ಕೊಡಗಿನಲ್ಲಿ ಪೊಲೀಸ್ ಸರ್ಪಗಾವಲಲ್ಲಿ ನಡೆಯಲಿದೆ ಟಿಪ್ಪು ಜಯಂತಿ
ಮಡಿಕೇರಿ, ನವೆಂಬರ್ 09 : ಪರ ವಿರೋಧದ ನಡುವೆ ಕೊಡಗಿನಲ್ಲಿ ಜಿಲ್ಲಾಡಳಿತದಿಂದ ಬಿಗಿ ಪೊಲೀಸ್ ಸರ್ಪಗಾವಲಿನಲ್ಲಿ ನವೆಂಬರ್ 11ರಂದು ಟಿಪ್ಪು ಜಯಂತಿಯನ್ನು ಆಚರಿಸಲು ಸಿದ್ಧತೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಈಗಾಗಲೇ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು ನ.11ರ ಬೆಳಗ್ಗಿನ ಸಂಜೆ 6ಗಂಟೆವರೆಗೆ ಜಾರಿಯಲ್ಲಿರಲಿದೆ.
ಕೊಡಗಿನಲ್ಲಿ ಕೆಲವು ಸಂಘಟನೆಗಳು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸುತ್ತಿದ್ದರೆ, ಮತ್ತೆ ಕೆಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಹೀಗಾಗಿ ಒಂದು ರೀತಿಯ ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಆದರೆ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಆಚರಣೆ ನಡೆಯಲಿದ್ದು, ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ.

ಟಿಪ್ಪು ಜಯಂತಿ ಆಚರಣೆ ಸಂದರ್ಭ ಯಾವುದೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವುದು, ಅಂಟಿಸುವುದು ಅಥವಾ ಹಂಚುವುದನ್ನು, ಎಲ್ಲಾ ರೀತಿಯ ಸಂತೆ-ಜಾತ್ರೆ ನಿಷೇಧಿಸಲಾಗಿದೆ. 5 ಜನರಿಗಿಂತ ಮೇಲ್ಪಟ್ಟು ಗುಂಪು ಸೇರದಂತೆ ಆದೇಶಿಸಲಾಗಿದೆ.
ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್, ಎ.ಟಿ.ಎಂ. ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವುದೇ ರೀತಿಯ ಆಯುಧ ಹತ್ಯಾರುಗಳನ್ನು ಹೊಂದಿರುವುದು, ಪ್ರದರ್ಶಿಸುವುದು ಅಥವಾ ಹಿಡಿದುಕೊಂಡು ತಿರುಗಾಡುವಂತಿಲ್ಲ. ಜತೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ನೀಡಿದ್ದಾರೆ.

ಪೊಲೀಸ್ ಸರ್ಪಗಾವಲಲ್ಲಿ ಟಿಪ್ಪು ಜಯಂತಿ
ಜಿಲ್ಲೆಯಾದ್ಯಂತ ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದ್ದು, ಬಿಗಿಬಂದೋಬಸ್ತ್ನಲ್ಲಿ ಟಿಪ್ಪು ಜಯಂತಿ ಯಾವುದೇ ರೀತಿಯ ಅಡೆತಡೆಯಿಲ್ಲದೆ ನಡೆಯುವುದಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಟಿಪ್ಪು ಜಯಂತಿಯ ಬಂದೋಬಸ್ತ್ಗೆ ಜಿಲ್ಲೆ ಹಾಗೂ ಹೊರ ಜಿಲ್ಲೆಯ ಸುಮಾರು 2 ಸಾವಿರ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಲಾಗುತ್ತಿದೆ. ಚಾಮರಾಜನಗರದ ಹೆಚ್ಚುವರಿ ಪೊಲೀಸ್ ಅಧೀಕ್ಷಕರನ್ನು ಜಿಲ್ಲೆಗೆ ನಿಯುಕ್ತಿ ಮಾಡಲಾಗಿದೆ. 6 ಡಿವೈಎಸ್ಪಿ, 20 ಪೊಲೀಸ್ ಇನ್ಸ್ಪೆಕ್ಟರ್, 46 ಸಬ್ ಇನ್ಸ್ಪೆಕ್ಟರ್, 104 ಎಎಸ್ಐ, 300 ಹೋಂ ಗಾರ್ಡ್ಸ್, 850 ಪೊಲೀಸ್ ಸಿಬ್ಬಂದಿಗಳು, 21 ಡಿಎಆರ್ ತುಕಡಿಗಳು, 10 ಕೆಎಸ್ಆರ್ಪಿ ತುಕಡಿಗಳನ್ನು ಹಾಗೂ ರಾಪಿಡ್ ಫೋರ್ಸ್ನನ್ನು ನಿಯೋಜಿಸಲಾಗಿದೆ.
ಜಿಲ್ಲೆಯ ಮೂರು ತಾಲೂಕುಗಳ ಜನನಿಬಿಡ ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ 200 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಕೇರಳ, ವಯನಾಡು, ಕಾಸರಗೋಡು ಹಾಗೂ ಹಾಸನ ಜಿಲ್ಲೆ, ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಗೆ ಹೊಂದಿಕೊಂಡಂತೆ 10 ಕಡೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಹೊರ ಜಿಲ್ಲೆಯಿಂದ ಬರುವ ಮತ್ತು ಹೊರ ಹೋಗುವ ವಾಹನಗಳ ’ನಾಕಾಬಂದಿ’ ನಡೆಸಲಾಗುತ್ತಿದೆ.
ಪ್ರತಿ ಚೆಕ್ ಪೋಸ್ಟ್ಗಳಲ್ಲಿ ತಲಾ 4ರಂತೆ ಒಟ್ಟು 40 ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ಹಗಲು ರಾತ್ರಿ 75 ಪ್ಯಾಟ್ರೋಲಿಂಗ್ ವಾಹನಗಳ ಮೂಲಕ ಗಸ್ತು ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಎಸ್ಪಿ ಡಾ.ಸುಮನ್ ಪನ್ನೇಕರ್ ತಿಳಿಸಿದ್ದಾರೆ.
ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಆಹ್ವಾನಿತ ಅತಿಥಿಗಳು ಮತ್ತು ಆಮಂತ್ರಣ ಪತ್ರಿಕೆ ಇರುವವರಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತಿದೆ.












Click it and Unblock the Notifications