಲು ಬಳಿಯಲ್ಲಿರುವ ನಿಸರ್ಗ ನಿರ್ಮಿತ ಮಕ್ಕಿ ಶಾಸ್ತಾವು ದೇಗುಲದಲ್ಲಿ ಇತ್ತೀಚೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಹಬ್ಬ ನಡೆಯಿತು, ಹಬ್ಬದ ವೇಳೆ ಆರ್ಭಟಿಸಿದ ಭೂತಗಳು ನಿಗಿನಿಗಿ ಕೆಂಡದ ಮೇಲೆ ಹಾರಿ ನೋಡುಗರ ಮೈನವಿರೇಳಿಸಿದವು.

ಸುತ್ತಮುತ್ತಲ ಗ್ರಾಮಗಳ ಜನರು ನೆರೆದಿದ್ದ ಈ ಹಬ್ಬದಲ್ಲಿ ದೀಪಾರಾಧನೆ (ಅಂದಿಬೊಳಕ್), ಮಹಾಪೂಜೆ, ತೋತ ಕೋಲ, ಕರಿಬಾಳೆ, ಕುಟ್ಟಿಚಾತ ಮತ್ತು ನುಚ್ಚುಟ್ಟೆ ಮತ್ತಿತರ ಕೋಲಗಳನ್ನು ನಡೆಸಲಾಯಿತು. ಈ ದೇಗುಲದಲ್ಲಿ ವರ್ಷಕ್ಕೆ ಎರಡು ಬಾರಿ ಹಬ್ಬ ನಡೆಯುತ್ತದೆ. ಇನ್ನು ಇಲ್ಲಿ ನಡೆಯುವ ಹಬ್ಬ ಮತ್ತು ದೇವಾಲಯಗಳ ಬಗ್ಗೆ ನೋಡಿದರೆ ಹತ್ತು ಹಲವು ವಿಶೇಷತೆಗಳು ಕಾಣಸಿಗುತ್ತವೆ.

ಈ ದೇವಾಲಯ ಮೇಲ್ನೋಟಕ್ಕೆ ದೇವಾಲಯವೇ ಅಲ್ಲ. ಏಕೆಂದರೆ ದೇವಾಲಯ ಎನ್ನಲು ಯಾವುದೇ ಗುಡಿಗೋಪುರಗಳು ಕಾಣುವುದಿಲ್ಲ. ಒಂದು ವೇಳೆ ಇಲ್ಲಿಗೆ ಬಂದಿದ್ದೇ ಆದರೆ ಸಮತಟ್ಟಾದ ಜಾಗದಲ್ಲಿ ಸುಮಾರು ಐದು ಅಡಿ ಎತ್ತರದ ವೃತ್ತಾಕಾರದ ಕಟ್ಟೆಯೊಂದು ಕಾಣುತ್ತದೆ. ಈ ಕಟ್ಟೆಯ ನಡುವೆ ತ್ರಿಶೂಲಧಾರಿ ಶಾಸ್ತಾವು ದೇವರ ಮೂರ್ತಿಯಿದೆ. ಅಲ್ಲದೆ ದೇವರಿಗೆ ಆಶ್ರಯವಾಗಿ ಒಂದು ಹಲಸಿನ ಮರವಿದ್ದು ಸುತ್ತಲೂ ಹರಕೆಯಾಗಿ ಅರ್ಪಿಸಿದ ಮಣ್ಣಿನ ನಾಯಿಗಳಿವೆ. ಇದನ್ನು ಹೊರತು ಪಡಿಸಿದರೆ ಮತ್ತೇನೂ ಇಲ್ಲ.

Traditional fest in Makki Shastavu temple in Kodagu

ದೇವಾಲಯದ ಹಲಸಿನ ಮರದಲ್ಲೊಂದು ಕಬ್ಬಿಣದ ಸರಪಳಿ ಸಿಕ್ಕಿಹಾಕಿಕೊಂಡಿದೆ. ಇದು ಕಥೆಯೊಂದನ್ನು ತೆರೆದಿಡುತ್ತದೆ. ಹಿಂದೆ ವರ್ಷಂಪ್ರತಿ ನಡೆಯುವ ಹಬ್ಬದ ಸಂದರ್ಭ ತಿರುವಳ ಬರುತ್ತಿದ್ದ ವ್ಯಕ್ತಿಯೊಬ್ಬನನ್ನು ಯಾವುದೋ ಕಾರಣಕ್ಕೆ ಬಂಧಿಸಲಾಗಿತ್ತಂತೆ. ಆದರೆ ಹಬ್ಬದ ಸಂದರ್ಭ ಮಂತ್ರಘೋಷ ಮೇಳೈಸುತ್ತಿದ್ದಂತೆಯೇ ತಿರುವಳನ ಮೇಲೆ ದೇವರು ಅವಾಹನೆಯಾಗಿ ಬಂಧನದಿಂದ ತಪ್ಪಿಸಿಕೊಂಡು ಬಂದು ದೇವರ ಸನ್ನಿಧಿಯಲ್ಲಿ ಕೈ ಕೊಡವಿದಾಗ ಕೈಯ್ಯಲ್ಲಿದ್ದ ಖೋಳ ತುಂಡಾಗಿ ಹಲಸಿನ ಮರದಲ್ಲಿ ಸಿಲುಕಿತು ಎಂಬ ಪ್ರತೀತಿ ಇದೆ.

