'ರಾಜ್ಯದ 30 ಜಿಲ್ಲೆಗಳ ಕೃಷಿ ಪರಿಸ್ಥಿತಿಯ ಸಮಗ್ರ ವರದಿ ತಯಾರು'
ಮಡಿಕೇರಿ, ಮೇ 6: ಲಾಕ್ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರ ಗಮನ ಹರಿಸಿದೆ. ಕೃಷಿ ಇದ್ದಲ್ಲಿ ಮಾತ್ರ ಪ್ರತಿಒಬ್ಬರಿಗೂ ಅನ್ನ, ಆಹಾರ ದೊರೆಯಲು ಸಾಧ್ಯ. ಆ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ತಿಳಿಸಿದ್ದಾರೆ.
ಮಡಿಕೇರಿ ನಗರದ ಜಿ.ಪಂ.ನೂತನ ಭವನದಲ್ಲಿ ಅಧಿಕಾರಿಗಳ ಜತೆ ಸಭೆ ಹಾಗೂ ರೈತರಿಂದ ಸಲಹೆ ಮಾಹಿತಿ ಪಡೆಯುವ ಸಂದರ್ಭ ಮಾತನಾಡಿದ ಸಚಿವರು, ಈಗಾಗಲೇ ರಾಜ್ಯದ 30 ಜಿಲ್ಲೆಗಳಿಗೂ ಭೇಟಿ ನೀಡಿ ಲಾಕ್ಡೌನ್ ಸಂದರ್ಭ ಕೃಷಿ ಚಟುವಟಿಕೆ ರೈತರ ಕುಂದು-ಕೊರತೆಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಈಗಾಗಲೆ 19 ಜಿಲ್ಲೆಗಳ ಕೃಷಿ ಬಗ್ಗೆ ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸಲಾಗಿದೆ. 30 ಜಿಲ್ಲೆಗಳ ಕೃಷಿ ಚಟುವಟಿಕೆಯ ಸಮಗ್ರ ವರದಿಯನ್ನು ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಪ್ರಕಟಿಸಿದರು.
ರೈತರು ಆತ್ಮವಿಶ್ವಾಸದಿಂದ ಬದುಕು ಕಟ್ಟಿಕೊಳ್ಳಬೇಕು. ಯಾವುದೇ ಬ್ಯಾಂಕುಗಳು, ಸಹಕಾರ ಸಂಘಗಳಿಂದ ಸಾಲವನ್ನು ವಸೂಲಿ ಮಾಡುತ್ತಿಲ್ಲ. ರೈತರಿಗೆ ಯಾವುದೇ ರೀತಿಯ ಒತ್ತಡ ಹೇರದಂತೆ ಬ್ಯಾಂಕ್ಗಳಿಗೆ ಸರ್ಕಾರ ಸೂಚಿಸಿದೆ ಎಂದು ಬಿ.ಸಿ ಪಾಟೀಲ್ ಅವರು ತಿಳಿಸಿದರು. ಕೃಷಿ ಚಟುವಟಿಕೆ ನಿರಂತರವಾಗಿ ನಡೆಯಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಅವರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ರೈತರ ಸಂಕಷ್ಟ ನಿವಾರಿಸಲು ಸರ್ಕಾರ ಮುಂದಾಗಿದೆ ಎಂದು ಅವರು ಹೇಳಿದರು.

ರಸಗೊಬ್ಬರ ಮತ್ತು ಬಿತ್ತನೆ ಬೀಜ ಸಾಕಷ್ಟು ದಾಸ್ತಾನು ಇದ್ದು, ಅದನ್ನು ಬೇಡಿಕೆಗೆ ತಕ್ಕಂತೆ ಪೂರೈಸಲಾಗುವುದು. ಟ್ರ್ಯಾಕ್ಟರ್ ಮತ್ತು ಟಿಲ್ಲರ್ನ್ನು ಒದಗಿಸಲಾಗುವುದು. ಟಾರ್ಪಲ್ನ್ನು ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಸಚಿವರು ನುಡಿದರು.
ಕೃಷಿ ಅಧಿಕಾರಿಗಳು ರೈತರ ಪರವಾಗಿ ಹಾಗೂ ರೈತರ ಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು. ಕೃಷಿ ಸಂಬಂಧ ಔಷಧಿಗಳನ್ನು ಹಾರ್ಡ್ವೇರ್ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿರುವುದು ದುರಂತ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು. ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಔಷಧಿಯಲ್ಲಿ ರೈತರಿಗೆ ಮೋಸ ಮಾಡಬಾರದು. ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಸಂಬಂಧ ಅರಣ್ಯ ಸಚಿವರನ್ನು ಸ್ಥಳೀಯ ಶಾಸಕರೊಂದಿಗೆ ಭೇಟಿ ಮಾಡಿ ಮನವಿ ಮಾಡಲಾಗುವುದು. ರೈತರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.












Click it and Unblock the Notifications