ಟಿಪ್ಪು ಜಯಂತಿ: ಕೊಡಗಿನಲ್ಲಿ ಖಾಕಿ ಸರ್ಪಗಾವಲು!
ಮಡಿಕೇರಿ, ನವೆಂಬರ್ 10 : ಕಾನೂನು ಸುವ್ಯವಸ್ಥೆಗಾಗಿ ಮಡಿಕೇರಿ ನಗರದಲ್ಲಿ ಎಡಿಜಿಪಿ ಭಾಸ್ಕರ್ ರಾವ್ ಅವರ ನೇತೃತ್ವದಲ್ಲಿ ವಿವಿಧ ರಾಜ್ಯಗಳ ಪೊಲೀಸ್ ತುಕಡಿಗಳ ಪಥ ಸಂಚಲನ ಪ್ರದರ್ಶನವನ್ನು ಗುರುವಾರ(ನ.9) ಸಂಜೆ ನಡೆಸುವ ಮೂಲಕ ಇಂದಿನ ಟಿಪ್ಪು ಜಯಂತಿಯನ್ನು ಶಾಂತಿಯುತವಾಗಿ ಆಚರಿಸಲಾಗುತ್ತದೆ ಎಂಬ ಸಂದೇಶ ರವಾನಿಸಲಾಗಿದೆ.
ಈಗಾಗಲೇ ಟಿಪ್ಪು ಜಯಂತಿ ಸಂಬಂಧ ಜಿಲ್ಲೆಯಲ್ಲಿ ಪರ-ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕಾನೂನು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಗತ್ಯ ಬಂದೋ ಬಸ್ತ್ ಮಾಡುವ ಮೂಲಕ ನಗರದಲ್ಲಿ ಶಸ್ತ್ರ ಸಜ್ಜಿತ rapid action ಫೋರ್ಸ್, ಕೆ.ಎಸ್.ಆರ್.ಪಿ, ಜಿಲ್ಲಾ ಸಶಸ್ತ್ರ ಪಡೆ, ಸಾಮಾನ್ಯ ಪೊಲೀಸ್ ಪಡೆ, ಮಹಿಳಾ ಪೊಲೀಸ್ ತಂಡ, ಗೃಹ ರಕ್ಷಕ ದಳ ಅಲ್ಲದೆ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯ ಪೊಲೀಸ್ ಪಡೆಯು ಸೇರಿದಂತೆ ನೂರಾರು ಸಂಖ್ಯೆಯ ಪೊಲೀಸ್ ತುಕಡಿಗಳು ನಗರದಲ್ಲಿ ಪಥ ಸಂಚಲನ ನಡೆಸುವ ಮೂಲಕ ಎಲ್ಲೆಡೆ ಸನ್ನದ್ಧಗೊಂಡಿರುವ ಎಚ್ಚರಿಕೆ ಸಂದೇಶವನ್ನು ರವಾನಿಸಲಾಯಿತು.

ಕಾನೂನು ವ್ಯಾಪ್ತಿ ಮೀರಿದರೆ ಕಠಿಣ ಕ್ರಮ
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಅಧಿಕಾರ ಎಲ್ಲರಿಗೂ ಇದ್ದರೂ ಕಾನೂನು ವ್ಯಾಪ್ತಿ ಮೀರಿದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ, ನಿಯಮ ಉಲ್ಲಂಘಿಸುವುದು ಕಂಡು ಬಂದಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಎಡಿಜಿಪಿ ಭಾಸ್ಕರ್ ರಾವ್ ತಿಳಿಸಿದ್ದಾರೆ.
In Pics : ಟಿಪ್ಪು ಸುಲ್ತಾನ್ ಯಾರಂತ ಗೊತ್ತಾ ಪುಟ್ಟಾ?

ಜಿಲ್ಲೆಯಾದ್ಯಂತ ಬಿಗಿ ಬಂದೋಬಸ್ತ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರ ಉಸ್ತುವಾರಿಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಬಂದ್ ಗೆ ಶಾಸಕರ ಬೆಂಬಲ
ಟಿಪ್ಪು ಜಯಂತಿ ಸಂಬಂಧ ಕೊಡಗು ಬಂದ್ಗೆ ಕರೆ ನೀಡಲಾಗಿದ್ದು, ಇದಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚುರಂಜನ್ ಅವರು ಬೆಂಬಲ ಸೂಚಿಸಿದ್ದು, ಎಲ್ಲರೂ ಸಹಕರಿಸುವಂತೆ ಹೇಳಿದ್ದಾರೆ. ಈಗಾಗಲೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿರುವುದರಿಂದ ಸ್ವಯಂ ಪ್ರೇರಿತ ಬಂದ್ ನಡೆಯುವ ಸಾಧ್ಯತೆ ಹೆಚ್ಚಾಗಿದೆ.

ಬಂದ್ ವಿಫಲಗೊಳಿಸಲು ಕರೆ
ಮತ್ತೊಂದೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂದ್ ವಿಫಲಗೊಳಿಸುವಂತೆ ಕರೆ ನೀಡಿದೆ. ಪಿಎಫ್ ಐ ನ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಟಿ.ಅಬೂಬಕರ್ ಮಾತನಾಡಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧವೇ ಹರಿಹಾಯ್ದಿದ್ದಾರೆ. ಜಿಲ್ಲೆಯಲ್ಲಿ ಕಾಟಾಚಾರದ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಹರಿಹಾಯ್ದಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಬಿಗುವಿನ ವಾತಾವರಣವಿದ್ದು, ಎಲ್ಲೆಡೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಇದರ ನಡುವೆಯೇ ಜಿಲ್ಲಾಡಳಿತ ಟಿಪ್ಪು ಜಯಂತಿ ಆಚರಣೆಗೆ ಸರ್ವ ಸಿದ್ಧತೆ ಮಾಡಿಕೊಂಡಿದೆ.












Click it and Unblock the Notifications