ಇಲ್ಲಿ ಹರಸಿಕೊಂಡರೆ ಇಷ್ಟಾರ್ಥಗಳು ನೆರವೇರುತ್ತವೆ ಎಂಬುವುದಕ್ಕೆ ಇಲ್ಲಿ ಪ್ರತಿವರ್ಷವೂ ಹಬ್ಬದ ಸಂದರ್ಭ ಹರಕೆಯ ರೂಪದಲ್ಲಿ ಹಾಕಲಾಗುವ ಮಣ್ಣಿನ ನಾಯಿಗಳೇ ಸಾಕ್ಷಿಯಾಗಿವೆ.

ಡಿಸೆಂಬರ್ ನಲ್ಲಿ ನಡೆಯುವ ಹಬ್ಬವನ್ನು ಇಲ್ಲಿನವರು ಚಿಕ್ಕ ಹಬ್ಬ ಎಂದು ಕರೆಯುತ್ತಾರೆ. ಮೂರು ದಿನಗಳ ಕಾಲದ ಹಬ್ಬದ ಆಚರಣೆಯಲ್ಲಿ ಎತ್ತು ಹೇರಾಟ, ದೀಪಾರಾಧನೆ, ಅಜ್ಜಪ್ಪ ಹಾಗೂ ವಿಷ್ಣುಮೂರ್ತಿ ಕೋಲಗಳು, ಮೇಲೇರಿ ಮುಂತಾದ ಸಾಂಪ್ರದಾಯಿಕ ಪೂಜೆಗಳು ನಡೆಯುತ್ತವೆ.

Traditional fest in Makki Shastavu temple in Kodagu

ಹಬ್ಬದಲ್ಲಿ ಹೆಚ್ಚು ಗಮನಸೆಳೆಯುವುದೆಂದರೆ ಅಜ್ಜಪ್ಪ ಹಾಗೂ ವಿಷ್ಣುಮೂರ್ತಿ ಕೋಲಗಳು. ತಿರುವಳನಿಗೆ ತೆಂಗಿನಗರಿಗಳಿಂದ ಮಾಡಿದ ಅಲಂಕೃತ ಪೋಷಾಕನ್ನು ಧರಿಸಲಾಗುತ್ತದೆ. ಬಳಿಕ ಚಂಡೆ ವಾದ್ಯ ಮೊಳಗುತ್ತಿದ್ದಂತೆಯೇ ತಿರುವಳನ ಮೇಲೆ ದೇವರು ಅವಾಹನೆಗೊಂಡು ನರ್ತಿಸುತ್ತಾ ಸಾಗುತ್ತವೆ. ಈ ಸಂದರ್ಭದ ದೃಶ್ಯ ನೆರೆದವರಲ್ಲಿ ರೋಮಾಂಚನವನ್ನುಂಟು ಮಾಡುತ್ತದೆ. ಮಧ್ಯಾಹ್ನ ಕೆಂಡದ ರಾಶಿಯ ಮೇಲೆ ಕೋಲಗಳು ಬೀಳುವ ಮೇಲೇರಿ ಕಾರ್ಯಕ್ರಮಗಳು ನಡೆಯುತ್ತವೆ. ಆ ನಂತರ ಬೆಳ್ಳಿಯ ಮುಖವಾಡ ಧರಿಸಿ ದೇವಾಲಯದ ಪ್ರಾಂಗಣಕ್ಕೆ ಬಂದು ಭಕ್ತರ ಇಷ್ಟಾರ್ಥಗಳು ನೆರವೇರಲಿ ಎಂದು ಹರಸುತ್ತದೆ. ಈ ಸಂದರ್ಭ ಭಕ್ತರು ತಮ್ಮ ಕಷ್ಟ ಸುಖಗಳನ್ನು ಹೇಳಿಕೊಂಡು ದೇವರಿಂದ ಪರಿಹಾರ ಪಡೆಯುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+