ಟಿಪ್ಪು ಜಯಂತಿಯಂದು ಕೊಡಗು ಬಂದ್ ಗೆ ಕರೆ
ಮಡಿಕೇರಿ, ನವೆಂಬರ್ 8: ಕೊಡಗಿನಲ್ಲಿ ಟಿಪ್ಪು ಜಯಂತಿ(ನ.10 ) ಆಚರಣೆ ಬೇಡ ಎಂಬ ಕೂಗನ್ನು ಬದಿಗೊತ್ತಿ ಪೊಲೀಸ್ ಬಂದೋಬಸ್ತ್ ನಲ್ಲಿ ಆಚರಣೆ ನಡೆಸಲು ಸೂಚಿಸಿದ ಬೆನ್ನಲ್ಲೇ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಅಧ್ಯಕ್ಷರಾದ ಅಭಿಮನ್ಯು ಕುಮಾರ್ ನ.10ರಂದು ಕೊಡಗು ಬಂದ್ ಗೆ ಕರೆ ನೀಡಿದ್ದಾರೆ.
ಪ್ರೆಸ್ ಕ್ಲಬ್ ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಆಚರಣೆಗೆ ತಮ್ಮ ತೀವ್ರ ವಿರೋಧವಿದ್ದು, ಜಿಲ್ಲೆಯ ಜನತೆಗೆ ಬೇಡವಾದ ಟಿಪ್ಪು ಜಯಂತಿಯನ್ನು ರಾಜ್ಯ ಸರಕಾರ ಬಲವಂತವಾಗಿ ಆಚರಿಸಲು ಮುಂದಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ.10 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೊಡಗು ಬಂದ್ ನಡೆಸುವಂತೆ ಕರೆ ನೀಡುತ್ತಿರುವುದಾಗಿ ಹೇಳಿದ ಅವರು, ಅಂದು ಎಲ್ಲ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವಿರೋಧ ವ್ಯಕ್ತಪಡಿಸಬೇಕೆಂದು ಕರೆ ನೀಡಿದ್ದಾರೆ. ಅಲ್ಲದೆ ಬಂದ್ ಗೆ ಚೇಂಬರ್ ಆಫ್ ಕಾಮರ್ಸ್ ಬಳಿ ಹಾಗೂ ಖಾಸಗಿ ಬಸ್ಗಳ ಮಾಲೀಕರು ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಮಕ್ಕಳ ಹಿತದೃಷ್ಟಿಯಿಂದ ಶಾಲಾ, ಕಾಲೇಜುಗಳನ್ನು ಕೂಡ ಬಂದ್ ಮಾಡುವಂತೆಯೂ ಅವರು ಹೇಳಿದ್ದಾರೆ. ಜಿಲ್ಲಾಡಳಿತ ಟಿಪ್ಪು ಜಯಂತಿ ಆಚರಿಸಿದರೂ ಅದಕ್ಕೆ ಪ್ರತಿರೋಧ ಒಡ್ಡುವುದಾಗಿಯೂ ಹೇಳಿದರು.
ಬಜರಂಗ ದಳದ ಜಿಲ್ಲಾ ಸಂಚಾಲಕ ಅಜಿತ್ ಕುಮಾರ್ ಮಾತನಾಡಿ, ಎರಡು ವರ್ಷಗಳ ಹಿಂದೆ ಟಿಪ್ಪು ಜಯಂತಿ ಸಂದರ್ಭ ಕೊಡಗಿನಲ್ಲಿ ದಾಂಧಲೆ ನಡೆಸಿದ ಕೇರಳದ ವ್ಯಕ್ತಿಗಳನ್ನು ಬಂಧಿಸಲಾಗಿದೆಯೇ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಾಗಿದೆಯೇ ಎನ್ನುವ ಬಗ್ಗೆ ಸರಕಾರ ಮಾಹಿತಿ ನೀಡುತ್ತದೆಯೇ ಎಂದು ಪ್ರಶ್ನಿಸಿದ ಅವರು ವಿಶ್ವ ಹಿಂದೂ ಪರಿಷತ್ ಮುಖಂಡ ಕುಟ್ಟಪ್ಪ ಅವರ ಹತ್ಯೆ ಪ್ರಕರಣ ಸೇರಿದಂತೆ ಅಹಿತಕರ ಘಟನೆಗಳ ಬಗ್ಗೆ ಸಿಬಿಐ ಮತ್ತು ಎನ್ಐಎ ತನಿಖೆಗೆ ಒಳಪಡಿಸಬೇಕೆಂದು ಇದೇ ವೇಳೆ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ತಾಲೂಕು ಸಹ ಸಂಚಾಲಕ ಅಜಿತ್, ಬಿಜೆಪಿ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಧನಂಜಯ್, ಪ್ರಮುಖರಾದ ಪಿ.ಜಿ.ಕಮಲ್ ಹಾಗೂ ಧರ್ಮೇಂದ್ರ ಇನ್ನಿತರರು ಉಪಸ್ಥಿತರಿದ್ದರು.












Click it and Unblock the Notifications