ಮಂಡ್ಯ : ಮೊದಲ ದಿನವೇ ಮೂವರು ಅಭ್ಯರ್ಥಿಗಳಿಂದ ನಾಮಪತ್ರ
ಮಂಡ್ಯ, ಮಾರ್ಚ್ 19 : ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಧಿಸೂಚನೆ ಮಂಗಳವಾರ ಪ್ರಕಟವಾಗಿದೆ. ಮೊದಲ ದಿನ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದರು. ಏಪ್ರಿಲ್ 18ರಂದು ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಸಲು ಮೊದಲ ದಿನವಾದ ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ಕೌಡ್ಲೆ ಚನ್ನಪ್ಪ ನಾಮಪತ್ರ ಸಲ್ಲಿಸಿದರು. ಸಂಯುಕ್ತ ಜನತಾ ದಳ ಪಕ್ಷದಿಂದ ಒಬ್ಬರು, ಸಮಾಜವಾದಿ ಪಕ್ಷದಿಂದ ಒಬ್ಬರು ನಾಮಪತ್ರವನ್ನು ಸಲ್ಲಿಸಿದ್ದಾರೆ.
ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಸ್ಪರ್ಧೆಯ ಕಾರಣಕ್ಕೆ ಮಂಡ್ಯ ಕ್ಷೇತ್ರದ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸುಮಲತಾ ಅಂಬರೀಶ್ ಅವರು ಮಾ.20ರ ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.
ಮಾ.26ರ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮಾ.29 ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಏಪ್ರಿಲ್ 18ರಂದು ಮತದಾನ ನಡೆಯಲಿದೆ. ಮೇ.23ರಂದು ಫಲಿತಾಂಶ ಪ್ರಕಟವಾಗಲಿದೆ.











Click it and Unblock the Notifications